ಬೆಳಗಾವಿಯಲ್ಲಿ ಪ್ರತಿಭಟನಾನಿರತ ಕಬ್ಬು ಬೆಳೆಗಾರರು ಮತ್ತು ರೈತ ಸಂಘಟನೆಗಳ ಪರವಾಗಿ ಶುಕ್ರವಾರ ಸತತ 7 ಗಂಟೆಗಳ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿ ಟನ್ ಕಬ್ಬಿಗೆ 3,300 ರೂ. ಕೊಡಲು ನಿರ್ಧರಿಸಿರುವ ಬೆನ್ನಲ್ಲೇ ಈ ಆದೇಶವನ್ನು ಶನಿವಾರದಿಂದಲೇ ಸರ್ಕಾರ ಜಾರಿ ಮಾಡಿದೆ.
2025-26ನೇ ಹಂಗಾಮಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಸಂಬಂಧಿಸಿದ ಸಕ್ಕರೆ ಕಾರ್ಖಾನೆಗಳು ಪಾವತಿಸಬೇಕಾದ ಕನಿಷ್ಠ ಹೆಚ್ಚುವರಿ ಕಬ್ಬು ಬೆಲೆಯನ್ನು ನಿಗದಿಪಡಿಸಲು ಹಾಗೂ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ರಾಜ್ಯ ಸರ್ಕಾರದಿಂದ ಆರ್ಥಿಕ ನೆರವನ್ನು ಒಂದು ಬಾರಿಗೆ ಹಂಚಿಕೆ ಮಾಡಿ ಇಂದು (ನ.8) ಆದೇಶಿಸಿದೆ.
ಕಾರ್ಖಾನೆಗಳು ಒಂದು ಟನ್ಗೆ ಹಿಂದೆ ನಿಗದಿಯಾಗಿದ್ದ ₹3,200ರ ಜತೆಗೆ ಹೆಚ್ಚುವರಿಯಾಗಿ ₹50 ಹಾಗೂ ರಾಜ್ಯ ಸರ್ಕಾರವು ಒಂದು ಅವಧಿಯ ಪ್ರೋತ್ಸಾಹ ಧನವಾಗಿ ₹50 ಪಾವತಿಸಲಿದೆ. ಸಾಗಣೆ ಮತ್ತು ಕಟಾವು ವೆಚ್ಚ ಹೊರತುಪಡಿಸಿ ಶೇ 11.25 ಇಳುವರಿ ಪ್ರಮಾಣ ಇರುವ ಪ್ರತಿ ಟನ್ ಕಬ್ಬಿಗೆ ₹3,896 ಹಾಗೂ ಶೇ 10.5 ಇಳುವರಿ ಪ್ರಮಾಣ ಇರುವ ಕಬ್ಬಿಗೆ ₹3,550 ದರ ಸಿಗಲಿದೆ. ಶೇ.9.5 ಅಥವಾ ಅದಕ್ಕಿಂತ ಕಡಿಮೆ ಇಳುವರಿ ಇದ್ದರೆ ಪ್ರತಿ ಟನ್ ಕಬ್ಬಿಗೆ 3,290 ರೂ. ಸಿಗಲಿದೆ.
ಶೇ.11.25 – 10.25 ಸಕ್ಕರೆ ಇಳುವರಿ ಪ್ರಮಾಣದ ನಡುವೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಿದಂತೆ ಪುತಿ ಶೇ.0.1 ಕಡಿಮೆ ಸಕ್ಕರೆ ಇಳುವರಿಗೆ ಅನುಪಾತಕ್ಕೆ ಅನುಗುಣವಾಗಿ ರೂ.1.00 ಮೊತ್ತವನ್ನು ಪ್ರತಿ ಕ್ವಿಂಟಾಲ್ಗೆ ಪರಿಗಣಿಸುವುದು. ಕಾರ್ಖಾನೆಗಳು ಪ್ರಥಮ ಕಂತಿನ ಮೊತ್ತವನ್ನು ಸಕ್ಕರೆ ನಿಯಂತ್ರಣ ಕಾಯ್ದೆಯಡಿಯಲ್ಲಿ ನಿಗದಿಪಡಿಸಿರುವಂತೆ 14 ದಿನಗಳಲ್ಲಿ ಹಣವನ್ನು ರೈತರಿಗೆ ಸಂದಾಯ ಮಾಡತಕ್ಕದ್ದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಸಕ್ಕರೆ ಶಿವನಾಂದ ಪಾಟೀಲ್ ಅವರು ಪ್ರತಿಭಟನಾ ಸ್ಥಳಕ್ಕೆ ಹೋಗಿ ಸರ್ಕಾರದ ಆದೇಶ ಪ್ರತಿಯನ್ನು ರೈತ ಮುಖಂಡರಿಗೆ ತಲುಪಿಸಿದ್ದಾರೆ. ಸರ್ಕಾರದ ನಿರ್ಧಾರಕ್ಕೆ ಬಹುತೇಕ ರೈತ ನಾಯಕರು ಒಪ್ಪಿಕೊಂಡಿದ್ದು, ಪ್ರತಿಭಟನೆ ಕೈಬಿಡುವುದಾಗಿ ತಿಳಿಸಿದ್ದಾರೆ.





