ಬಸವರಾಜ ಬೊಮ್ಮಾಯಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಪಿಎಸ್ಐ ಪರೀಕ್ಷೆ ಹಗರಣದ ಪ್ರಮುಖ ಆರೋಪಿ ಆರ್ ಡಿ ಪಾಟೀಲ್ (ರುದ್ರಗೌಡ ಪಾಟೀಲ್) ಮೂರು ವಾರಗಳ ಜಾಮೀನು ಪಡೆದುಕೊಂಡಿದ್ದಾರೆ.
“ಮಗಳ ಮದುವೆ ಸಮಾರಂಭವಿದ್ದು, ಧಾರ್ಮಿಕ ವಿಧಿಗಳನ್ನು ಡಿ.4ರೊಳಗೆ ಪೂರೈಸಬೇಕಿದೆ. ಹೀಗಾಗಿ ಮಧ್ಯಂತರ ಜಾಮೀನು ಮಂಜೂರು ಮಾಡಬೇಕು” ಎಂದು ಆರ್ ಡಿ ಪಾಟೀಲ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ನ್ಯಾಯಮೂರ್ತಿ ಕೆ.ವಿನೋದ ಚಂದ್ರನ ಅವರ ಏಕ ಸದಸ್ಯ ನ್ಯಾಯಪೀಠವು ಅರ್ಜಿ ವಿಚಾರಣೆ ನಡೆಸಿ, “ಪ್ರಕರಣದಲ್ಲಿ ಈಗಾಗಲೇ ದೋಷಾರೋಪಣೆ ಪಟ್ಟಿ ಸಲ್ಲಿಕೆಯಾಗಿದೆ. ಪ್ರಕರಣದಲ್ಲಿ ದೊಡ್ಡ ಸಂಖ್ಯೆಯಲ್ಲಿ ಸಾಕ್ಷಿದಾರರಿರುವ ಕಾರಣ ವಿಚಾರಣೆಗೆ ಇನ್ನಷ್ಟು ಕಾಲಾವಕಾಶ ಹಿಡಿಯುವ ಸಾಧ್ಯಗಳಿವೆ. ಹೀಗಾಗಿ ಅರ್ಜಿದಾರರಿಗೆ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡುತ್ತದೆ” ಎಂದು ತಿಳಿಸಿತು.
ಜಾಮೀನು ಅವಧಿ ಮುಗಿಯುತ್ತಿದ್ದಂತೆ ಅರ್ಜಿದಾರರು ವಿಚಾರಣಾ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಸುಪ್ರೀಂಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದೆ.
ಪ್ರಥಮ ದರ್ಜೆ ಸಹಾಯಕ(FDA) ನೇಮಕಾತಿ ಪರೀಕ್ಷಾ ಅಕ್ರಮದಲ್ಲೂ ಆರ್ ಡಿ ಪಾಟೀಲ್ ಮುಖ್ಯ ಆರೋಪಿಯಾಗಿದ್ದಾನೆ. ಹಿಂದೆ ಹೈಕೋರ್ಟ್ ಸಹ ಜಾಮೀನು ನಿರಾಕರಿಸತ್ತು. ಇದನ್ನು ಪ್ರಶ್ನಿಸಿ ಕಳೆದ ಜನವರಿಯಲ್ಲಿ ಸುಪ್ರೀಂ ಕೋರ್ಟ್ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಆಗ ಸುಪ್ರೀಂ ಕೋರ್ಟ್ ಜಾಮೀನು ನೀರಾಕಿರಿಸಿತ್ತು.





