ಕೋಲಾರ ಜಿಲ್ಲೆಯ ಮಾಲೂರು ಶಾಸಕ ನಂಜೇಗೌಡರ ಆಯ್ಕೆ ರದ್ದು ಮಾಡಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆಯನ್ನು ನೀಡಿದೆ. ಹಾಗೆಯೇ ಕ್ಷೇತ್ರದಲ್ಲಿ ಮರು ಮತ ಎಣಿಕೆ ನಡೆಸಿ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
2023ರಲ್ಲಿ ನಡೆದ ಚುನಾವಣೆ ಬಳಿಕ ಮಾಲೂರು ಕ್ಷೇತ್ರದ ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದಲ್ಲಿ ಹೈಕೋರ್ಟ್ ಇತ್ತೀಚೆಗೆ ಮಾಲೂರು ಶಾಸಕ ನಂಜೇಗೌಡರ ಆಯ್ಕೆ ರದ್ದು ಮಾಡಿ ಆದೇಶ ಹೊರಡಿಸಿತ್ತು, ಮರು ಮತ ಎಣಿಕೆಗೂ ಸೂಚಿಸಿತ್ತು. ಈ ಆದೇಶ ಪ್ರಶ್ನಿಸಿ ನಂಜೇಗೌಡರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಇದನ್ನು ಓದಿದ್ದೀರಾ? ಕೋಲಾರ | ಮಾಲೂರು ಶಾಸಕರಿಗೆ ತಲೆನೋವಾದ ಹೈಕೋರ್ಟ್ ಆದೇಶ!
ನಂಜೇಗೌಡರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠವು, ನಂಜೇಗೌಡರ ಆಯ್ಕೆ ರದ್ದು ಆದೇಶಕ್ಕೆ ತಾತ್ಕಾಲಿಕ ತಡೆಯನ್ನು ನೀಡಿದೆ. ಆದರೆ ಮರು ಎಣಿಕೆ ಮಾಡುವಂತೆ ಹೈಕೋರ್ಟ್ ನೀಡಿದ್ದ ನಿರ್ದೇಶನವನ್ನು ಪಾಲಿಸುವಂತೆ ಸೂಚಿಸಿದೆ. ಜೊತೆಗೆ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲು ಚುನಾವಣಾ ಆಯೋಗಕ್ಕೆ (ಇಸಿಐ) ತಿಳಿಸಿದೆ.
ಹಾಗೆಯೇ ನ್ಯಾಯಾಲಯದ ಪೂರ್ವಾನುಮತಿ ಪಡೆಯದೇ ಮರು ಎಣಿಕೆಯ ಫಲಿತಾಂಶವನ್ನು ಪ್ರಕಟಿಸಬಾರದು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ.





