ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ನಮ್ಮ ಮಾದರಿಯನ್ನು ಇಡೀ ದೇಶ ಪಾಲಿಸುತ್ತಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿ, “ಬಡವರ ಬದುಕಿಗಾಗಿ ನಾವು ಗೃಹಲಕ್ಷ್ಮಿ ಯೋಜನೆ ಜಾರಿ ಮಾಡಿದ್ದೇವೆ. ಕಾಂಗ್ರೆಸ್ ಸರ್ಕಾರ ಬಡವರಿಗಾಗಿ ಜಮೀನು, ನಿವೇಶನ, ಪಿಂಚಣಿ, ಮಕ್ಕಳಿಗೆ ಬಿಸಿಯೂಟ ಸೇರಿದಂತೆ ಅನೇಕ ಕಾರ್ಯಕ್ರಮ ಕೊಟ್ಟಿದೆ. ಅದೇ ರೀತಿ ನಾವು ಗ್ಯಾರಂಟಿ ಯೋಜನೆ ನೀಡಿದೆವು. ನಮ್ಮ ಗ್ಯಾರಂಟಿ ಯೋಜನೆಗಳನ್ನು ಪ್ರಧಾನಮಂತ್ರಿಗಳು ಸೇರಿದಂತೆ ಬಿಜೆಪಿಯ ಎಲ್ಲ ನಾಯಕರು ಟೀಕೆ ಮಾಡಿದರು” ಎಂದರು.
“ಕರ್ನಾಟಕದಲ್ಲಿ ಯೋಜನೆ ಜಾರಿಯಾದ ನಂತರ ಬಿಜೆಪಿಯವರೇ ಮಧ್ಯಪ್ರದೇಶ, ಮಹಾರಾಷ್ಟ್ರ, ದೆಹಲಿ, ಹರಿಯಾಣ ರಾಜ್ಯಗಳಲ್ಲಿ ಘೋಷಣೆ ಮಾಡಿದ್ದರು. ಈಗ ಬಿಹಾರದಲ್ಲಿ ಘೋಷಣೆ ಮಾಡಿದ್ದಾರೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ ಸದಾ ದೇಶಕ್ಕೆ ಮಾದರಿ. ಕಾಂಗ್ರೆಸ್ ಮಾದರಿಯನ್ನು ಇಡೀ ದೇಶವೇ ಪಾಲಿಸುತ್ತಿದೆ” ಎಂದು ತಿಳಿಸಿದರು.





