ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಅವಧಿಯನ್ನು ಅ.12ರವರೆಗೆ ವಿಸ್ತರಿಸಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಅ.24ರವರೆಗೂ ಸಮೀಕ್ಷೆ ನಡೆಯಲಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿ ಬಿಟ್ಟು, ರಾಜ್ಯದಾದ್ಯಂತ ಸೆ. 22ರಿಂದ ಸಮೀಕ್ಷೆ ಆರಂಭಗೊಂಡಿದ್ದು, ಮಂಗಳವಾರ (ಅ.7) ಅಂತ್ಯ ಆಗಬೇಕಿತ್ತು. ಸೋಮವಾರದವರೆಗೆ (ಅ. 6) ಶೇಕಡಾ 80.39ರಷ್ಟು ಪೂರ್ಣಗೊಂಡಿದೆ. ಮಂಗಳವಾರ ಕೊನೆಯ ದಿನ ಆಗಿರುವ ಕಾರಣ, ಅವಧಿಯನ್ನು ವಿಸ್ತರಿಸಲಾಗಿದೆ.
ದಸರಾ ರಜೆಯ ಬಳಿಕ ಅ. 8ರಿಂದ ಶಾಲೆಗಳು ಪುನರಾರಂಭಗೊಳ್ಳಲಿವೆ. ಹೀಗಾಗಿ, ಸಮೀಕ್ಷೆಯಲ್ಲಿ ತೊಡಗಿಸಿಕೊಂಡಿರುವ ಶಿಕ್ಷಕರಿಗೆ ಅನುಕೂಲ ಕಲ್ಪಿಸಲು ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಸಮಯವನ್ನು ಮರು ನಿಗದಿಪಡಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ಅವರು ರಾಜ್ಯದ ಎಲ್ಲ ಉಪ ನಿರ್ದೇಶಕರಿಗೆ ಸೂಚಿಸಿದ್ದಾರೆ.
‘ಜಿಬಿಎ ವ್ಯಾಪ್ತಿಯಲ್ಲಿ ಶನಿವಾರದಿಂದ (ಅ. 4) ಸಮೀಕ್ಷೆ ಶುರುವಾಗಿದೆ. ಎರಡು ದಿನಗಳ ಅವಧಿಯಲ್ಲಿ ಗುರಿ ನಿಗದಿಪಡಿಸಿರುವ ಒಟ್ಟು 39.82 ಲಕ್ಷ ಮನೆಗಳ ಪೈಕಿ, 2,60,900 ಮನೆಗಳಲ್ಲಿ ದತ್ತಾಂಶ ಸಂಗ್ರಹಿಸಲಾಗಿದೆ’ ಎಂದು ಹಿಂದುಳಿದ ವರ್ಗಗಳ ಆಯೋಗದ ಮೂಲಗಳು ತಿಳಿಸಿವೆ.
ರಾಜ್ಯದಾದ್ಯಂತ ಆರಂಭದ 3–4 ದಿನ ಮೊಬೈಲ್ ಆ್ಯಪ್ನಲ್ಲಿ ತಾಂತ್ರಿಕ ದೋಷ, ನೆಟ್ವರ್ಕ್ ಸಮಸ್ಯೆ ಹೀಗೆ ನಾನಾ ಕಾರಣಗಳಿಂದ ಆಮೆಗತಿಯಲ್ಲಿ ಸಮೀಕ್ಷೆ ಸಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಂಬಂಧ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನಂತರ ಈ ಕಾರ್ಯ ಚುರುಕು ಪಡೆದಿತ್ತು.
ಶಾಲಾ ಸಮಯ ಬದಲಾವಣೆ
ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಶಿಕ್ಷಕರು ಪಾಲ್ಗೊಳ್ಳುವ ಕಾರಣ ಸರ್ಕಾರಿ ಮತ್ತು ಅನುದಾನಿತ ಶಾಲಾ ತರಗತಿ ಸಮಯವನ್ನು ಮರು ನಿಗದಿಪಡಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಸೋಮಣ್ಣ, ಡಿಕೆಶಿ ಉದ್ಧಟತನ ಅಕ್ಷಮ್ಯ
ರಾಜ್ಯದಲ್ಲಿ ಜಾತಿವಾರು ಸಮೀಕ್ಷೆಯ ಅವಧಿ ವಿಸ್ತರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ವ್ಯಾಪ್ತಿ ಹಾಗೂ ರಾಜ್ಯದ ಇತರೆ ಭಾಗಗಳಲ್ಲಿ ಶಾಲಾ ತರಗತಿಗಳನ್ನು ಬೆಳಿಗ್ಗೆ 8 ಗಂಟೆಯಿಂದ ಅಪರಾಹ್ನ 1 ಗಂಟೆಯವರೆಗೆ ನಿರ್ವಹಿಸುವಂತೆ ಸೂಚಿಸಲಾಗಿದೆ. ನಂತರದ ಅವಧಿಯಲ್ಲಿ ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಶಿಕ್ಷಕರು ಸಮೀಕ್ಷಾ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ.
ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಅಕ್ಟೋಬರ್ 8ರಿಂದ 24ರವರೆಗೆ ಶಾಲಾ ತರಗತಿಗಳನ್ನು ಬೆಳಿಗ್ಗೆ 8 ಗಂಟೆಯಿಂದ ಅಪರಾಹ್ನ 1 ಗಂಟೆಯವರೆಗೆ ಇರಲಿದೆ. ಅಲ್ಲದೆ ಸಮೀಕ್ಷೆಯನ್ನು ಅಕ್ಟೋಬರ್ 24ರೊಳಗೆ ಪೂರ್ಣಗೊಳಿಸಲು ಸೂಚಿಸಲಾಗಿದೆ.
ರಾಜ್ಯತ ಇತರೆ ಭಾಗಗಳಲ್ಲಿ ಅಕ್ಟೋಬರ್ 8ರಿಂದ 12ರವರೆಗೆ ಶಾಲಾ ತರಗತಿ ಬೆಳಿಗ್ಗೆ 8ರಿಂದ ಅಪರಾಹ್ನ 1 ಗಂಟೆಯವರೆಗೆ ಇರಲಿದೆ. ಸಮೀಕ್ಷೆಯನ್ನು ರಜಾ ದಿನಗಳಲ್ಲಿಯೂ ಕೈಗೊಂಡು ಅಕ್ಟೋಬರ್ 12ರೊಳಗೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.
‘ಜನರ ನಿಲುವೇ ನನ್ನ ನಿಲುವು’: ಮುಖ್ಯಮಂತ್ರಿ ಸಿದ್ದರಾಮಯ್ಯ
ಸಮೀಕ್ಷೆಯ ಕುರಿತು ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಜನ ಸ್ವಯಂಪ್ರೇರಣೆಯಿಂದ ತಮ್ಮ ಧರ್ಮವನ್ನು ತಿಳಿಸಿದಂತೆ ಸಮೀಕ್ಷೆ ಮಾಡುವವರು ಬರೆದುಕೊಳ್ಳುತ್ತಾರೆ. ಜನರ ನಿಲುವೇ ನನ್ನ ನಿಲುವು ಕೂಡ ಆಗಿದೆ’ ಎಂದರು.
ಮಂಗಳೂರಿನಲ್ಲಿ ಮಾತನಾಡಿದ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ‘ಶೇ 95ರಷ್ಟು ಶಿಕ್ಷಕರು ತಕರಾರು ತೆಗೆಯದೇ ಸಮೀಕ್ಷೆಗೆ ಸಹಕರಿಸಿದ್ದಾರೆ. ಆ್ಯಪ್ನಲ್ಲಿ ನಾಲ್ಕು-ಐದು ಸಲ ಬದಲಾವಣೆ ಮಾಡಿದ್ದರಿಂದ ಸಮಸ್ಯೆ ಎದುರಾಗಿತ್ತು. ಆ ಸಮಸ್ಯೆಗಳನ್ನು ನಿವಾರಿಸಲಾಗಿದೆ. ಈಗ ಪ್ರತಿ ಕುಟುಂಬದ ಸಮೀಕ್ಷೆ ಕೇವಲ 10 ರಿಂದ 11 ನಿಮಿಷದಲ್ಲಿ ಮುಗಿಯುತ್ತಿದೆ’ ಎಂದು ತಿಳಿಸಿದರು.
‘ಸಮೀಕ್ಷೆಗೆ ಸಹಕರಿಸಬಾರದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ಸಂಸದ ತೇಜಸ್ವಿ ಸೂರ್ಯ ಮೊದಲಾದ ಬಿಜೆಪಿ ಮುಖಂಡರು ಹೇಳಿಕೆ ನೀಡಿದ್ದಾರೆ. ಕೇಂದ್ರ ಸರ್ಕಾರವೂ ಮುಂಬರುವ ಮಾರ್ಚ್ನಲ್ಲಿ ಜಾತಿಗಣತಿ ನಡೆಸಲು ಸಿದ್ಧತೆ ನಡೆಸಿದೆ. ಆಗಲೂ ಬಿಜೆಪಿಯವರು ಇದೇ ರೀತಿ ಅಸಹಕಾರ ನೀಡುತ್ತಾರೆಯೇ. ಆಗ ರಾಜ್ಯ ಸರ್ಕಾರದ ಸಹಕಾರವೂ ಬೇಕಾಗುವುದಿಲ್ಲವೇ’ ಎಂದು ಪ್ರಶ್ನಿಸಿದರು.
‘ಬಿಜೆಪಿಯವರು ಏನೇ ಹೇಳಿದರೂ ಜನರು ಸಮೀಕ್ಷೆಯ ಪರವಾಗಿದ್ದಾರೆ. ಕೆಲ ಅಪಾರ್ಟ್ಮೆಂಟ್ ಸಮುಚ್ಚಯಗಳಲ್ಲಿ ಸಮೀಕ್ಷೆದಾರರನ್ನು ಒಳಗೆ ಬಿಟ್ಟುಕೊಳ್ಳುತ್ತಿಲ್ಲ ಎಂಬ ದೂರುಗಳಿವೆ. ಈ ಅಧಿಕಾರ ಅವರಿಗಿಲ್ಲ. ಈ ರೀತಿ ಮಾಡಿದರೆ ಅವರ ಮೂಲಸೌಕರ್ಯ ಕಡಿತಗೊಳಿಸುವುದಕ್ಕೂ ಅವಕಾಶ ಇದೆ’ ಎಂದರು.





