ಪೋಕ್ಸೊ ಪ್ರಕರಣದಲ್ಲಿ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ ಮತ್ತು ಇತರರ ವಿರುದ್ಧ ಸಂಜ್ಞೇ ಪರಿಗಣಿಸಿರುವುದು ಮತ್ತು ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿರುವ ವಿಚಾರಣಾಧೀನ ನ್ಯಾಯಾಲಯದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಗುರುವಾರ ಎತ್ತಿ ಹಿಡಿದಿದೆ. ಇದರಿಂದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಭಾರೀ ಹಿನ್ನಡೆಯಾಗಿದ್ದು, ವಿಚಾರಣೆ ಎದುರಿಸುವುದು ಅನಿವಾರ್ಯವಾಗಿದೆ.
ಬಿ ಎಸ್ ಯಡಿಯೂರಪ್ಪ ಹಾಗೂ ವೈ ಎಂ ಅರುಣ, ಎಂ ರುದ್ರೇಶ, ಜಿ ಮರಿಸ್ವಾಮಿ ಅವರು ಸಲ್ಲಿಸಿದ್ದ ಎರಡು ಅರ್ಜಿಗಳನ್ನು ನ್ಯಾಯಮೂರ್ತಿ ಎಂ ಐ ಅರುಣ್ ಅವರ ಏಕಸದಸ್ಯ ಪೀಠವು ವಿಲೇವಾರಿ ಮಾಡಿದೆ.
“ಬಿ ಎಸ್ ಯಡಿಯೂರಪ್ಪ ಮತ್ತು ಇತರ ಆರೋಪಿಗಳಿಗೆ ವಿಚಾರಣಾಧೀನ ನಾಯಾಲಯವು ಆಕ್ಷೇಪಿಸಲಾದ ಆದೇಶದ ಮೂಲಕ ಸಂಜ್ಞೇ ಪರಿಗಣಿಸಿ, ಸಮನ್ಸ್ ಜಾರಿ ಮಾಡಿರುವುದನ್ನು ಎತ್ತಿ ಹಿಡಿಯಲಾಗಿದೆ. ವಿಚಾರಣೆಯ ಹಂತದಲ್ಲಿ ಯಡಿಯೂರಪ್ಪ ಅವರ ಅಗತ್ಯವಿಲ್ಲದಿದ್ದರೆ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಒತ್ತಾಯಿಸಬಾರದು. ಬಿಎಸ್ವೈ ಉಪಸ್ಥಿತಿ ಅಗತ್ಯವಿಲ್ಲದಿದ್ದರೆ ಅವರ ಪರವಾಗಿ ಸಲ್ಲಿಕೆ ಮಾಡುವ ವಿನಾಯಿತಿ ಮನವಿಯನ್ನು ಪುರಸ್ಕರಿಸಬೇಕು. ಈ ನ್ಯಾಯಾಲಯ ಮತ್ತು ಸಕ್ಷಮ ನ್ಯಾಯಾಲಯ ಮಾಡಿರುವ ಆದೇಶದಲ್ಲಿ ಉಲ್ಲೇಖಿಸಿರುವ ಅಂಶಗಳ ಪ್ರಭಾವಕ್ಕೆ ಒಳಗಾಗದೇ ತನ್ನ ಮುಂದೆ ಇರುವ ಸಾಕ್ಷಿಗಳನ್ನು ಆಧರಿಸಿ ವಿಚಾರಣಾಧೀನ ನ್ಯಾಯಾಲಯ ಪ್ರಕರಣ ನಿರ್ಧರಿಸಬೇಕು. ಆರೋಪ ಮುಕ್ತಿ ಸೇರಿಯೂ ಯಾವುದೇ ಅರ್ಜಿಗಳನ್ನು ವಿಚಾರಣಾಧೀನ ನ್ಯಾಯಾಲಯದ ಮುಂದೆ ಸಲ್ಲಿಸಲು ಅರ್ಜಿದಾರರು ಸ್ವತಂತ್ರರಾಗಿದ್ದಾರೆ. ಈ ನೆಲೆಯಲ್ಲಿ ಅರ್ಜಿಯನ್ನು ಇತ್ಯರ್ಥಪಡಿಸಲಾಗಿದೆ” ಎಂದು ನ್ಯಾಯಾಲಯ ಹೇಳಿದೆ.
ಈಗಾಗಲೇ ಸಮನ್ವಯ ಪೀಠವು ಆದೇಶ ಮಾಡಿರುವುದರಿಂದ ಅದನ್ನು ಮತ್ತೆ ಪರಿಶೀಲಿಸಲಾಗದು ಎಂದು ಮೌಖಿಕವಾಗಿ ನ್ಯಾಯಾಲಯ ಹೇಳಿದೆ. ಸುದೀರ್ಘ ಕಾಲ ವಾದ-ಪ್ರತಿವಾದ ಆಲಿಸಿ ಅಕ್ಟೋಬರ್ 25ರಂದು ಕಾಯ್ದಿರಿಸಿದ್ದ ಆದೇಶವನ್ನು ಇಂದು ನ್ಯಾಯಾಲಯ ಪ್ರಕಟಿಸಿದ್ದು, ವಿಸ್ತೃತ ಆದೇಶ ಇನ್ನಷ್ಟೇ ಬಿಡುಗಡೆಯಾಬೇಕಿದೆ.





