ಮುಖ್ಯಮಂತ್ರಿ ಬದಲಾವಣೆ, ಸಚಿವ ಸಂಪುಟ ಪುನಾರಚನೆ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನೂತನ ಅಧ್ಯಕ್ಷರ ನೇಮಕ ವಿಚಾರ ಹಿನ್ನೆಲೆಯಲ್ಲಿ ಕಾಂಗ್ರೆಸ್ ಒಳಗಿನ ನವೆಂಬರ್ ಕ್ರಾಂತಿ ಮತ್ತೆ ಮುನ್ನೆಲೆಗೆ ಬಂದಿದೆ. ಇಂದು (ನ.20) ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎರಡೂವರೆ ವರ್ಷ ಪೂರೈಸಿದ್ದು, ಈ ಬೆನ್ನಲ್ಲೆ ಡಿಸಿಎಂ ಡಿ ಕೆ ಶಿವಕುಮಾರ್ ಬಣ ದೆಹಲಿಗೆ ದೌಡಾಯಿಸುತ್ತಿದೆ.
ನ. 21ರಂದು ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಲು ಅವಕಾಶ ಸಿಕ್ಕಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ಸಿನ ಸುಮಾರು 8-10 ಒಕ್ಕಲಿಗ ನಾಯಕರು ದಿಢೀರನೆ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ. ಅವರೊಂದಿಗೆ, ಅಲ್ಪಸಂಖ್ಯಾತ ನಾಯಕರಾದ ಇಕ್ಬಾಲು ಹುಸೇನ್ ಕೂಡ ಸೇರಿಕೊಂಡಿದ್ದಾರೆ.
ಸರ್ಕಾರ ಎರಡೂವರೆ ವರ್ಷ ಪೂರೈಸಿದ ದಿನವೇ ರಾಜ್ಯ ರಾಜಕೀಯದಲ್ಲಿ ಮಿಂಚಿನ ಸಂಚಲನವಾಗಿದೆ. ಇಷ್ಟು ದಿನಗಳ ಕಾಲ ಮೌನವಾಗಿದ್ದ ಒಕ್ಕಲಿಗ ಸಮುದಾಯದ ಕಾಂಗ್ರೆಸ್ ಶಾಸಕರು ಮತ್ತು ಸಚಿವರು ಈಗ ಪವರ್ ಗೇಮ್ ಅಖಾಡಕ್ಕೆ ಇಳಿದಂತೆ ಕಾಣುತ್ತಿದೆ. ಸಿಎಂ ಸ್ಥಾನವನ್ನು ಡಿ.ಕೆ.ಶಿವಕುಮಾರ್ಗೆ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ಅನ್ನು ಆಗ್ರಹಿಸಲು ಒಕ್ಕಲಿಗ ನಾಯಕರೆಲ್ಲ ದೆಹಲಿ ಯಾತ್ರೆ ಕೈಗೊಂಡಿದ್ದಾರೆ ಎನ್ನಲಾಗುತ್ತಿದೆ.
ಕೃಷಿ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಒಕ್ಕಲಿಗ ಸಮುದಾಯದ ಶಾಸಕರು ದೆಹಲಿ ಯಾತ್ರೆ ಹೊರಟಿದ್ದಾರೆ. ಈ ಟೀಮ್ಗೆ ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಯ ದಲಿತ ಶಾಸಕರು ಬೆಂಬಲ ಸೂಚಿಸಿದ್ದಾರೆ. ಚೆಲುವರಾಯಸ್ವಾಮಿ ನೇತೃತ್ವದಲ್ಲಿ ಮಾಗಡಿ ಶಾಸಕ ಬಾಲಕೃಷ್ಣ, ರಾಮನಗರ ಶಾಸಕ ಇಕ್ಬಾಲ್ ಹುಸೇನ್, ಮಂಡ್ಯ ಶಾಸಕ ರವಿಕುಮಾರ್ ಗಣಿಗ, ಅನೇಕಲ್ ಶಾಸಕ ಶಿವಣ್ಣ, ನೆಲಮಂಗಲ ಶಾಸಕ ಶ್ರೀನಿವಾಸ್, ಕುಣಿಗಲ್ ಶಾಸಕ ಎಚ್.ಡಿ. ರಂಗನಾಥ್, ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್, ದಾವಣಗೆರೆ ಜಿಲ್ಲೆಯ ಚನ್ನಗಿರಿ ಶಾಸಕ ಬಸವರಾಜು ಶಿವಗಂಗಾ, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ದೆಹಲಿಯತ್ತ ಯಾತ್ರೆ ಕೈಗೊಂಡಿದ್ದಾರೆ.
ಸಿಎಂ ಬದಲಾವಣೆಗೆ ಬಿಗಿಪಟ್ಟು ಹಿಡಿದಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಮನೆಯಲ್ಲೇ ಕುಳಿತು ಹೊಸ ಆಟಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ಡಿಕೆ ಬ್ರದರ್ಸ್ ಹೈಕಮಾಂಡ್ ಭೇಟಿ ನಂತ್ರ ಇದೀಗ ಡಿಕೆಶಿ ಆಪ್ತ ಬಣದ ಒಕ್ಕಲಿಗ ನಾಯಕರು ಅಖಾಡಕ್ಕೆ ಇಳಿದಿದ್ದಾರೆ.
ಬೆಂಗಳೂರಿನಲ್ಲಿ ಮಾತಾಡಿದ ಮಾಜಿ ಸಂಸದ ಡಿ.ಕೆ ಸುರೇಶ್ ಅವರು ನಯವಾದ ಮಾತಿನಲ್ಲೇ ಸಿಎಂ ಸಿದ್ದರಾಮಯ್ಯ ಅವರನ್ನ ಕುಟುಕಿದ್ದಾರೆ. “ಸಿದ್ದರಾಮಯ್ಯ ಅವರಿಗೂ ಜವಾಬ್ದಾರಿ ಇದೆ. ಕೊಟ್ಟ ಮಾತಿನಂತೆ ನಡೆಯುತ್ತಾರೆ” ಎಂದು ಡಿಕೆ ಸುರೇಶ್ ಮಾರ್ಮಿಕವಾಗಿ ನುಡಿದ್ದಾರೆ. ಒಟ್ಟಾರೆ ಒಕ್ಕಲಿಗ ನಾಯಕರ ದೆಹಲಿ ಭೇಟಿ ಯಾವ ಸಂದೇಶ ಹೊತ್ತು ತರುತ್ತದೆ ಎಂಬುದು ಕುತೂಹಲ ಮೂಡಿಸಿದೆ.





