ಮೇಕೆದಾಟು ಸಮತೋಲನ ಜಲಾಶಯ ನಿರ್ಮಾಣಕ್ಕೆ ಮುಂದಾಗಿರುವ ಕರ್ನಾಟಕ ಸರ್ಕಾರದ ಕ್ರಮ ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ನೇತೃತ್ವದ ಪೀಠ ಗುರುವಾರ ವಜಾಗೊಳಿಸಿದೆ.
ಈ ಬಗ್ಗೆ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ ಕೆ ಶಿವಕುಮಾರ್, ಸುಪ್ರೀಂ ಕೋರ್ಟ್ನಲ್ಲಿ ನಮಗೆ ಜಯ ಸಿಕ್ಕಿದೆ ಎಂಬ ಮಾಹಿತಿ ದೊರಕಿದೆ. ಆದೇಶದ ಪ್ರತಿ ಸಿಕ್ಕಿದ ನಂತರ ಮಾತನಾಡುತ್ತೇನೆ ಎಂದು ಹೇಳಿದರು.
ಕಳೆದ ಏಳು ವರ್ಷಗಳಿಂದ ತಮಿಳುನಾಡು ಈ ಯೋಜನೆಗೆ ಅಡ್ಡಗಾಲು ಹಾಕುತ್ತಾ ಬಂದಿತ್ತಲ್ಲದೆ, ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು. ಇದೀಗ ಆ ಅರ್ಜಿಯನ್ನು ವಜಾಗೊಳಿಸಿದ ಹಿನ್ನಲೆಯಲ್ಲಿ ಯೋಜನೆಗೆ ಮುಂದುವರೆಯಲು ಕರ್ನಾಟಕಕ್ಕೆ ಹಸಿರು ನಿಶಾನೆ ಸಿಕ್ಕಂತಾಗಿದೆ.
ಮೇಕೆದಾಟು ಯೋಜನೆ ಪ್ರಶ್ನಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಮೇಕೆದಾಟು ಯೋಜನೆಯು ಇನ್ನೂ ಆರಂಭಿಕ ಹಂತದಲ್ಲಿದ್ದು, ಯಾವುದೇ ನಿರ್ಮಾಣ ಕಾರ್ಯ ಪ್ರಾರಂಭವಾಗಿಲ್ಲ. ಈ ಯೋಜನೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕೇಂದ್ರ ಜಲ ಆಯೋಗದಂತಹ ತಜ್ಞ ಸಂಸ್ಥೆಗಳ ಪರಿಶೀಲನೆಯಲ್ಲಿದೆ. ಹೀಗಾಗಿ ಮಧ್ಯಪ್ರವೇಶ ಮಾಡಲ್ಲ ಎಂದು ಹೇಳಿದೆ





