ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣದ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವ ನಾಗೇಂದ್ರ ಅವರ ಹೆಸರು ಹೇಳುವಂತೆ ಒತ್ತಡ ಹಾಕುತ್ತಿದ್ದಾರೆಂಬ ಆರೋಪದ ಮೇಲೆ ಇಡಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸದ್ಯ, ಈ ಎಫ್ಐಆರ್ಗೆ ಹೈಕೋರ್ಟ್ ತಡೆ ನೀಡಿದೆ.
ಬೆಂಗಳೂರಿನ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಕಲ್ಲೇಶ್ ಬಿ ಎಂಬವರು ಸೋಮವಾರ ದೂರು ದಾಖಲಿಸಿದ್ದರು. ತಮ್ಮ ದೂರಿನಲ್ಲಿ, “ಎಂ.ಜಿ.ರೋಡ್ ಬ್ಯಾಂಕ್ ಖಾತೆಗೆ ಅನುದಾನ ಜಮಾಮಾಡಲು ನಾಗೇಂದ್ರ, ಎಫ್ಡಿ ಇಲಾಖೆಯಿಂದ ಸೂಚನೆ ಇತ್ತೆಂದು ಒಪ್ಪಿಕೊಳ್ಳಬೇಕು. ಮುಖ್ಯಮಂತ್ರಿ ಮತ್ತು ನಾಗೇಂದ್ರ ನಿರ್ದೇಶನದಂತೆ ಖಾತೆಗೆ ಹಣವನ್ನು ವರ್ಗಾಯಿಸಿದ್ದೇನೆಂದು ಬರೆದುಕೊಡಬೇಕೆಂದು ಇಡಿ ಅಧಿಕಾರಿಗಳು ಒತ್ತಡ ಹೇರಿದ್ದರು” ಎಂದು ಆರೋಪಿಸಿದ್ದರು. ಅವರ ದೂರಿನ ಆಧಾರದ ಮೇಲೆ ಇಡಿ ಅಧಿಕಾರಿಗಳಾದ ಕಣ್ಣನ್ ಮತ್ತು ಮಿತ್ತಲ್ ಎಂಬವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಆದರೆ, ಇಡಿ ಅಧಿಕಾರಿಗಳು ತಮ್ಮ ವಿರುದ್ಧ ಎಫ್ಐಆರ್ ದಾಖಲಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ, ಅವರ ವಿರುದ್ಧ ಎಫ್ಐಆರ್ಗೆ ಹೈಕೋರ್ಟ್ ತಡೆ ನೀಡಿದೆ.
ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದ ಇಡಿ ಅಧಿಕಾರಿಗಳು, “ಹಗರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯನ್ನು ಬುಡಮೇಲು ಮಾಡುವ ಉದ್ದೇಶದಿಂದ ಎಫ್ಐಆರ್ ದಾಖಲಿಸಲಾಗಿದೆ. ಯಾವುದೇ ಪ್ರಾಥಮಿಕ ವಿಚಾರಣೆಯಿಲ್ಲದೆ ಕರ್ನಾಟಕ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಹೀಗಾಗಿ, ಎಫ್ಐಆರ್ಗೆ ತಡೆ ನೀಡಬೇಕು” ಎಂದು ಮನವಿ ಮಾಡಿದ್ದರು.




