ಅತ್ಯಾಚಾರ ಸಂತ್ರಸ್ತೆಯನ್ನು ಅಪಹರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರ ವಿರುದ್ಧ ದೋಷಾರೋಪ ಹೊರಿಸದಂತೆ ಈ ಹಿಂದೆ ನೀಡಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕರ್ನಾಟಕ ಹೈಕೋರ್ಟ್ ಇಂದು(ಫೆ.5) ತೆರವುಗೊಳಿಸಿದೆ.
ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಎಚ್ ಡಿ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಡೆಸಿತು. ಈ ಸಂದರ್ಭದಲ್ಲಿ ನಡೆದ ಬೆಳವಣಿಗೆಗಳು ರೇವಣ್ಣ ಅವರಿಗೆ ಕಾನೂನು ಸಂಕಷ್ಟವನ್ನು ಹೆಚ್ಚಿಸುವ ಸೂಚನೆ ನೀಡಿವೆ.
ವಿಚಾರಣೆ ಆರಂಭವಾಗುತ್ತಿದ್ದಂತೆಯೇ, ರೇವಣ್ಣ ಪರ ವಕೀಲರು ವಾದ ಮಂಡನೆಗೆ ಕಾಲಾವಕಾಶ ಕೋರಿದರು. “ಹಿರಿಯ ವಕೀಲರು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರಾಗಬೇಕಿರುವುದರಿಂದ ವಿಚಾರಣೆಯನ್ನು ಮುಂದೂಡಬೇಕು,” ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಇಸ್ರೇಲ್ ಸಂಗದಲ್ಲಿ ‘ಶಿಕಾರಿ’- ಪ್ಯಾಲೆಸ್ತೀನ್ ಜೊತೆ ‘ಪರಾರಿ’; ಕಪಟ ನಾಟಕವಲ್ಲವೇ ಮೋದೀಜಿ?
ಈ ಮನವಿಯಿಂದ ತೀವ್ರ ಅಸಮಾಧಾನಗೊಂಡ ಹೈಕೋರ್ಟ್, ರೇವಣ್ಣ ಪರ ವಕೀಲರನ್ನು ತರಾಟೆಗೆ ತೆಗೆದುಕೊಂಡಿತು. “ಇದು ಸಾಂವಿಧಾನಿಕ ನ್ಯಾಯಾಲಯ. ಮ್ಯಾಜಿಸ್ಟ್ರೇಟ್ ಕೋರ್ಟ್ ನೆಪವೊಡ್ಡಿ ಇಲ್ಲಿನ ವಿಚಾರಣೆ ಮುಂದೂಡಲು ಕೋರುವುದು ಸರಿಯಲ್ಲ. ಈ ನ್ಯಾಯಾಲಯದ ಅಧಿಕಾರವನ್ನು ಕುಗ್ಗಿಸಬೇಡಿ. ಇದು ಅಹಂನ ವಿಚಾರವಲ್ಲ, ಆದರೆ ನ್ಯಾಯಾಲಯದ ಪ್ರಕ್ರಿಯೆ ಬಗ್ಗೆ ನಿಮಗೆ ತಿಳಿದಿರಬೇಕು,” ಎಂದು ನ್ಯಾಯಪೀಠ ಕಟುವಾಗಿ ನುಡಿಯಿತು.
ವಾದ ಮಂಡನೆಗೆ ಅವಕಾಶ ನೀಡಿ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿದ ಹೈಕೋರ್ಟ್, ಇದೇ ವೇಳೆ ಮಹತ್ವದ ಆದೇಶವೊಂದನ್ನು ನೀಡಿತು. ರೇವಣ್ಣ ಅವರ ವಿರುದ್ಧ ಕೆಳಹಂತದ ನ್ಯಾಯಾಲಯದಲ್ಲಿ ದೋಷಾರೋಪ ಹೊರಿಸದಂತೆ ನೀಡಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ತೆರವುಗೊಳಿಸಿತು. ಇದರಿಂದಾಗಿ ತನಿಖಾ ಸಂಸ್ಥೆಗೆ ಮುಂದಿನ ಕಾನೂನು ಪ್ರಕ್ರಿಯೆಗಳನ್ನು ಕೈಗೊಳ್ಳಲು ಹಾದಿ ಸುಗಮವಾದಂತಾಗಿದೆ.





