ಸಾಲು ಮರದ ತಿಮ್ಮಕ್ಕ ಅವರು ತಮ್ಮ ಕೊನೆ ಆಸೆಯ ಪತ್ರ ಕೊಟ್ಟಿದ್ದಾರೆ. ಬೇಲೂರಿನಲ್ಲಿ ತಿಮ್ಮಕ್ಕ ವಸ್ತು ಸಂಗ್ರಹಾಲಯವನ್ನು ಮಾಡಬೇಕು ಎಂದು ಹೇಳಿದ್ದು, ಈ ಬಗ್ಗೆ ಸರ್ಕಾರ ಪರಿಶೀಲಿಸಿ ಪರಿಗಣಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ಅಂತಿಮ ದರ್ಶನ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು. ತಿಮ್ಮಕ್ಕ ಅವರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಸಾವಿನಿಂದ ಉಂಟಾದ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಕೊಡಲಿ ಎಂದು ಪ್ರಾರ್ಥನೆ ಮಾಡುವುದಾಗಿ ಹೇಳಿದರು.
ತಿಮ್ಮಕ್ಕ ಅವರ ಅಂತ್ಯಕ್ರಿಯೆಯ ಬಗ್ಗೆ ಕುಟುಂಬದವರು ಎರಡು ಮೂರು ಸ್ಥಳಗಳನ್ನು ಗೊತ್ತು ಮಾಡಿದ್ದು, ಅಂತ್ಯಕ್ರಿಯೆ ಎಲ್ಲಿ ಮಾಡಬೇಕೆಂದು ಸದ್ಯದಲ್ಲಿಯೇ ನಿರ್ಧರಿಸಲಾಗುವುದು ಎಂದರು.
114 ವರ್ಷಗಳ ಕಾಲ ಬದುಕಿದ ಸಾಲು ಮರದ ತಿಮ್ಮಕ್ಕನವರು ಇಂದು ದೈವಾಧೀನರಾಗಿದ್ದಾರೆ. ಅವರು ಹುಟ್ಟೂರು ಮಾಗಡಿ ತಾಲ್ಲೂಕು ಹುಲಿಕಲ್ ಗ್ರಾಮ ಜನಿಸಿದರು. ಮಕ್ಕಳಿಲ್ಲದ ತಿಮ್ಮಕ್ಕನವರು ಮರಗಿಡಗಳನ್ನೇ ತಮ್ಮ ಮಕ್ಕಳಂತೆ ಸಾಕುತ್ತಿದ್ದರು. ಅವರು ನೆಟ್ಟಿರುವ ಮರಗಳು ಇವತ್ತು ಹೆಮ್ಮರವಾಗಿ ಬೆಳೆದು ನಿಂತಿದೆ. ಪರಿಸರವಾದಿಯಾಗಿದ್ದ ತಿಮ್ಮಕ್ಕನವರ ಸೇವೆಯನ್ನು ಪರಿಗಣಿಸಿ , ಕೇಂದ್ರಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು ಎಂದು ತಿಳಿಸಿದರು.





