ಸ್ವಯಂಕೃತ ಅಪರಾಧದಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಿದ್ದರೆ ಸರ್ಕಾರ ರಚನೆಗೆ ನಾವು ಪ್ರಯತ್ನಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದರು.
ಚಿಕ್ಕಬಳ್ಳಾಪುರ ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಬಿಜೆಪಿ ವರಿಷ್ಠರು ನೀಡುವ ಆದೇಶ ಮೇಲೆ ನಮ್ಮ ತೀರ್ಮಾನ ನಿಂತಿದೆ. ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಆಗಬಾರದು ಎಂಬುದು ನಮ್ಮ ಬಯಕೆ” ಎಂದು ತಿಳಿಸಿದರು.
“ಕಾಂಗ್ರೆಸ್ನೊಳಗಿನ ಈಗಿನ ಬೆಳವಣಿಗೆಗಳು ಹೀಗೆ ಮುಂದುವರಿದು ಸರ್ಕಾರ ಬಿದ್ದಾಗ ಏನಾದರೂ ಮಾಡಿ ಎಂದು ಪಕ್ಷದ ವರಿಷ್ಠರು ಸೂಚನೆ ನೀಡಿದರೆ ನಾವು ಸರ್ಕಾರ ರಚನೆಗೆ ಸಿದ್ಧರಿದ್ದೇವೆ” ಎಂದರು.
“ಕಾಂಗ್ರೆಸ್ ಮುಳುಗುತ್ತಿರುವ ಹಡಗು. ದೇಶದಲ್ಲಿ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇದೆ. ಇದರಲ್ಲಿ ಎರಡು ಸಣ್ಣಪುಟ್ಟ ರಾಜ್ಯಗಳಿವೆ” ಎಂದು ಹೇಳಿದರು.
“ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಸತ್ತು ಹೋಗಿದೆ. ರಾಜ್ಯದ ಜನರು ಕಂಗಾಲಾಗಿದ್ದಾರೆ. ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯುವುದು ಸೇರಿದಂತೆ ರೈತರ ಹಲವು ಸಮಸ್ಯೆಗಳಿವೆ. ಅವುಗಳ ಪರಿಹಾರಕ್ಕೆ ಸರ್ಕಾರ ಮುಂದಾಗುತ್ತಿಲ್ಲ. ಆದ್ದರಿಂದ ಈ ಸರ್ಕಾರ ಇರಬಾರದು” ಎಂದರು.





