ಬುಧವಾರ ದಿನ ಪ್ರಶ್ನೋತ್ತರ ಮುಗಿದ ನಂತರ ಇಡೀ ದಿನದ ಕಲಾಪವನ್ನು ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಗೆ ಮೀಸಲಿಡಲಾಗುವುದು ಎಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.
ಸುವರ್ಣಸೌಧದ ಎರಡನೇ ಮಹಡಿಯ ಕೊಠಡಿ ಸಂಖ್ಯೆ 238ರಲ್ಲಿ ಡಿಸೆಂಬರ್ 8ರಂದು ಪತ್ರಿಕಾಗೋಷ್ಠಿ ನಡೆಸಿ ಅವರು ಮಾಹಿತಿ ನೀಡಿ, “ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಬಗ್ಗೆ 145ನೇ ಅಧಿವೇಶನದಲ್ಲಿ 6 ಗಂಟೆ 35 ನಿಮಿಷ ಚರ್ಚೆಯಾಗಿದ್ದು, 19 ಜನ ಪರಿಷತ್ ಶಾಸಕರು ಮಾತನಾಡಿದ್ದಾರೆ. 151ನೇ ಅಧಿವೇಶನದಲ್ಲಿ 1 ಗಂಟೆ 40 ನಿಮಿಷ ಚರ್ಚೆಯಾಗಿದ್ದು 6 ಜನ ಪರಿಷತ್ ಶಾಸಕರು ಮಾತನಾಡಿದ್ದಾರೆ. 154ನೇ ಅಧಿವೇಶನದಲ್ಲಿ 5 ಗಂಟೆ 12 ನಿಮಿಷ ಚರ್ಚೆಯಾಗಿದ್ದು, 11 ಜನ ಪರಿಷತ್ ಶಾಸಕರು ಮಾತನಾಡಿದ್ದಾರೆ” ಎಂದರು.
“ಅದೇ ರೀತಿ ಈ ಬಾರಿಯ ಅಧಿವೇಶನದಲ್ಲಿ ಸಹ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಗೆ ವಿಶೇಷ ಅವಕಾಶ ಕಲ್ಪಿಸಲಾಗುವುದು. ಕಲಾಪದಲ್ಲಿ ಕೃಷ್ಣಮೇಲ್ದಂಡೆ ಯೋಜನೆ, ಮಹಾದಾಯಿ, ಕಳಸಾ ಬಂಡೂರಿ ಯೋಜನೆಗಳ ಅನುಷ್ಠಾನದ ಬಗ್ಗೆ, ಅರಣ್ಯಭೂಮಿ ಅತೀಕ್ರಮಣ, ಸಂತ್ರಸ್ಥರ ಸಮಸ್ಯೆ ಹಾಗೂ ಪರಿಹಾರೋಪಾಯಗಳು., ಉತ್ತರ ಕರ್ನಾಟಕ ಭಾಗದ ರೈತರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಪರಿಹಾರಗಳು ಮತ್ತು ಉದ್ಯೋಗ ಸೃಷ್ಠಿಗೆ ಕ್ರಿಯಾಯೋಜನೆ ವಿಷಯಗಳ ಮೇಲೆ ಚರ್ಚೆಗೆ ಅವಕಾಶ ನೀಡಲಾಗುವುದು” ಎಂದು ಹೇಳಿದರು.
“157ನೇ ಪರಿಷತ್ ಅಧಿವೇಶನದಲ್ಲಿ 10 ದಿನಗಳನ್ನು ಉಪವೇಶನದ ದಿನಗಳೆಂದು ನಿಗದಿಪಡಿಸಲಾಗಿದೆ. ಪ್ರಸಕ್ತ ಅಧಿವೇಶನಕ್ಕೆ ಇದುವರೆಗೆ ಒಟ್ಟು 1649 ಪ್ರಶ್ನೆಗಳನ್ನು ಸ್ವೀಕರಿಸಿದ್ದು, ಅವುಗಳಲ್ಲಿ 965 ಚುಕ್ಕೆ ಗುರುತಿನ ಹಾಗೂ 684 ಚುಕ್ಕೆ ರಹಿತ ಪ್ರಶ್ನೆಗಳಾಗಿವೆ. ನಿಯಮ 72ರಡಿ 112 ಸೂಚನೆಗಳನ್ನು ಸ್ವೀಕರಿಸಲಾಗಿದೆ. ನಿಯಮ 330 ರಡಿ ಬಂದಂತಹ 84 ಸೂಚನೆಗಳನ್ನು ಸ್ವೀಕರಿಸಲಾಗಿದೆ” ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಕಾರ್ಯದರ್ಶಿ ಕೆ ಆರ್ ಮಹಾಲಕ್ಷ್ಮಿ, ಅಪರ ಕಾರ್ಯದರ್ಶಿ ನಿರ್ಮಲಾ ಎಸ್ ಹಾಗೂ ಸಚಿವಾಲಯದ ಅಧಿಕಾರಿಗಳು ಇದ್ದರು.





