ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಾರ್ಚ್ 6) 2026-27ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, 2026-27ನೇ ಸಾಲಿನಲ್ಲಿ ಮಕ್ಕಳ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 63,135 ಕೋಟಿ ರೂ. ಮತ್ತು ಮಹಿಳಾ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 94,663 ಕೋಟಿ ರೂ. ಒದಗಿಸಲಾಗಿದೆ.
ಮಾಜಿ ದೇವದಾಸಿಯರು, ಲಿಂಗತ್ವ ಅಲ್ಪಸಂಖ್ಯಾತರು, ಚೇತನ ಹಾಗೂ ಧನಶ್ರೀ ಯೋಜನೆಯ ಫಲಾನುಭವಿಗಳಿಗೆ ಆದಾಯೋತ್ಪನ್ನ ಚಟುವಟಿಕೆಗಳಿಗಾಗಿ ಸದ್ಯ ನೀಡಲಾಗುತ್ತಿರುವ 30,000 ರೂ.ಗಳ ಪ್ರೋತ್ಸಾಹಧನವನ್ನು 45,000 ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಘೋಷಿಸಿದ್ದಾರೆ.
ಇದನ್ನು ಓದಿದ್ದೀರಾ? ರಾಜ್ಯ ಬಜೆಟ್ | ಮಾರುಕಟ್ಟೆ ನಿರ್ಮಾಣ, ಮತ್ಸ್ಯದರ್ಶಿನಿ ಸ್ಥಾಪನೆ: ಮೀನುಗಾರಿಕೆ ಇಲಾಖೆಗೆ ಏನಿದೆ?
ಇನ್ನು ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 1,39,844 ಅಂಗನವಾಡಿ ಕಾರ್ಯಕರ್ತೆಯರು/ ಸಹಾಯಕಿಯರಿಗೆ ಹೆಚ್ಚುವರಿಯಾಗಿ ಒಂದು ಜೊತೆ ಸಮವಸ್ತ್ರವನ್ನು ವಿತರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ದಕ್ಕಿದ್ದಿಷ್ಟು
- ಮಾಜಿ ದೇವದಾಸಿಯರ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು, ಪುನರ್ವಸತಿ ಕಲ್ಪಿಸಲು ಮತ್ತು ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ಹಿನ್ನೆಲೆಯಲ್ಲಿ ಅವರ ನಿಖರ ಮಾಹಿತಿ ಸಂಗ್ರಹಿಸುವುದಕ್ಕಾಗಿ ಸಮೀಕ್ಷೆಯನ್ನು ಕೈಗೊಳ್ಳಲಾಗಿದೆ. ಮಾಜಿ ದೇವದಾಸಿಯರ ಮಕ್ಕಳಿಗೆ ಉನ್ನತ ಶಿಕ್ಷಣದ ಅವಕಾಶಗಳನ್ನು ವಿಸ್ತರಿಸುವುದರ ಜೊತೆಗೆ ಹೆಣ್ಣುಮಕ್ಕಳಿಗೆ ಸ್ವಯಂ ಉದ್ಯೋಗ ಹಾಗೂ ವೈಯಕ್ತಿಕ ಆದಾಯೋತ್ಪನ್ನ ಚಟುವಟಿಕೆಗಳನ್ನು ಕೈಗೊಳ್ಳಲು ಅಗತ್ಯ ಆರ್ಥಿಕ ಸಹಾಯ ನೀಡುವ ಕಾರ್ಯಕ್ರಮವನ್ನು ರೂಪಿಸಿ ಜಾರಿಗೆ ತರಲು ಐದು ಕೋಟಿ ರೂ.ಗಳನ್ನು ಮೀಸಲಿಡಲಾಗುವುದು.
- ಮಾದಕ ವ್ಯಸನಕ್ಕೆ ಒಳಗಾದ 18 ವರ್ಷದೊಳಗಿನ ಮಕ್ಕಳಿಗಾಗಿ ಪ್ರಾಯೋಗಿಕವಾಗಿ ಬೆಂಗಳೂರಿನ ನಿಮ್ಹಾನ್ಸ್ ಹಾಗೂ ಧಾರವಾಡದ ಡಿಮ್ಹಾನ್ಸ್ ಸಂಸ್ಥೆಗಳ ಸಹಯೋಗದೊಂದಿಗೆ ʻಮಾದಕ ವ್ಯಸನಿಗಳ ಪುನರ್ವಸತಿ ಕೇಂದ್ರʼಗಳನ್ನು ಪ್ರಾರಂಭಿಸಲಾಗುವುದು.
- ಅಂಗನವಾಡಿ ಕೇಂದ್ರಗಳ ಸಮಗ್ರ ಸುಧಾರಣೆಗೆ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುವುದು.
- ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಪ್ರಾಥಮಿಕ ಬಾಲ್ಯ ಆರೈಕೆ ಮತ್ತು ಶಿಕ್ಷಣವನ್ನು (ECCE) ಬಲಪಡಿಸಲು ಈ ಭಾಗದ ಜಿಲ್ಲೆಗಳಲ್ಲಿ ಲಭ್ಯವಿರುವ 1,668 ನಿವೇಶನಗಳಲ್ಲಿ ಅಂಗನವಾಡಿ ಕಟ್ಟಡಗಳ ನಿರ್ಮಾಣವನ್ನು 200 ಕೋಟಿ ರೂ.ಗಳ ವೆಚ್ಚದಲ್ಲಿ KKRDB ಅನುದಾನದಿಂದ ಕೈಗೊಳ್ಳಲಾಗುವುದು.
- 2026–27ನೇ ಸಾಲಿನಲ್ಲಿ ಜಿಲ್ಲಾ ಮಟ್ಟದಲ್ಲಿ ಹೆಚ್ಚುವರಿಯಾಗಿ 20 ಹೊಸ ಶಿಶುಪಾಲನಾ ಕೇಂದ್ರಗಳನ್ನು ಸ್ಥಾಪಿಸುವ ಉದ್ದೇಶದಿಂದ ಒಂದು ಕೋಟಿ ರೂ. ಅನುದಾನ ಒದಗಿಸಲಾಗುವುದು.
- ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಗರ್ಭಿಣಿ ಮತ್ತು ಬಾಣಂತಿಯರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಮಧ್ಯಾಹ್ನದ ಬಿಸಿಯೂಟ ನೀಡುವ ಮಾತೃಪೂರ್ಣ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಈ ಯೋಜನೆಯು ಅವರಲ್ಲಿ ರಕ್ತಹೀನತೆ ಮತ್ತು ಅಪೌಷ್ಟಿಕತೆ ತಡೆಗಟ್ಟಲು ಸಹಕಾರಿಯಾಗಿತ್ತು. ತದನಂತರದಲ್ಲಿ, ಮಧ್ಯಾಹ್ನದ ಬಿಸಿಯೂಟದ ಬದಲಾಗಿ Take Home Ration ಗೆ ಒತ್ತು ನೀಡಲಾಗಿ, ಯೋಜನೆಯ ಮೂಲ ಉದ್ದೇಶ ಹಳಿತಪ್ಪಿದಂತಾಗಿರುತ್ತದೆ. ಇದನ್ನು ಮನಗಂಡು ಎಲ್ಲಾ ಫಲಾನುಭವಿಗಳಿಗೂ ಹಿಂದಿನಂತೆ ಅಂಗನವಾಡಿ ಕೇಂದ್ರಗಳಲ್ಲಿಯೇ ಪ್ರತಿದಿನ ಮಧ್ಯಾಹ್ನದ ಬಿಸಿಯೂಟ ನೀಡುವ ಯೋಜನೆಯನ್ನು ಮರುಸ್ಥಾಪಿಸಲಾಗುವುದು.
- ಗೃಹಲಕ್ಷ್ಮಿ ಯೋಜನೆಯಡಿ ಇಲ್ಲಿಯವರೆಗೂ ಎಲ್ಲಾ ಅರ್ಹ ಫಲಾನುಭವಿಗಳಿಗೆ ಒಟ್ಟು 62,345 ಕೋಟಿ ರೂ.ಗಳ ವೆಚ್ಚ ಭರಿಸಲಾಗಿದೆ. ಈ ಯೋಜನೆಯಡಿ 1.24 ಕೋಟಿ ಫಲಾನುಭವಿಗಳಿಗೆ ಯಶಸ್ವಿಯಾಗಿ ಧನಸಹಾಯ ಪಾವತಿಸಲಾಗುತ್ತಿದೆ. ಪ್ರಸಕ್ತ ವರ್ಷದಲ್ಲಿ ಈ ಯೋಜನೆಯಡಿ 28,608 ಕೋಟಿ ರೂ.ಗಳನ್ನು ಮೀಸಲಿರಿಸಿದೆ.
- ಮಹಿಳೆಯರು ಹಾಗೂ ಮಕ್ಕಳಿಗೆ ಸಂಕಷ್ಟದ ಸಂದರ್ಭದಲ್ಲಿ ತಕ್ಷಣದ ರಕ್ಷಣೆ ನೀಡುವ ಉದ್ದೇಶದಿಂದ ʻಅಕ್ಕಪಡೆ ಯೋಜನೆʼಯನ್ನು ಗೃಹ ಇಲಾಖೆಯ ಸಹಯೋಗದೊಂದಿಗೆ ಎಲ್ಲಾ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ.





