ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್ಸಿ) ನಡೆಸಿದ 2025ನೇ ಸಾಲಿನ ನಾಗರಿಕ ಸೇವಾ (ಸಿವಿಲ್ ಸರ್ವಿಸ್) ಪರೀಕ್ಷೆಯ ಅಂತಿಮ ಫಲಿತಾಂಶ ಶುಕ್ರವಾರ ಪ್ರಕಟಗೊಂಡಿದ್ದು, ಯಾದಗಿರಿ ಜಿಲ್ಲೆಯ ನಾಲ್ವರು ಅಭ್ಯರ್ಥಿಗಳು ಅಖಿಲ ಭಾರತ ಮಟ್ಟದಲ್ಲಿ ತೇರ್ಗಡೆಯಾಗಿ ಜಿಲ್ಲೆಯ ಹೆಮ್ಮೆ ಹೆಚ್ಚಿಸಿದ್ದಾರೆ.
ಯಾದಗಿರಿಯ ಸಂದೀಪ್ ಬಾಡದ್ ಅಖಿಲ ಭಾರತ ಮಟ್ಟದಲ್ಲಿ 82ನೇ ರ್ಯಾಂಕ್ ಪಡೆದು ರಾಜ್ಯ ಮಟ್ಟದಲ್ಲಿ 2ನೇ ಸ್ಥಾನ ಗಳಿಸಿರುವುದು ವಿಶೇಷ ಸಾಧನೆಯಾಗಿದೆ. ಇದರ ಜೊತೆಗೆ ವೈದ್ಯೆ ಡಾ. ನಿವೇದಿತಾ ಭಾವಿಮನಿ 469ನೇ ರ್ಯಾಂಕ್, ಶಹಾಪುರದ ಬಸವರಾಜ್ ಜವಳಿ 664ನೇ ರ್ಯಾಂಕ್ ಹಾಗೂ ವನದುರ್ಗದ ಚಂದ್ರಶೇಖರ್ 880ನೇ ರ್ಯಾಂಕ್ ಪಡೆದು ಯಾದಗಿರಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಹಿಂದುಳಿದ ಜಿಲ್ಲೆಯಾದ ಯಾದಗಿರಿಯಿಂದ ನಾಲ್ವರು ಅಭ್ಯರ್ಥಿಗಳು ಯುಪಿಎಸ್ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿರುವುದು ಗಮನಾರ್ಹ ಎಂದು ಜನರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸಂದೀಪ್ ಬಾಡದ್ : ರಾಜ್ಯದಲ್ಲಿ 2ನೇ ಟಾಪರ್
ಯಾದಗಿರಿ ನಗರದ ಕಿರಾಣಿ ವ್ಯಾಪಾರಿ ಬಸವರಾಜ್ ಬಾಡದ್ ಅವರ ದ್ವಿತೀಯ ಪುತ್ರ ಸಂದೀಪ್ ಬಾಡದ್ ಅಖಿಲ ಭಾರತ ಮಟ್ಟದಲ್ಲಿ 82ನೇ ರ್ಯಾಂಕ್ ಪಡೆದು ರಾಜ್ಯದಲ್ಲಿ 2ನೇ ಸ್ಥಾನ ಪಡೆದಿದ್ದಾರೆ. ಯಾದಗಿರಿಯ ಚಿರಂಜೀವಿ ಹಾಗೂ ನ್ಯೂ ಕನ್ನಡ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಅವರು, ಶಹಾಪುರದ ಕೇಂದ್ರೀಯ ಜವಾಹರ್ ನವೋದಯ ವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿವರೆಗೆ ವಿದ್ಯಾಭ್ಯಾಸ ಮಾಡಿದ್ದಾರೆ. ಬಳಿಕ ಬೆಂಗಳೂರಿನ ಅಂಬೇಡ್ಕರ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್ ಪದವಿ ಪಡೆದ ಅವರು ಸಾಫ್ಟ್ವೇರ್ ಕಂಪನಿಯಲ್ಲಿ ಎರಡು ವರ್ಷಗಳ ಕಾಲ ಕೆಲಸ ಮಾಡಿದರು. ನಂತರ ದೆಹಲಿಯಲ್ಲಿ ಐಎಎಸ್ ತರಬೇತಿ ಪಡೆದು ಸಿವಿಲ್ ಸರ್ವಿಸ್ ಪರೀಕ್ಷೆಗೆ ತಯಾರಿ ನಡೆಸಿ ಈ ಸಾಧನೆ ಮಾಡಿದ್ದಾರೆ.
ಡಾ. ನಿವೇದಿತಾ ಭಾವಿಮನಿ : 469ನೇ ರ್ಯಾಂಕ್
ಯಾದಗಿರಿ ನಗರದ ಆರೋಗ್ಯ ಇಲಾಖೆಯ ನಿವೃತ್ತ ಸಿಬ್ಬಂದಿ ಚಂದಪ್ಪ ಭಾವಿಮನಿ ಹಾಗೂ ವರ್ಕನಳ್ಳಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಜಯಲಕ್ಷ್ಮಿ ಭಾವಿಮನಿ ದಂಪತಿಯ ಪುತ್ರಿ ಡಾ. ನಿವೇದಿತಾ ಭಾವಿಮನಿ ಅಖಿಲ ಭಾರತ ಮಟ್ಟದಲ್ಲಿ 469ನೇ ರ್ಯಾಂಕ್ ಪಡೆದಿದ್ದಾರೆ. ಯಾದಗಿರಿಯ ದೋಕಾ ಜೈನ್ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಅವರು, ಆರ್.ವಿ. ವಿದ್ಯಾಸಂಸ್ಥೆಯಲ್ಲಿ ಪ್ರೌಢ ಶಿಕ್ಷಣ ಪೂರ್ಣಗೊಳಿಸಿದ್ದಾರೆ. ಬಳಿಕ ಕಲಬುರಗಿಯ ಎಸ್ಬಿಆರ್ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿ (ವಿಜ್ಞಾನ) ಓದಿ, ಬೆಂಗಳೂರಿನ ಕೆಂಪೇಗೌಡ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ನಲ್ಲಿ ಎಂ.ಬಿ.ಬಿ.ಎಸ್ ಪದವಿ ಪಡೆದಿದ್ದಾರೆ. ಎರಡನೇ ಪ್ರಯತ್ನದಲ್ಲೇ ಅವರು ಯಶಸ್ಸು ಸಾಧಿಸಿದ್ದಾರೆ.
ಬಸವರಾಜ್ ಜವಳಿ : 664ನೇ ರ್ಯಾಂಕ್
ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದ ಉದ್ಯಮಿಗಳಾದ ವಿಶ್ವನಾಥ್–ಗಿರಿಜಾ ಜವಳಿ ದಂಪತಿಯ ಪುತ್ರ ಬಸವರಾಜ್ ಜವಳಿ ಅಖಿಲ ಭಾರತ ಮಟ್ಟದಲ್ಲಿ 664ನೇ ರ್ಯಾಂಕ್ ಪಡೆದಿದ್ದಾರೆ. ಒಂದರಿಂದ ಏಳನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲೇ ವಿದ್ಯಾಭ್ಯಾಸ ಮಾಡಿರುವುದು ವಿಶೇಷವಾಗಿದ್ದು, ನಂತರ ಆಂಗ್ಲ ಮಾಧ್ಯಮದಲ್ಲಿ ಮುಂದುವರಿಸಿ ಸಿವಿಲ್ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ. ತಮ್ಮ ನಿರಂತರ ಪರಿಶ್ರಮ ಮತ್ತು ತಯಾರಿಯಿಂದ ಯುಪಿಎಸ್ಸಿ ಪರೀಕ್ಷೆಯಲ್ಲಿ ಯಶಸ್ಸು ಗಳಿಸಿದ್ದಾರೆ.
ಚಂದ್ರಶೇಖರ್ : 880ನೇ ರ್ಯಾಂಕ್
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಚೆನ್ನೂರು ಗ್ರಾಮದ ಕೃಷಿಕ ದಂಪತಿಯ ಪುತ್ರ ಚಂದ್ರಶೇಖರ್ ಅಖಿಲ ಭಾರತ ಮಟ್ಟದಲ್ಲಿ 880ನೇ ರ್ಯಾಂಕ್ ಪಡೆದಿದ್ದಾರೆ. ಚೆನ್ನೂರಿನಲ್ಲಿ ಪ್ರಾಥಮಿಕ ಶಿಕ್ಷಣ ಹಾಗೂ ವನದುರ್ಗದಲ್ಲಿ ಪ್ರೌಢ ಶಿಕ್ಷಣ ಪೂರ್ಣಗೊಳಿಸಿದ ಅವರು, ಕಲಬುರಗಿಯ ಶ್ರೀಗುರು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡಿದ್ದಾರೆ. ಬಳಿಕ ಬೆಂಗಳೂರಿನ ಬಿಎಂಎಸ್ ಕಾಲೇಜಿನಲ್ಲಿ ಕಂಪ್ಯೂಟರ್ ವಿಜ್ಞಾನದಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ. ಮೂರು ಬಾರಿ ಸಂದರ್ಶನ ಹಂತಕ್ಕೆ ತಲುಪಿದ ಅವರು ನಾಲ್ಕನೇ ಪ್ರಯತ್ನದಲ್ಲಿ ಯಶಸ್ಸು ಸಾಧಿಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಇವರ ಹಿರಿಯ ಸಹೋದರ ಡಾ. ದೇವೇಂದ್ರಪ್ಪ ತೋಟಗಾರಿಕೆ ಇಲಾಖೆಯಲ್ಲಿ ವಿಜ್ಞಾನಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇದನ್ನು ಓದಿದ್ದೀರಾ? ಕಲಬುರಗಿ | ಜ್ಞಾನ ಜೀವನದೊಡನೆ ಸದಾ ಜೊತೆಯಾಗಿರುತ್ತದೆ : ಪ್ರೊ. ದಶರಥ ನಾಯಕ್
ಒಟ್ಟಾರೆ, ಯಾದಗಿರಿ ಜಿಲ್ಲೆಯ ನಾಲ್ವರು ಯುವಕರು ಯುಪಿಎಸ್ಸಿ ಪರೀಕ್ಷೆಯಲ್ಲಿ ಸಾಧನೆ ಮಾಡುವ ಮೂಲಕ ಜಿಲ್ಲೆಯ ಹೆಮ್ಮೆ ಹೆಚ್ಚಿಸಿದ್ದು, ಯುವಜನತೆಗೆ ಪ್ರೇರಣೆಯಾಗಿದ್ದಾರೆ.





