ಕೋಲಾರ: ರೈತರಿಗೆ ಗುಣಮಟ್ಟದ ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ಅಗತ್ಯ ಪ್ರಮಾಣಕ್ಕನುಗುಣವಾಗಿ ವಿತರಿಸಲು ಕೃಷಿ ಇಲಾಖೆಯಿಂದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಎಂ. ಮಲ್ಲೇಶ್ ಬಾಬು ಒತ್ತಾಯಿಸಿದರು.
ಗುರುವಾರ ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಅಭಿವೃದ್ಧಿ ಸಮನ್ವಯ ಉಸ್ತುವಾರಿ ಸಮಿತಿ ದಿಶಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಕೇಂದ್ರ ಸರ್ಕಾರದ ಕಾರ್ಯಕ್ರಮಗಳ ಜತೆಗೆ, ರಾಜ್ಯ ಸರ್ಕಾರದ ಕಾರ್ಯಕ್ರಮಗಳು, ಕಾಮಗಾರಿಗಳ ಪರಿಶೀಲನೆ, ಹಿಂದಿನ ಸಭೆಯ ಅನುಪಾಲನೆ ಕುರಿತು ಸಭೆಯಲ್ಲಿ ಬಿರುಸಿನ ಚರ್ಚೆ ನಡೆಯಿತು.
ಕೆಲ ಅಧಿಕಾರಿಗಳ ಕಾರ್ಯಕ್ಷಮತೆಯನ್ನು ಕೊಂಡಾಡಿದ ಸಂಸದರು ಕೆಲ ಅಧಿಕಾರಿಗಳ ಕಾರ್ಯವೈಖರಿಗೆ ಕಿಡಿಕಾರಿದರು. ವಿವಿಧ ಕೆಲಸ ಕಾರ್ಯಗಳ ಕುರಿತು ಕೆಲ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ಅವರು ನೀಡಿದರು.
ರೈಲ್ವೆ ಕಾಮಗಾರಿಗಳು ಕುಂಟುತ್ತಾ ಸಾಗುತ್ತಿರುವ ಬಗ್ಗೆ ಅವರು ಸಭೆಯಲ್ಲಿದ್ದ ರೈಲ್ವೆ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.
ಜಿಲ್ಲೆಯಲ್ಲಿ ರಸಗೊಬ್ಬರ ದಸ್ತಾನು ಸಮರ್ಪಕವಾಗಿಲ್ಲದಿರುವ ಬಗ್ಗೆ ಸಭೆಯಲ್ಲಿ ಚರ್ಚೆಯಾಯಿತು. ಈ ಬಗ್ಗೆ ಸಂಸದ, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ವಿಮರ್ಶೆಗೆ ಗುರಿಯಾಗಿಸಿದರು.
ಅಧಿಕಾರಿಗಳು ಸರಿಯಾಗಿ ರಸಗೊಬ್ಬರ ಬೇಡಿಕೆಯನ್ನು ಅಂದಾಜಿಸಿಲ್ಲ. ಇದರಿಂದಾಗಿ ರೈತರಿಗೆ ಬೇಡಿಕೆಗನುಗುಣವಾಗಿ ರಸಗೊಬ್ಬರ ದೊರೆಯುತ್ತಿಲ್ಲ. ವೈಜ್ಞಾನಿಕ ರೀತಿಯಲ್ಲಿ ಬೇಡಿಕೆಗಳನ್ನು ಪೂರೈಸಲು ಕ್ರಮ ವಹಿಸಬೇಕು. ಇಲ್ಲವಾದರೆ ಖಾಸಗಿ ವ್ಯಾಪಾರಸ್ಥರು ರೈತರನ್ನು ಸುಲಿಗೆ ಮಾಡುವ ಸಂಭವ ಇರುತ್ತದೆಂದು ಶಾಸಕ ಕೊತ್ತೂರು. ಜಿ. ಮಂಜುನಾಥ್ ತಿಳಿಸಿದರು.
ತಡವಾಗಿ ಬಿದ್ದ ಮಳೆಯ ನಂತರ ಕೃಷಿ ಚಟುವಟಿಕೆಗಳು ಗರಿಗೆದರಿವೆ. ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಅಧಿಕಾರಿಗಳು ಉತ್ತರಿಸಿದರು.
ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗುತ್ತಿದ್ದು,ಪೆಬ್ರವರಿ ೨೦೨೬ರ ಅಂತ್ಯದ ವೇಳೆಗೆ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ತಿಳಿಸಿದರು.
ಕೋಲಾರ ಹಾಗೂ ಮಾಲೂರು ವಿಧಾಸಭಾ ಕ್ಷೇತ್ರಗಳಲ್ಲಿ ಅರಣ್ಯ ಒತ್ತುವರಿ ತೆರವುಗೊಳಿಸಿರುವ ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಎಂಎಲ್ಸಿ ಅನಿಲ್ ಕುಮಾರ್ ಸಾರ್ವಜನಿಕ ರಸ್ತೆ ಹಾಕುವ ಸಂದರ್ಭದಲ್ಲಿ ಅಕ್ಕಪಕ್ಕದಲ್ಲಿ ಅರಣ್ಯ ಇಲಾಖೆಯಿಂದ ಮರಗಳನ್ನು ಹಾಕಿದ್ದು ಪ್ರಸ್ತುತ ಅರಣ್ಯ ಇಲಾಖೆಯಿಂದ ಅವನ್ನು ತೆರವುಗೊಳಿಸಡಾ ಹೊರಟು ರಸ್ತೆ ಕಾಮಗಾರಿ ಮುಂದುವರಿಯಲು ಬಿಡುತ್ತಿಲ್ಲ ಎಂದು ಕೋಲಾರ ಶಾಸಕರು ಆಗ್ರಹ ವ್ಯಕ್ತಪಡಿಸಿದರು. ಎಲ್ಲರಿಗೂ ಇದಕ್ಕೆ ದನಿಗೂಡಿಸಿದರು. ಯಾವುದೇ ಅನುಮತಿ ಇಲ್ಲದೆ ರಸ್ತೆ ಕಾಮಗಾರಿ ಮುಂದುವರೆಸಲು ಆದೇಶಿಸಿದರು.
ಬಡವರ ಜಮೀನನ್ನು ಅರಣ್ಯ ಒತ್ತುವರಿ ನೆಪದಲ್ಲಿ ಮುಟ್ಟುಗೊಲು ಹಾಕಿಕೊಳ್ಳಲಾಗಿದೆ. ಕೂಡಲೇ ಒತ್ತುವರಿ ತೆರವು ಕಾರ್ಯಚರಣೆ ಸ್ಥಗಿತಗೊಳಿಸಿ ಜಂಟಿ ಸರ್ವೇ ನಡೆಸಿ ನಂತರ ಮುಂದುವರೆಯಲು ಆದೇಶಿಸುವಂತೆ ಸಭೆಗೆ ತಿಳಿಸಿದರು.ವಿಧಾನ ಪರಿಷತ್ ಶಾಸಕ ಇಂಚರ ಗೋವಿಂದರಾಜು ದನಿಗೂಡಿಸಿದರು.
ಅರಣ್ಯ ಸಂರಕ್ಷಣಾ ಕಾಯ್ದೆಯಡಿ ಸುಪ್ರೀಂ ಕೋರ್ಟ್ ಆದೇಶದಂತೆ ಒತ್ತುವರಿ ತೆರವು ಕಾರ್ಯಚರಣೆ ಮಾಡಲಾಗಿದೆ. ಯಾವುದೇ ಕಾರಣಕ್ಕೂ ಹಿಂಜರಿಯುವ ಪ್ರಮೇಯ ಇಲ್ಲ ಎಂದು ಅರಣ್ಯ ಸಂರಕ್ಷಣಾ ಅಧಿಕಾರಿ ಉತ್ತರಿಸಿದರು.
ಜಲಜೀವನ್ ಮಿಷನ್ ಅಡಿ ಹಲವು ಗ್ರಾಮಗಳಿಗೆ ನೀರಿನ ಪೂರೈಕೆ ಆಗುತ್ತಿಲ್ಲ. ಹಲವು ಕಾಮಗಾರಿಗಳನ್ನು ಈವರೆಗೆ ಕೈಗೆತ್ತಿಕೊಂಡಿಲ್ಲ ಎಂದು ವಿಧಾನ ಪರಿಷತ್ ಶಾಸಕ ಎಂ. ಎಲ್. ಅನಿಲ್ ಕುಮಾರ್ ಆಗ್ರಹಿಸಿದರು ಇದಕ್ಕೆ ಕೋಲಾರ ಶಾಸಕ ಡಾ. ಕೊತ್ತೂರ್. ಜಿ ಮಂಜುನಾಥ್ ದನಿಗೂಡಿಸಿದರು. ಮೊದಲು ಓವರ್ ಹೆಡ್ ಟ್ಯಾಂಕ್ ಗಳನ್ನು ನಿರ್ಮಿಸಿ, ಕೊಳವೆಬಾವಿ ಕೊರೆಸಿ ನಂತರ ಪೈಪ್ಲೈನ್ ಕಾಮಗಾರಿ ಕೈಗೊಳ್ಳಬೇಕು ಎಂದು ತಿಳಿಸಿದರು.
ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮನೆಗಳನ್ನು ನಿರ್ಮಾಣ ಮಾಡಲು ಅನುದಾನವನ್ನು ನೀಡುತ್ತಿದ್ದು ಸುಮಾರು ೧೫೦ ಕೂ ಹೆಚ್ಚಿನ ಮನೆಗಳಿಗೆ ಎರೆಡೆರಡು ಬಿಲ್ ಗಳು ಪಾವತಿ ಮಾಡಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು.
ಇದನ್ನು ಓದಿದ್ದೀರಾ..? ಅಂಗನವಾಡಿ ಕಾರ್ಯಕರ್ತೆಗೆ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳಿಂದ ಬಿಳ್ಕೊಡುಗೆ ಸಮಾರಂಭ
ಈ ಸಂದರ್ಭದಲ್ಲಿ ಶ್ರೀನಿವಾಸಪುರ ಶಾಸಕ ಜಿ. ಕೆ. ವೆಂಕಟಾಶಿವಾರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಪ್ರವೀಣ್ ಪಿ.ಬಾಗೇವಾಡಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ಬಿ. ನಿಖಿಲ್, ಜಿಲ್ಲಾಪಂಚಾಯತ್ ಉಪಕಾರ್ಯದರ್ಶಿ ಟಿ. ಕೆ. ರಮೇಶ್,ಯೋಜನ ನಿರ್ದೇಶಕರು,ಎಲ್ಲಾ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿಗಳು , ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.





