ಬೀದರ್ ಜಿಲ್ಲೆಯ 14 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಆಗಿ ಮೇಲ್ದರ್ಜೆಗೆ ಏರಿಸಲಾಗಿದೆ ರಾಜ್ಯ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ.
2025–26ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದಂತೆ 474 ಶಾಲೆಗಳನ್ನು ಉನ್ನತೀಕರಣಗೊಳಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನ ಕಾರ್ಯದರ್ಶಿ (ಯೋಜನೆ) ಶುಭಮಂಗಳ ಆರ್.ವಿ. ಅವರು ಆದೇಶ ಹೊರಡಿಸಿದ್ದಾರೆ.
ರಾಜ್ಯ ಸರ್ಕಾರದ ಅನುದಾನ, ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ ಸಾಲ ಯೋಜನೆಯಡಿಯಲ್ಲಿ ರಾಜ್ಯದಲ್ಲಿ ಒಟ್ಟು 500 ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್) ಶಾಲೆಗಳನ್ನು ಮಂಜೂರುಗೊಳಿಸಿದೆ. ಇದರಲ್ಲಿ ಕಲ್ಯಾಣ ಕರ್ನಾಟಕಕ್ಕೆ 94 ಶಾಲೆಗಳು ಮಂಜೂರಾಗಿವೆ. ಈ ಪೈಕಿ ಬೀದರ್ ಜಿಲ್ಲೆಗೆ 14 ಕೆಪಿಎಸ್ ಶಾಲೆ ಮಂಜೂರಾಗಿವೆ.
ಒಂದೇ ಸೂರಿನಡಿ ಎಲ್ಕೆಜಿಯಿಂದ ಪಿಯುಸಿವರೆಗೆ :
ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ 2015-16ರಲ್ಲಿ ಶೇ 47.1 ಲಕ್ಷದಷ್ಟು ಇರುವ ದಾಖಲಾತಿಯನ್ನು 2025-26ನೇ ಸಾಲಿನಲ್ಲಿ 38.2 ಲಕ್ಷಕ್ಕೆ ಕುಸಿದಿದೆ. ಅಂದರೆ ದಾಖಲಾತಿಯಲ್ಲಿ ಶೇ 19ರಷ್ಟು ಇಳಿಮುಖ ಕಂಡಿದೆ. ಆದರೆ, ಅದೇ ಅವಧಿಯಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳ ದಾಖಲಾತಿಯಲ್ಲಿ ಶೇ 29ರಷ್ಟು ಏರಿಕೆಯಾಗಿರುವುದು ಗಮನಾರ್ಹ ಸಂಗತಿ.
2025-26ನೇ ಶೈಕ್ಷಣಿಕ ಸಾಲಿನಲ್ಲಿ 50 ಅಥವಾ ಅದಕ್ಕಿಂತ ಕಡಿಮೆ ವಿದ್ಯಾರ್ಥಿಗಳ ದಾಖಲಾತಿ ಹೊಂದಿರುವ ಸರ್ಕಾರಿ ಶಾಲೆಗಳ ಸಂಖ್ಯೆ 25,683 ಏರಿಕೆಯಾಗಿದೆ. ಪ್ರಾಥಮಿಕ ಹಂತದಿಂದ ಪ್ರೌಢ ಶಾಲಾ ಹಂತಕ್ಕೆ ಮುಂದುವರೆಯುವ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಗಣನೀಯವಾಗಿ ಕಡಿಮೆ ಆಗುತ್ತಿರುವುದನ್ನು ಗಮನಿಸಲಾಗಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಶಾಲೆಯಿಂದ ಹೊರಗೆ ವಿದ್ಯಾರ್ಥಿಗಳ ಸಂಖ್ಯೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಸರ್ಕಾರ ಒಂದೇ ಕ್ಯಾಂಪಸ್ನಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣದಿಂದ ಪಿಯುಸಿವರೆಗೆ ವ್ಯಾಸಂಗ ಮಾಡಲು ಅವಕಾಶ ಕಲ್ಪಿಸಿಕೊಡುವ ಮೂಲಕ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಹೆಚ್ಚಿಸಲು ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ಪ್ರಾರಂಭಿಸಿದೆ.
ವಿದ್ಯಾರ್ಥಿಗಳ ಗುಣಮಟ್ಟದ ಕಲಿಕೆ ಮತ್ತು ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳಕ್ಕೆ ಆರಂಭಿಸಿದ ಒಂದು ಸುಧಾರಣಾತ್ಮಕ ಕಾರ್ಯತಂತ್ರ ಕೆಪಿಎಸ್ ಆಗಿವೆ. 2018-2024ರ ನಡುವೆ ಸ್ಥಾಪಿತವಾದ ಕೆಪಿಎಸ್ ಶಾಲೆಗಳು 2.8 ಲಕ್ಷ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿವೆ. ಈ ಶಾಲೆಗಳಿಗೆ ಸಮುದಾಯ ಬೆಂಬಲ, ಮೂಲಸೌಕರ್ಯ ಬಲವರ್ಧನೆ ಅಥವಾ ಬೇಡಿಕೆಗೆ ಅನುಗುಣವಾಗಿ ಪ್ರೋತ್ಸಾಹದ ಅಗತ್ಯವಿರುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಜಿಲ್ಲೆಯ ಕೆಪಿಎಸ್ ಶಾಲೆಗಳ ವಿವರ :
ಬೀದರ್ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವ್ಯಾಪ್ತಿಯ ಕಮಠಾಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಚಿಲ್ಲರ್ಗಿ (ಆರ್ಎಂಎಸ್ಎ) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಲಿಯಂಬರ್ ಸರ್ಕಾರಿ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲೆ, ಜನವಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು (ಆರ್ಎಂಎಸ್ಎ) ಶಾಲೆಗಳು ಪಟ್ಟಿಯಲ್ಲಿವೆ.
ಭಾಲ್ಕಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವ್ಯಾಪ್ತಿಯ ಮಾಳಚಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮೇಹಕರದ ಮಾದರಿ ಪ್ರಾಥಮಿಕ ಶಾಲೆ, ಲಖನಗಾಂವದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಗಳು ಮೇಲ್ಡರ್ಜೆಗೆ ಏರಿಸಲಾದ ಪಟ್ಟಿಯಲ್ಲಿವೆ.
ಔರಾದ್ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವ್ಯಾಪ್ತಿಯಲ್ಲಿ ಬರುವ ಕೌಡಗಾಂವ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು (ಆರ್ಎಂಎಸ್ಎ) ಶಾಲೆ, ಹೊಕ್ರಾಣಾ ಸರ್ಕಾರಿ ಪ್ರೌಢ ಶಾಲೆಗಳು ಸ್ಥಾನ ಪಡೆದಿವೆ. ಹುಮನಾಬಾದ್ ಕ್ಷೇತ್ರ ಶಿಕ್ಷಣಾಧಿಕಾರಿ ವ್ಯಾಪ್ತಿಯಲ್ಲಿ ಕನಕಟ್ಟಾ ಮಾದರಿ ಪ್ರಾಥಮಿಕ ಶಾಲೆ ಹಾಗೂ ಮನ್ನಾಏಖೇಳ್ಳಿಯ ಕನ್ನಡ-ಉರ್ದು ಪ್ರೌಢ ಶಾಲೆ ಪಟ್ಟಿಯಲ್ಲಿವೆ.

ಬಸವಕಲ್ಯಾಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಪ್ರದೇಶದಲ್ಲಿ ಹುಲಸೂರ ಸರ್ಕಾರಿ ಪ್ರೌಢ ಶಾಲೆ, ಬೇಲೂರ ಸರ್ಕಾರಿ ಪ್ರೌಢ ಶಾಲೆ ಹಾಗೂ ಯರಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಮೇಲ್ಡರ್ಜೆಗೆ ಏರಿಸಲಾದ ಪಟ್ಟಿಯಲ್ಲಿವೆ.
ಕಲ್ಯಾಣ ಕರ್ನಾಟಕ ವ್ಯಾಪ್ತಿಯ 7 ಜಿಲ್ಲೆಗಳಲ್ಲಿ 200 ಶಾಲೆಗಳನ್ನು ಕೆಪಿಎಸ್ ಆಗಿ ಮೇಲ್ದರ್ಜೆಗೆ ಏರಿಕೆ ಮಾಡಲಾಗುತ್ತಿದೆ. ಪ್ರತಿ ಶಾಲೆಯಲ್ಲಿ ಕನಿಷ್ಠ 1,200 ವಿದ್ಯಾರ್ಥಿಗಳಿಗೆ ಅವಶ್ಯಕವಿರುವ ಸಮರ್ಪಕ ಮೂಲ ಸೌಕರ್ಯಗಳನ್ನು ನಿರ್ಮಿಸಲು ಪ್ರತಿ ಶಾಲೆಗೆ ಅಂದಾಜು ₹2 ಕೋಟಿಯಿಂದ ₹4 ಕೋಟಿ ಅನುದಾನ ಬೇಕಾಗುತ್ತದೆ. ಈ 200 ಶಾಲೆಗಳಿಗೆ ಬೇಕಾದ ಮೂಲಭೂತ ಸೌಕರ್ಯ ಒದಗಿಸಲು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನ ಬಳಕೆಗೆ ಅಧಿಕಾರ ನೀಡಲಾಗಿದೆ.
ದ್ವಿಭಾಷಾ ಮಾಧ್ಯಮ, ಕಂಪ್ಯೂಟರ್ ಶಿಕ್ಷಣಕ್ಕೆ ಒತ್ತು :
ಎಲ್ಲ ಕರ್ನಾಟಕ ಪಬ್ಲಿಕ್ ಶಾಲೆಗಳು ಏಕರೂಪದ ನೀತಿ ಪಾಲಿಸಲು ʼಕರ್ನಾಟಕ ಪಬ್ಲಿಕ್ ಶಾಲಾ ಮಾನಕʼ ಕೈಪಿಡಿ ಆಳವಡಿಕೆ ಹಾಗೂ ಗುಣಮಟ್ಟದ ಕನಿಷ್ಠ ಮಾನದಂಡಗಳ ಹೊಂದುವುದು ಎಲ್ಕೆಜಿಯಿಂದ 5ನೇ ತರಗತಿವರೆಗೆ ಏಕ ತರಗತಿ ಪಠ್ಯಪುಸ್ತಕ ಆಧಾರಿತ ದ್ವಿಭಾಷಾ ಮಾಧ್ಯಮ ಬೋಧನೆಯನ್ನು ಅಳವಡಿಸಿಕೊಳ್ಳಲು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ : ಬೀದರ್ | ಆರ್ಎಸ್ಎಸ್ ಪಥ ಸಂಚಲನದಲ್ಲಿ ಭಾಗವಹಿಸಿದ್ದ ಹಾಸ್ಟೆಲ್ ಸಿಬ್ಬಂದಿ ಕರ್ತವ್ಯದಿಂದ ಬಿಡುಗಡೆ
6 ರಿಂದ 10ನೇ ತರಗತಿವರೆಗೆ ಮಾಧ್ಯಮವಾರು ಏಕ ತರಗತಿ ಪಠ್ಯಪುಸ್ತಕ ಆಧಾರಿತ ತರಗತಿಗಳು ಮತ್ತು ಕ್ರಿಯಾಶೀಲ ಬೋಧನಾ ಪದ್ಧತಿ 1ನೇ ತರಗತಿಯಿಂದ ಕಂಪ್ಯೂಟರ್ ಶಿಕ್ಷಣ ಪರಿಚಯ, 6ನೇ ತರಗತಿಯಿಂದ ಉದ್ಯಮ ಸಮ್ಮಿಳಿತ ವೃತ್ತಿಪರ ಕೌಶಲ ಆಧಾರಿತ ಪಠ್ಯ, 8ನೇ ತರಗತಿಯಿಂದ ಮಂಡಳಿ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಸಾಮರ್ಥ್ಯ ಅಭಿವೃದ್ಧಿಯ ತರಗತಿಗಳನ್ನು ಪ್ರಾರಂಭಿಸಲು ಅನುಮತಿಸಿದೆ. ಈ ಸಂಬಂಧ ಅಗತ್ಯಗಳನ್ನು ಗುರುತಿಸಿ ವಿಸ್ತೃತ ಪ್ರಸ್ತಾವನೆಯನ್ನು ತುರ್ತಾಗಿ ಸಿದ್ಧಪಡಿಸಿ ಸಲ್ಲಿಕೆ ಮಾಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.




