ಚಿಂತಾಮಣಿ : ಸಮಾಜದ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ಸಿಗುವವರೆಗೂ ಸ್ವಾತಂತ್ರ್ಯಕ್ಕೆ ಬೆಲೆ ಸಿಗುವುದಿಲ್ಲ ಸಂವಿಧಾನ ಹೇಗೇ ಇರಲಿ ಅದನ್ನು ಅನುಷ್ಠಾನಗೊಳಿಸುವವರ ಉದ್ದೇಶ ಸರಿಯಾಗಿದ್ದರೆ ಸಂವಿಧಾನ ಸದಾ ಸಮಾಜಕ್ಕೆ ಅನುಕೂಲಕರವಾಗಿರುತ್ತದೆ ಎಂಬುದು ಅಂಬೇಡ್ಕರ್ ಅವರ ಅಭಿಪ್ರಾಯವಾಗಿತ್ತು ಎಂದು ತಹಶೀಲ್ದಾರ್ ಸುದರ್ಶನ ಯಾದವ್ ತಿಳಿಸಿದರು.
ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯು ನಗರದ ಝಾನ್ಸಿರಾಣಿ ಲಕ್ಷ್ಮೀಬಾಯಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಸಂವಿಧಾನ ಆಳವಾದ ಅಗಾಧವಾದ ಹಾಗೂ ಸುಲಲಿತವಾದುದು. ಬಿ ಆರ್ ಅಂಬೇಡ್ಕರ್ ನೇತೃತ್ವದ ಸಂವಿಧಾನ ರಚನಾ ಸಮಿತಿಯು ಹಲವಾರು ದೇಶಗಳ ಸಂವಿಧಾನಗಳನ್ನು ಅಧ್ಯಯನ ಮಾಡಿ ನಮ್ಮ ದೇಶದ ಸಮಸ್ಯೆಗಳಿಗೆ ಅನುಗುಣವಾದ ಸಂವಿಧಾನವನ್ನು ರಚನೆ ಮಾಡಿದರು. ಇಡೀ ವಿಶ್ವದಲ್ಲೆ ಅತ್ಯಂತ ದೊಡ್ಡದಾದ ಲಿಖಿತ ಸಂವಿಧಾನವಾಗಿದೆ ಎಂದು ಹೇಳಿದರು.
ಸಂವಿಧಾನದ ಆಶಯಗಳನ್ನು ದೇಶದ ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ವಿಶೇಷವಾಗಿ ಯುವ ಜನಾಂಗ ದೇಶದ ಸ್ವಾತಂತ್ರ್ಯದ ಇತಿಹಾಸವನ್ನು ವ್ಯಾಸಂಗ ಮಾಡಬೇಕು ಸಂವಿಧಾನದ ಉದ್ದೇಶಗಳನ್ನು ಅರ್ಥ ಮಾಡಿಕೊಳ್ಳಬೇಕು.ದೇಶದ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅಭಿವೃದ್ಧಿಗಾಗಿ ಶ್ರಮಿಸಬೇಕು ಬಲಿಷ್ಠ ಭಾರತದ ನಿರ್ಮಾಣಕ್ಕಾಗಿ ಸರ್ವ ತ್ಯಾಗಕ್ಕೂ ಸಿದ್ಧರಾಗಬೇಕು ಎಂದು ಮನವಿ ಮಾಡಿದರು.
ನಗರಸಭೆ ಪೌರಾಯುಕ್ತ ಜಿ ಎನ್ ಚಲಪತಿ ಮಾತನಾಡಿ ಉನ್ನತ ಶಿಕ್ಷಣ ಸಚಿವ ಡಾಕ್ಟರ್ ಎಂ ಸಿ ಸುಧಾಕರ್ ನಗರದಲ್ಲಿ ಹಾಗೂ ಕ್ಷೇತ್ರದಲ್ಲಿ ನೂರಾರು ಕೋಟಿಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಂಡಿದ್ದಾರೆ. ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳು ವಿವಿಧ ಹಂತಗಳಲ್ಲಿವೆ. ಎಲ್ಲವೂ ಅನುಷ್ಠಾನದ ನಂತರ ಬ್ರಾಂಡ್ ಚಿಂತಾಮಣಿ ಆಗಲಿದೆ. ಸಾರ್ವಜನಿಕರು ಅವರಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಪೊಲೀಸ್ಎನ್.ಸಿಸಿಸ್ಕೌಟ್ಸ್ ಅಂಡ್ ಗೈಡ್ಸ್ ಹಾಗೂ ವಿವಿಧ ಶಾಲೆಗಳ ವಿದ್ಯಾರ್ಥಿಗಳ ತಂಡಗಳು ಪಥಸಂಚಲನ ಹಾಗೂ ಧ್ವಜವಂಧನೆ ನೀಡಿದರು.
ಇದನ್ನು ಓದಿದ್ದೀರಾ..? ಗಣಿಗಾರಿಕೆ ಚಾಲಕ ಸಾವು ದೂರಿಗೆ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ದ ಕಾನೂನು ಕ್ರಮಕ್ಕೆ ಒತ್ತಾಯ
ಈ ವೇಳೆ ಡಿವೈಎಸ್ಪಿ ಪಿ ಮುರಳೀಧರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್ ಆನಂದ್, ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ,ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್ ಅಶೋಕ ಕುಮಾರ್,ಬೋವಿ ಸಂಘದ ಜಿಲ್ಲಾಧ್ಯಕ್ಷರಾದ ಎಂ ಗುರ್ರಪ್ಪ,ವಿವಿಧ ಇಲಾಖೆಗಳ ಅಧಿಕಾರಿಗಳು ,ಕನ್ನಡ ಪರ ಸಂಘಟನೆಯ ಪದಾಧಿಕಾರಿಗಳು ಮತ್ತು ಸಿಬ್ಬಂದಿವರ್ಗ,ನಗರದ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭಾಗವಹಿಸಿದ್ದರು.





