ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಕಾವೇರಿ ಉದ್ಯಾನದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ ರೈತ ಬುಧವಾರ ಬೆಳಿಗ್ಗೆ ಬೆಂಗಳೂರು ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕೆ ಆರ್ ಪೇಟೆ ತಾಲೂಕು ಮೂಡನಹಳ್ಳಿ ಗ್ರಾಮದ ರೈತ ಮಂಜೇಗೌಡ ಎಂ ಡಿ(55) ಮೃತಪಟ್ಟವರು.
“ಭೂಸ್ವಾಧೀನಗೊಂಡ ಜಮೀನಿಗೆ ಹಲವಾರು ವರ್ಷಗಳಿಂದ ಪರಿಹಾರ ಸಿಕ್ಕಿಲ್ಲ. ಅರ್ಜಿ ಸಲ್ಲಿಸಿದರೂ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ”ವೆಂದು ಆರೋಪಿಸಿ ಮಂಗಳವಾರ ಬೆಳಿಗ್ಗೆ ಆತ್ಮಹತ್ಯೆಗೆ ಯತ್ನಿಸಿದ್ದರು.
ಬೆಂಕಿ ಹಚ್ಚಿಕೊಳ್ಳುತ್ತಿದ್ದಂತೆ ಸಮೀಪದಲ್ಲಿದ್ದ ಸಾರ್ವಜನಿಕರು ಬೆಂಕಿ ನಂದಿಸಿ, ನಗರದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದರು. ಮಿಮ್ಸ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ಇಲ್ಲಿನ ವೈದ್ಯರು, ʼದೇಹವು ಶೇ.80ರಷ್ಟು ಸುಟ್ಟು ಹೋಗಿತ್ತುʼ ಎಂದು ತಿಳಿಸಿದ್ದರು. ಇದೀಗ ರೈತ ಮಂಜೇಗೌಡ ಮೃತಪಟ್ಟಿದ್ದಾರೆ.
ಈ ಘಟನೆ ಖಂಡಿಸಿ ಕನ್ನಡಪರ ಮತ್ತು ರೈತಪರ ಹೋರಾಟಗಾರರು ಮಂಡ್ಯ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮಂಗಳವಾರ ಸಂಜೆ ಪ್ರತಿಭಟನೆ ನಡೆಸಿದ್ದು, “ಹೊತ್ತಿ ಉರಿದ ರೈತನಿಗೆ ನ್ಯಾಯ ಕೊಡಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ” ಎಂದು ಆಕ್ರೋಶ ಹೊರಹಾಕಿದರು.
ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಹೋರಾಟಗಾರ ನಗರಕೆರೆ ಜಗದೀಶ್ ಈ ದಿನ.ಕಾಮ್ನೊಂದಿಗೆ ಮಾತನಾಡಿ, “ರೈತಪರ, ಜನಪರವೆಂದು ಹೇಳಿಕೊಳ್ಳುವ ಸರ್ಕಾರ ಮತ್ತು ಸ್ಥಳೀಯ ಇಲಾಖೆಗಳ ಅಧಿಕಾರಿಗಳೇ ರೈತರ ಆತ್ಮಹತ್ಯೆಗೆ ನೇರ ಹೊಣೆ. ಇದೊಂದು ವ್ಯವಸ್ಥೆಯಿಂದಾಗಿರುವ ಕೊಲೆ” ಎಂದು ಆರೋಪಿಸಿದರು.
ಈ ಸುದ್ದಿ ಓದಿದ್ದೀರಾ? ಬೆಳಗಾವಿ : ನವೆಂಬರ 7ರಂದು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು ಕಬ್ಬು ಬೆಳೆಗಾರರ ನಿರ್ಧಾರ
“ಮೃತ ರೈತ ಬಹುತೇಕ ದಿನಗಳಿಂದ ಕೆ ಆರ್ ಪೇಟೆ ತಹಶೀಲ್ದಾರ್, ಕಂದಾಯ ಇಲಾಖೆಗಳಿಗೆಲ್ಲ ಹಲವು ಬಾರಿ ಮನವಿ ಸಲ್ಲಿಸಿದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ಮಂಡ್ಯ ಜಿಲ್ಲಾಧಿಕಾರಿಗಳ ಬಳಿ ಮಾತನಾಡಿದ್ದಾರೆ. ಆಗಲೂ ತಮ್ಮ ಅಹವಾಲಿಗೆ ಸೂಕ್ತ ಪ್ರತಿಕ್ರಿಯೆ ದೊರೆಯದಿದ್ದಾಗ ಕಚೇರಿ ಎದುರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇದೊಂದು ನೇರವಾಗಿ ಅಧಿಕಾರಿಗಳಿಂದಾದ ಕೊಲೆಯಂದೇ ಹೇಳಬಹುದು” ಎಂದರು.





