ಉಡುಪಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯಲ್ಲಿ ಕಾರ್ಕಳ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ ಅವರು ಸರಕಾರದ ಯೋಜನೆಗಳು ಜನರಿಗೆ ತಲುಪುವಲ್ಲಿ ಅಡ್ಡಿಪಡಿಸುತ್ತಿರುವ ಅಧಿಕಾರಿಗಳ ವಿರುದ್ಧ ಧ್ವನಿ ಎತ್ತಿದ್ದಾರೆ. ಜನರ ಪರವಾಗಿ ಪ್ರಬಲವಾಗಿ ಮಾತನಾಡಿದ ಅವರು, ಅಧಿಕಾರಿಗಳ ನಿರ್ಲಕ್ಷ್ಯ ಮುಂದುವರೆದರೆ ಧರಣಿ ಕುಳಿತು ಕೊಳ್ಳುವ ಎಚ್ಚರಿಕೆ ನೀಡಿದ್ದಾರೆ.
ಪಳ್ಳಿ–ಕಣಜಾರು ಮಾರ್ಗದಲ್ಲಿ ಕೆಲವು ತಿಂಗಳ ಹಿಂದೆ ಆರಂಭಗೊಂಡಿದ್ದ ಬಸ್ ಸಂಚಾರ ಕೆಲವೇ ದಿನಗಳಲ್ಲಿ ನಿಂತಿರುವುದರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ತಕ್ಷಣವೇ ಕೆಎಸ್ಆರ್ಟಿಸಿ ಬಸ್ ಸಂಚಾರ ಪುನರಾರಂಭಿಸುವಂತೆ ಆಗ್ರಹಿಸಿದರು. ಈ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಅವರ ವೀಡಿಯೋ ವೈರಲ್ ಆಗುತ್ತಿದೆ.
ಗ್ರಾಮ ಮಟ್ಟದಲ್ಲಿ ಗ್ಯಾರಂಟಿ ಅದಾಲತ್ಗಳನ್ನು ನಡೆಸಿ, ಸರಕಾರದ ಯೋಜನೆಗಳಿಂದ ವಂಚಿತರಾಗಿರುವವರಿಗೆ ನ್ಯಾಯ ಒದಗಿಸುವ ಕಾರ್ಯವನ್ನು ಕೈಗೊಂಡಿರುವ ಅಜಿತ್ ಹೆಗ್ಡೆ ಮಾಳ ಅವರ ಕಾರ್ಯವೈಖರಿ ಕಾರ್ಕಳ ತಾಲೂಕಿನಲ್ಲಿ ಜನಮನ್ನಣೆ ಪಡೆಯುತ್ತಿದೆ. ಜನರ ಪರವಾಗಿ ನಿಲುಹಿಡಿದು, ಸಮಸ್ಯೆಗಳಿಗೆ ಸ್ಪಂದಿಸುವ ಅವರ ಶೈಲಿ ತಾಲೂಕು ಮಟ್ಟದಲ್ಲಿ ಶ್ಲಾಘನೀಯವೆಂದು ಭಾಗವಹಿಸಿದವರು ಅಭಿಪ್ರಾಯಪಟ್ಟರು.





