ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದಲ್ಲಿ ಇದೇ ತಿಂಗಳ 5ರಿಂದ 7ರ ತನಕ ನಡೆಯುವ ಸಹಜಾನಂದ ಸಪ್ತಾಹ ಕಾರ್ಯಕ್ರಮಕ್ಕೆ ಕನ್ನೇರಿ ಮಠದ ಸ್ವಾಮಿಗಳನ್ನು ಆಹ್ವಾನಿಸಿರುವುದರ ವಿರುದ್ಧ ಬಸವಪರ ಸಂಘಟನೆಗಳು ಹಾಗೂ ಲಿಂಗಾಯತ ಸ್ವಾಮೀಜಿಗಳು ಭಾರೀ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಬಸವಪರ ಸಂಘಟನೆಗಳು ಮತ್ತು ಲಿಂಗಾಯತ ಸ್ವಾಮೀಜಿಗಳು ನವೆಂಬರ್ 1ರಂದು ಅಣ್ಣಿಗೇರಿ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, “ಅಶ್ಲೀಲ ಮತ್ತು ಅವಹೇಳನಕಾರಿ ಹೇಳಿಕೆ ನೀಡಿ ಬಸವಪರ ಸಂಘಟನೆಗಳು ಹಾಗೂ ಲಿಂಗಾಯತರ ಆಕ್ರೋಶಕ್ಕೆ ಕಾರಣವಾಗಿರುವ ಕನ್ನೇರಿ ಮಠದ ಸ್ವಾಮೀಜಿಯನ್ನು ಈಗಾಗಲೇ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಿಗೆ ಪ್ರವೇಶಿಸಿದಂತೆ ನಿರ್ಬಂಧ ಹೇರಲಾಗಿದೆ. ಇದೀಗ ಅಣ್ಣಿಗೇರಿ ತಾಲೂಕಿಗೆ ಬರುವುದನ್ನೂ ತಡೆಹಿಡಿಯಬೇಕು” ಎಂದು ಅಗ್ರಹಿಸಿದ್ದಾರೆ.
“ಕಳೆದ 8 ವರ್ಷಗಳ ಹಿಂದೆ ಪ್ರಮೋದ್ ಮುತಾಲಿಕ್ ಅವರು ಹಳ್ಳಿಕೇರಿ ಗ್ರಾಮಕ್ಕೆ ಬಂದು ಭಾಷಣ ಮಾಡಿ ಹೋದನಂತರ ಮೂರು ಹೆಣಗಳು ಬಿದ್ದಿವೆ. ಅಲ್ಲಿಂದ ಈ ಗ್ರಾಮವು ಸೂಕ್ಷ್ಮ ಪ್ರದೇಶವೆಂದು ಪರಿಗಣಿಸಲ್ಪಟ್ಟಿದೆ. ಈಗಾಗಲೇ ಅವಹೇಳನಕಾರಿಯಾಗಿ ಮಾತನಾಡಿ, ಲಿಂಗಾಯತರ ಆಕ್ರೋಶಕ್ಕೆ ಕಾರಣವಾಗಿರುವ ಕನ್ನೇರಿ ಸ್ವಾಮೀಜಿ ಹಳ್ಳಿಕೇರಿಗೆ ಬರುವುದರಿಂದ ಮತ್ತೆ ಅಶಾಂತಿ ಉಂಟಾಗಬಹುದು. ಆದ್ದರಿಂದ ಅವರು ಕಾರ್ಯಕ್ರಮಕ್ಕೆ ಬರುವುದನ್ನು ನಿರ್ಬಂಧಿಸಬೇಕು” ಎಂದು ಒತ್ತಾಯಿಸುತ್ತಿದ್ದಾರೆ.
ಮತ್ತೊಂದೆಡೆ, “ಹಳ್ಳಿಕೇರಿ ಗ್ರಾಮದಲ್ಲಿ ನಡೆಯುವ ಈ ಕಾರ್ಯಕ್ರಮವು ಧಾರ್ಮಿಕ ಕಾರ್ಯಕ್ರಮವಾಗಿದ್ದು, ಕನ್ನೇರಿ ಶ್ರೀಗಳನ್ನು ನಿರಂತರವಾಗಿ 14 ವರ್ಷಗಳಿಂದ ಆಹ್ವಾನಿಸುತ್ತಿದ್ದೇವೆ. ಅವರು ಬಾಯಿತಪ್ಪಿ ಆಡು ಭಾಷೆಯಲ್ಲಿ ಮಾತನಾಡಿರುವುದನ್ನು ನೆಪ ಮಾಡಿಕೊಂಡು ಶ್ರೀಗಳನ್ನು ಜಿಲ್ಲೆಗೆ ಬರದಂತೆ ನಿರ್ಬಂಧ ಹೇರಬೇಕೆಂದು ಒತ್ತಾಯಿಸುವುದು ಸರಿಯಲ್ಲ” ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬಂಟ್ವಾಳ | ಕಲ್ಲಡ್ಕದ ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಸಂಭ್ರಮ
ಕನ್ನೇರಿ ಸ್ವಾಮೀಜಿ ಧಾರವಾಡ ಜಿಲ್ಲೆಗೆ ಪ್ರವೇಶಿಸದಂತೆ ನಿರ್ಬಂಧ ಹೇರಬೇಕೆಂದು ಒತ್ತಾಯಿಸಿ ಅಕ್ಟೋಬರ್ 30ರಂದು ಬಸವಪರ ಸಂಘಟನೆಗಳಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿತ್ತು. ಅದರ ಬೆನ್ನಲ್ಲೇ ಬಸವಪರ ಸಂಘಟನೆಗಳು ಮತ್ತು ಲಿಂಗಾಯತ ಸ್ವಾಮೀಜಿಗಳು ನವೆಂಬರ್ 1ರಂದು ಅಣ್ಣಿಗೇರಿ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಕನ್ನೇರಿ ಮಠದ ಸ್ವಾಮೀಜಿ ಅಣ್ಣಿಗೇರಿ ತಾಲೂಕಿಗೆ ಬರುವುದನ್ನೂ ತಡೆಹಿಡಿಯಬೇಕೆಂದು ಅಗ್ರಹಿಸಿದ್ದಾರೆ.





