ಶಾಲೆಗೆ ಶುದ್ಧ ಕುಡಿಯುವ ನೀರಿಗೆ ಶಾಶ್ವತ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಔರಾದ್ ತಾಲೂಕಿನ ನಾಗಮಾರಪಳ್ಳಿ ಗ್ರಾಮದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು, ಗ್ರಾಮಸ್ಥರು ಗ್ರಾಮ ಪಂಚಾಯತ್ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.
ನಾಗಮಾರಪಳ್ಳಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದ್ದು, 1ರಿಂದ 7ನೇ ತರಗತಿವರೆಗೆ ಒಟ್ಟು 127 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಆದರೆ ಶಾಲಾ ಮಕ್ಕಳಿಗೆ ಕುಡಿಯಲು ಹಾಗೂ ಬಿಸಿಯೂಟ ಸಿದ್ಧಪಡಿಸಲು ನೀರಿನ ವ್ಯವಸ್ಥೆ ಇಲ್ಲ. ಶೌಚಾಲಯ ವ್ಯವಸ್ಥೆ, ಕಾಂಪೌಂಡ್ ವ್ಯವಸ್ಥೆ ಕಲ್ಪಿಸುವಂತೆ ಗ್ರಾಮಸ್ಥರು ಆಗ್ರಹಿಸಿದರು.

ʼಸರ್ಕಾರಿ ಶಾಲೆಯ ಮಕ್ಕಳಿಗೆ ಕನಿಷ್ಠ ನೀರಿನ ಸೌಕರ್ಯ ಇಲ್ಲದಕ್ಕೆ ನೀರು ಕುಡಿಯಲು ಮನೆಗೆ ಬರಬೇಕಾದ ಪರಿಸ್ಥಿತಿ ಇದೆ. ಇನ್ನು ಸುತ್ತಲಿನ ಬೇರೆ ಗ್ರಾಮಗಳಿಂದ ಬರುವ ವಿದ್ಯಾರ್ಥಿಗಳು ಹೇಗೆ ಮಾಡಬೇಕು. ಇದರಿಂದ ಮಕ್ಕಳ ಶೈಕ್ಷಣಿಕ ಕಲಿಕೆಗೆ ಅಡ್ಡಿಯಾಗುತ್ತಿದೆ. ಗ್ರಾಮ ಪಂಚಾಯತಿ ಪಿಡಿಒ, ಅಧ್ಯಕ್ಷರು ಸಮಸ್ಯೆಗೆ ಸ್ಪಂದಿಸುತ್ತಿಲ್ಲವೆಂದು ಗ್ರಾಮಸ್ಥರು ವಿದ್ಯಾರ್ಥಿಗಳನ್ನು ಕಚೇರಿ ಮುಂದೆ ಕೂರಿಸಿ ಪ್ರತಿಭಟನೆ ಮಾಡಬೇಕಾದ ಅನಿವಾರ್ಯತೆ ಬಂದಿದೆʼ ಎಂದು ಪೋಷಕರು ಆಕ್ರೋಶ ಹೊರ ಹಾಕಿದರು.
ಇದನ್ನೂ ಓದಿ : ಬೀದರ್ | ₹12 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ
ಈ ಬಗ್ಗೆ ಶಾಲೆಯ ಮುಖ್ಯಗುರು ಸತೀಷ ಅವರನ್ನು ಈದಿನ.ಕಾಮ್ ಸಂಪರ್ಕಿಸಿದಾಗ, ʼಕೆಲ ವರ್ಷಗಳಿಂದ ಶಾಲಾ ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಈ ಬಗ್ಗೆ ಗ್ರಾಮ ಪಂಚಾಯತಿಗೆ ಎರಡು ಸಲ ಮನವಿ ಕೂಡ ಸಲ್ಲಿಸಿದ್ದೇನೆ. ಈ ಹಿಂದೆ ಕೊರೆಸಿದ ಕೊಳವೆ ಬಾವಿ ಕೆಟ್ಟು ನಿಂತಿದೆ. ಹೀಗಾಗಿ ನೀರಿನ ಸಮಸ್ಯೆ ಉದ್ಭವಿಸಿದೆ. ಹೀಗಾಗಿ ನಾವೇ ಹಣ ಕೊಟ್ಟು ನೀರು ಖರೀದಿಸುತ್ತಿದ್ದೇವೆ. ಬುಧವಾರ ಗ್ರಾಮಸ್ಥರೇ ವಿದ್ಯಾರ್ಥಿಗಳನ್ನು ಕರೆದೊಯ್ದು ಪ್ರತಿಭಟನೆ ನಡೆಸಿದರು. ತದನಂತರ ಪಿಡಿಒ ಅವರು ಶಾಲೆಗೆ 10 ಕ್ಯಾನ್ ನೀರು ಕಳಿಸಿದ್ದಾರೆʼ ಎಂದು ಮಾಹಿತಿ ನೀಡಿದರು.





