ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಮತ್ತು ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶ ಹಿಂಪಡೆಯುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬಾಗಲಕೋಟೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
“ರಾಜ್ಯದಲ್ಲಿ ಇತ್ತೀಚಿನ ವರ್ಷಗಳಲ್ಲಿ ಎಂದೂ ಕಾಣದಷ್ಟು ಬರಗಾಲದ ಸ್ಥಿತಿ ನಿರ್ಮಾಣವಾಗಿದೆ. ವಾಡಿಕೆಯಂತೆ ಮಳೆಯಾಗಿಲ್ಲ. ಈಗಾಗಲೇ 236 ತಾಲೂಕುಗಳ ಪೈಕಿ 192 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ. ವಿಶೇಷವಾಗಿ ಕಾವೇರಿ ಕಣಿವೆ ಭಾಗದಲ್ಲಿ ತೀವ್ರ ಸ್ವರೂಪದ ಬರದ ಸ್ಥಿತಿ ನಿರ್ಮಾಣವಾಗಿದೆ. ಕೃಷ್ಣರಾಜಸಾಗರ ಜಲಾಶಯದಲ್ಲಿ ಉಳಿದಿರುವುದು ಕೇವಲ 20 ಟಿಎಂಸಿ ನೀರು. ಅದರಲ್ಲಿ ಬಳಕೆಗೆ ಸಿಗುವುದು ಕೇವಲ 15 ಟಿಎಂಸಿ ನೀರು ಮಾತ್ರ ಇಂಥ ಸಂದರ್ಭದಲ್ಲಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸುಮಾರು 7 ಟಿಎಂಸಿಯಷ್ಟು ನೀರು ತಮಿಳುನಾಡಿಗೆ ಹರಿಸಲು ಆದೇಶಿಸಿರುವುದು ಆಘಾತಕಾರಿಯಾಗಿದೆ” ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು.
“ಬೆಂಗಳೂರಿಗೆ ಪ್ರತಿ ತಿಂಗಳು ಕುಡಿಯುವ ನೀರಿಗೇ ಒಂದೂವರೆ ಟಿಎಂಸಿ ನೀರು ಬೇಕು. ಕಾವೇರಿ ಕಣಿವೆಯ ರೈತರ ಹೊಲಗದ್ದೆಗಳಿಗೆ ನೀರಿಲ್ಲ. ಕೈಗಾರಿಕೆಗಳಿಗೆ ಕೊಡಬೇಕಾದ ನೀರಿಲ್ಲ. ಹೀಗಿರುವಾಗ ಏಳು ಟಿಎಂಸಿ ನೀರು ಎಲ್ಲಿಂದ ತರಲು ಸಾಧ್ಯ? ಮಂಡ್ಯ ಭಾಗದ ರೈತರು ನೀರಿಗೆ ಏನು ಮಾಡಬೇಕು? ಬೆಂಗಳೂರಿನ ಒಂದೂವರೆ ಕೋಟಿ ಜನರು ಕುಡಿಯುವ ನೀರು ಇಲ್ಲದೆ ಸಾಯಬೇಕೆ? ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ರಾಜ್ಯ ಸರ್ಕಾರ ಯಾವ ಕಾರಣಕ್ಕೂ ಪಾಲಿಸಬಾರದು” ಎಂದರು.
“ನಾಡಿನ ಜನರ ಜೀವಗಳಿಗಿಂತ ಯಾವುದೋ ಪ್ರಾಧಿಕಾರದ ಆದೇಶ ದೊಡ್ಡದಾಗಲು ಹೇಗೆ ಸಾಧ್ಯ? ಈ ಪ್ರಾಧಿಕಾರದ ಆದೇಶ ಪಾಲಿಸಲು ಹೋಗಿ ಅವರು ಕೇಳಿದಷ್ಟು ನೀರನ್ನು ಈವರೆಗೆ ಬಿಟ್ಟಿದ್ದೇ ರಾಜ್ಯ ಸರ್ಕಾರದ ದೊಡ್ಡ ತಪ್ಪು. ಈಗಲಾದರೂ ರಾಜ್ಯ ಸರ್ಕಾರ ಅಡ್ಡಗೋಡೆಯ ಮೇಲೆ ದೀಪ ಇಟ್ಟಂತೆ ಮಾತಾಡುವುದನ್ನು ಬಿಟ್ಟು ಯಾವುದೇ ಕಾರಣಕ್ಕೂ ನೀರು ಬಿಡುವುದಿಲ್ಲ ಎಂಬ ದೃಢ ಘೋಷಣೆ ಮಾಡಬೇಕು” ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಸಚಿವ ಸಂಪುಟದಿಂದ ಡಿ. ಸುಧಾಕರ್ ವಜಾಕ್ಕೆ ಆಗ್ರಹ
“ರಾಜ್ಯ ಸರ್ಕಾರ ಮತ್ತೆ ತಮಿಳುನಾಡಿಗೆ ನೀರು ಬಿಟ್ಟರೆ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಲಿದೆ. ಅದರಿಂದ ಉಂಟಾಗುವ ಅನಾಹುತಗಳನ್ನು ಊಹಿಸಲೂ ಸಾಧ್ಯವಿಲ್ಲ. ರಾಜ್ಯದ ಎಲ್ಲ ಸಂಸದರೂ ದೆಹಲಿಯಲ್ಲಿ ಧರಣಿ ನಡೆಸಬೇಕು. ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು. ರಾಜೀನಾಮೆ ನೀಡಲೂ ಸಿದ್ಧವಾಗಿರಬೇಕು. ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಪ್ರಾಧಿಕಾರದ ಆದೇಶವನ್ನು ಪಾಲಿಸಬಾರದು. ತಮಿಳುನಾಡಿಗೆ ಮತ್ತೆ ನೀರು ಬಿಡಕೂಡದು” ಎಂದು ಆಗ್ರಹಿಸಿದರು.
“ಒಂದೊಮ್ಮೆ ಸರ್ಕಾರ ಅಂಥ ದುಸ್ಸಾಹಸಕ್ಕೆ ಕೈಹಾಕಿದರೆ ರಾಜ್ಯದ ಜನರು ದಂಗೆ ಏಳುವ ಸ್ಥಿತಿ ನಿರ್ಮಾಣವಾಗುತ್ತದೆ. ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಸ್ವರೂಪದ ಪ್ರತಿಭಟನೆ ಹಮ್ಮಿಕೊಳ್ಳಲಿದೆ” ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಈ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಸಂಘದ ಕಾರ್ಯಕರ್ತರು ಇದ್ದರು.





