ಗ್ಯಾರಂಟಿ ಯೋಜನೆಗಳು ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಪೂರಕವಾಗಿವೆ ಎಂದು ಜಾಗೃತ ಕರ್ನಾಟಕ ರಾಜ್ಯ ಮುಖಂಡರಾದ ಸೀತಾಲಕ್ಷ್ಮಿ ಹೇಳಿದರು.
ಬಾಗಲಕೋಟೆ ನವನಗರದ ಕಲಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಗ್ಯಾರಂಟಿ ಉತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗ್ಯಾರಂಟಿ ಯೋಜನೆಗಳಿಂದ ರಾಜ್ಯವು ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಇದಕ್ಕೆ ಉದಾಹರಣೆ ನಮ್ಮ ರಾಜ್ಯದ ಜಿಡಿಪಿ ಸಾಕ್ಷಿಯಾಗಿದೆ. ಈ ಯೋಜನೆಗಳನ್ನು ಮೊದಲು ತಂದಿದ್ದು ತಮಿಳುನಾಡು ಸರ್ಕಾರ. ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ. ಈ ಯೋಜನಗಳನ್ನು ಆರ್ಥಿಕವಾಗಿ ಹಿಂದುಳಿದ, ಬಡ ಕಾರ್ಮಿಕರಿಗೆ ಅನುಕೂಲವಾಗಲೆಂದು ತಂದಿದ್ದಾರೆ ಎಂದರು.
ಗ್ಯಾರೆಂಟಿ ಯೋಜನೆಗಳ ಅಧ್ಯಕ್ಷ ಎಚ್ ಎಮ್ ರೇವಣ್ಣ ಮಾತನಾಡಿ, “ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಒಟ್ಟು ₹1.19ಲಕ್ಷ ಕೋಟಿಯನ್ನು ಡಿಬಿಟಿ ಮೂಲಕ ನೇರವಾಗಿ ಮನೆಯ ಬಾಗಿಲಿಗೆ ತಲುಪಿಸುವ ಕಾರ್ಯವನ್ನು ಸರ್ಕಾರ ಮಾಡುತ್ತಿದೆ’ ಎಂದರು.ಯಾರ ಮಧ್ಯಸ್ಥಿಕೆ ಬಾಗಿಲಿಗೆ ಇಲ್ಲದೇ ಅರ್ಹ ಫಲಾನುಭವಿಗಳ ಮನೆ ಗ್ಯಾರಂಟಿ ಯೋಜನೆಗಳ ಲಾಭ ಮುಟ್ಟಿಸುವ ಕಾರ್ಯವನ್ನು ರಾಜ್ಯ ಸರ್ಕಾರ ಮಾಡುತ್ತಿದೆ” ಎಂದರು.
ಗ್ಯಾರಂಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ ಮಾತನಾಡಿ, “ಗ್ಯಾರಂಟಿ ಯೋಜನೆಗಳಿಂದ ನಿರುದ್ಯೋಗಿಗಳಿಗೆ ಅನುಕೂಲವಾಗಿದೆ. ಈ ಯೋಜನೆಗಳಿಂದ ಹೆಣ್ಣು ಮಕ್ಕಳು ಸ್ವಾಭಿಮಾನದಿಂದ ಬದುಕು ಸಾಗಿಸಲು ಸಾಧ್ಯವಾಗಿದ್ದು, ಅವರ ಜೀವನದ ಗುಣಮಟ್ಟ ಸುಧಾರಿಸಿದೆ” ಎಂದು ಹೇಳಿದರು.
ಬೀಳಗಿ ಶಾಸಕ ಜೆ.ಟಿ. ಪಾಟೀಲ ಮಾತನಾಡಿ, “ಗ್ಯಾರಂಟಿ ಯೋಜನೆಗಳು ಬಡವರಿಗೆ ಆರ್ಥಿಕ ಚೈತನ್ಯ ನೀಡಿದ್ದು, ಇಡೀ ದೇಶದಲ್ಲಿ ಕರ್ನಾಟಕ ಸರ್ಕಾರದ ಮಾದರಿಯನ್ನು ಅನುಸರಿಸಲಾಗುತ್ತಿದೆ. ಪ್ರತಿ ಕುಟುಂಬಕ್ಕೆ ₹5 ಸಾವಿರ ಜಮೆ ಆಗುತ್ತಿದೆ. 5 ವರ್ಷದಲ್ಲಿ ₹3 ಲಕ್ಷ ನೀಡಲಾಗುತ್ತಿದೆ” ಎಂದರು.
ಇದನ್ನೂ ಓದಿ: ಬಾಗಲಕೋಟೆ | ಶಿವಾಜಿ ಮಹಾರಾಜರ ಮೆರವಣಿಗೆಯಲ್ಲಿ ಕಲ್ಲು ತೂರಾಟ; ಜಿಲ್ಲಾ ಕಾಂಗ್ರೆಸ್ ವಿಷಾದ
ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಅನೀಲ ಕುಮಾರ ದಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಲಕ್ಷ್ಮಿ ಮೇಟಿ ಅವರು ಯೋಜನೆಯಿಂದಾದ ಪ್ರಯೋಜನದ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು.
ರಾಜ್ಯ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ, ಅಧ್ಯಕ್ಷ ಅಬ್ದುಲರಜಾಕ ಬೇನೂರ, ಜಿಲ್ಲಾಧಿಕಾರಿ ಸಂಗಪ್ಪ, ಸಿಇಒ ಶಶಿಧರ ಕುರೇರ, ಉಪ ಕಾರ್ಯದರ್ಶಿ ಎನ್. ವೈ.ಬಸರಿಗಿಡದ ಸೇರಿದಂತೆ ತಾಲ್ಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಉಪಸ್ಥಿತರಿದ್ದರು.





