ದುಡ್ಡು ಸಂಪಾದನೆಯೇ ಮೂಲ ಉದ್ದೇಶವಾಗುತ್ತಿರುವ ಆಧುನಿಕ ಶಿಕ್ಷಣ ವ್ಯವಸ್ಥೆ ಮತ್ತು ನಾಗಾಲೋಟದಲ್ಲಿ ಸಾಗುತ್ತಿರುವ ಮಾಹಿತಿ ತಂತ್ರಜ್ಞಾನದಿಂದಾಗಿ ವಿದ್ಯಾರ್ಥಿ, ಯುವಜನರಲ್ಲಿ ಮಾನವೀಯ ಮೌಲ್ಯಗಳು ಕುಸಿಯುತ್ತಿವೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಹೆಚ್. ಕಳವಳ ವ್ಯಕ್ತಪಡಿಸಿದರು.
ಅವರು ಇಂದು (ನ. 7) ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಆತೂರಿನ ಆಯಿಶಾ ಹೆಣ್ಮಕ್ಕಳ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿನ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಬ್ಯಾರಿ ಸಾಹಿತ್ಯ ಕಮ್ಮಟ ಉದ್ಘಾಟಿಸಿ ಮಾತನಾಡುತ್ತಿದ್ದರು.
ವಿದ್ಯಾ ಕೇಂದ್ರಗಳು ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡುವ ಜೊತೆಗೆ, ವಿದ್ಯಾರ್ಥಿಗಳಲ್ಲಿ ಮಾಹಿತಿ ತಂತ್ರಜ್ಞಾನದ ದುರ್ಬಳಕೆ ತಡೆಯುವ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಾದ ಅಗತ್ಯವಿದೆ. ಸಾಮಾಜಿಕ ಸಂಘಟನೆಗಳು ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಯೋಜನೆಗಳನ್ನು ಹಮ್ಮಿಕೊಳ್ಳಬೇಕಾಗಿದೆ ಎಂದು ಉಮರ್ ಯು.ಹೆಚ್. ಅಭಿಪ್ರಾಯಪಟ್ಟರು.
ಅಖಿಲ ಭಾರತ ಬ್ಯಾರಿ ಪರಿಷತ್ನ ಮಹಿಳಾ ಘಟಕದ ಅಧ್ಯಕ್ಷೆ, ಲೇಖಕಿ ಶಮೀಮಾ ಕುತ್ತಾರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸದಸ್ಯೆ, ಕಾರ್ಯಕ್ರಮದ ಸದಸ್ಯ ಸಂಚಾಲಕಿ ಶಮೀರಾ ಜಹಾನ್ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು.
ಆಯಿಶಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಆಯಿಶಾ ಫರ್ಝಾನಾ, ಸಂಚಾಲಕ ಅಬ್ದುಲ್ ಹಸೀಬ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ವಿದ್ಯಾರ್ಥಿನಿಯರಾದ ಶಹದಾ ರಹ್ಫಾ, ಬೀಬಿ ಫಾತಿಮಾ, ಆಯಿಶಾ ಫರ್ಹಾ ಮತ್ತು ಆಯಿಶತ್ ಸಫಾ ಬ್ಯಾರಿ ಸ್ತುತಿಗೀತೆ ಹಾಡಿದರು. ಹಲೀಮಾ ತುಹ್ಫಾ ಮತ್ತು ಫಾತಿಮಾ ತಸ್ಕೀನಾ ಕಾರ್ಯಕ್ರಮ ನಿರೂಪಿಸಿದರು. ಉಪ ಪ್ರಾಂಶುಪಾಲೆ ರಮ್ಯ ಎಸ್. ಧನ್ಯವಾದವಿತ್ತರು.





