ಬ್ಯಾರಿ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂರಕ್ಷಣೆಯ ಉದ್ದೇಶದಿಂದ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಆಶ್ರಯದಲ್ಲಿ ಭಾನುವಾರ ಜನವರಿ 4 ಬೆಳಿಗ್ಗೆ 9ರಿಂದ ರಾತ್ರಿ 8ರವರೆಗೆ ಗುರುಪುರ ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ ಭವ್ಯ ಬ್ಯಾರಿ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ.
ಈ ಕುರಿತು ಈದಿನ.ಕಾಮ್ನೊಂದಿಗೆ ಮಾತನಾಡಿದ ಬ್ಯಾರಿ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರು ಹಾಗೂ ಹಿರಿಯ ಸಾಹಿತಿ ಅಬ್ದುಲ್ ರಹಿಮಾನ್ ಕುತ್ತೆತ್ತೂರು, ಬ್ಯಾರಿ ಭಾಷೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ತಲೆಮಾರಿಗೆ ತಲುಪಿಸುವ ಉದ್ದೇಶದಿಂದಲೇ ಬ್ಯಾರಿ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಕನ್ನಡ ಸಾಹಿತ್ಯ ಸಮ್ಮೇಳನಗಳು ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವಂತೆ, ಬ್ಯಾರಿ ಸಾಹಿತ್ಯ ಸಮ್ಮೇಳನವೂ ಅದೇ ಧ್ಯೇಯವನ್ನು ಹೊಂದಿದೆ. ಬ್ಯಾರಿ ಭಾಷೆ ತುಳುನಾಡಿನ ಒಂದು ಪ್ರಮುಖ ಭಾಷೆಯಾಗಿದ್ದು, ಇದು ಪ್ರಧಾನವಾಗಿ ಆಡುಭಾಷೆಯಾಗಿ ಬೆಳೆದಿದೆ. ಸ್ವಂತ ಲಿಪಿ ಇಲ್ಲದಿದ್ದರೂ, ಬ್ಯಾರಿ ಭಾಷೆ ಕನ್ನಡ ಲಿಪಿಯನ್ನು ಅನುಸರಿಸಿಕೊಂಡು ಸಾಹಿತ್ಯಿಕವಾಗಿ ಬೆಳೆಯುತ್ತಿದೆ.

ಕನ್ನಡ ಭಾಷೆ ನಮಗೆ ಅತ್ಯಂತ ಪರಿಚಿತವಾಗಿದ್ದು, ನಮ್ಮಲ್ಲಿ ಅನೇಕ ಕನ್ನಡ ಬರಹಗಾರರು ಇದ್ದಾರೆ. ಲಿಪಿಯ ಕೊರತೆಯ ಸಮಸ್ಯೆಯನ್ನು ನಿವಾರಿಸುವ ಉದ್ದೇಶದಿಂದ ಕನ್ನಡ ಲಿಪಿಯನ್ನೇ ಬಳಸಿಕೊಂಡು ಬ್ಯಾರಿ ಸಾಹಿತ್ಯವನ್ನು ಸೃಷ್ಟಿಸಲಾಗುತ್ತಿದೆ. ಈಗಾಗಲೇ ಬ್ಯಾರಿ ಭಾಷೆಯಲ್ಲಿ ಕಾದಂಬರಿಗಳು, ಕವನ ಸಂಕಲನಗಳು ಹಾಗೂ ಜೀವನ ಚರಿತ್ರೆಗಳು ಪ್ರಕಟವಾಗಿವೆ.
ಬ್ಯಾರಿ ನಮ್ಮ ಮಾತೃಭಾಷೆ. ಈ ಭಾಷೆ ಉಳಿಯಬೇಕು, ಬೆಳೆಯಬೇಕು ಎಂಬ ಆಶಯದೊಂದಿಗೆ ಸಮೃದ್ಧ ಸಾಹಿತ್ಯಿಕ ವಾತಾವರಣವನ್ನು ನಿರ್ಮಿಸುವುದೇ ಈ ಬ್ಯಾರಿ ಸಾಹಿತ್ಯ–ಸಾಂಸ್ಕೃತಿಕ ಸಮ್ಮೇಳನದ ಪ್ರಧಾನ ಉದ್ದೇಶವಾಗಿದೆ. ಇದು ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಸಮರ್ಪಿತವಾದ ಕಾರ್ಯಕ್ರಮವಾಗಿದೆ ಎಂದು ಅವರು ಹೇಳಿದರು.
ಅಂದು ಬೆಳಿಗ್ಗೆ 9.30ಕ್ಕೆ ಸಬೀಲುಲ್ ಹುದಾ ಅಲ್ಬಿರ್ ಶಾಲಾ ವಠಾರದಿಂದ ಸಭಾಂಗಣದವರೆಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದೆ. 10 ಗಂಟೆಗೆ ಧ್ವಜಾರೋಹಣವನ್ನು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಹೆಚ್. ನೆರವೇರಿಸಲಿದ್ದಾರೆ. 10.15ಕ್ಕೆ ನಡೆಯುವ ಉದ್ಘಾಟನಾ ಸಮಾರಂಭವನ್ನು ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಉದ್ಘಾಟಿಸಲಿದ್ದು, ಹಿರಿಯ ಸಾಹಿತಿ ಅಬ್ದುಲ್ ರಹಿಮಾನ್ ಕುತ್ತೆತ್ತೂರು ಸಮ್ಮೇಳನಾಧ್ಯಕ್ಷರ ಭಾಷಣ ಮಾಡಲಿದ್ದಾರೆ. ಸ್ವಾಗತ ಸಮಿತಿ ಗೌರವಾಧ್ಯಕ್ಷ ಹಾಜಿ ಎಂ.ಹೆಚ್. ಮೊಹಿದಿನ್ ಅಡ್ಡೂರುರವರು ಮೆರವಣಿಗೆಯ ಉದ್ಘಾಟನೆ ನೆರವೇರಿಸಲಿದ್ದಾರೆ.
ಈ ಸಂದರ್ಭದಲ್ಲಿ ಬ್ಯಾರಿ ಭಾಷೆಯ ಐದು ಹೊಸ ಪುಸ್ತಕಗಳ ಬಿಡುಗಡೆ ನಡೆಯಲಿದೆ. ಶಮೀಮಾ ಕುತ್ತಾರ್ ಅವರ ಪಡಿಞ್ಞಾರೊ ಪೂ (ಕಥಾ ಸಂಕಲನ), ಹಸೀನ ಮಲ್ನಾಡ್ ಅವರ ಮಿನ್ನಾಂಪುಲು, ಬಶೀರ್ ಅಹ್ಮದ್ ಬೆಳ್ಳಾಯಿರು ಅವರ ಬೆಲ್ಚ, ಎನ್.ಎಂ. ಹನೀಫ್ ನಂದರಬೆಟ್ಟು ಅವರ ಸಂಪುಕಾತ್ ಹಾಗೂ ಹೈದರಲಿ ಕಾಟಿಪಳ್ಳ ಅವರ ನಸೀಆತ್ ಕೃತಿಗಳನ್ನು ಲೋಕಾರ್ಪಣೆ ಮಾಡಲಾಗುವುದು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಹೆಚ್. ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರನಾಥ್ ಗಟ್ಟಿ ಕಾಪಿಕಾಡ್ ಹಾಗೂ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಜೋಕಿಂ ಸ್ಟ್ಯಾನಿ ಅಲ್ವಾರಿಸ್ ಭಾಗವಹಿಸಲಿದ್ದಾರೆ. ಸಹರಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯು.ಪಿ. ಇಬ್ರಾಹಿಂ ಅಡ್ಡೂರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ.
ಮಧ್ಯಾಹ್ನ 12ಕ್ಕೆ ಸಮ್ಮೇಳನಾಧ್ಯಕ್ಷರ ಭಾಷಣದ ಮೇಲೆ ಚರ್ಚಾಗೋಷ್ಠಿ ನಡೆಯಲಿದ್ದು, ಡಾ. ಅಬೂಬಕ್ಕರ್ ಸಿದ್ದಿಕ್ ಅವರ ನಿರೂಪಣೆಯಲ್ಲಿ ಹೈದರ್ ಅಲಿ, ಮುಹಮ್ಮದ್ ಅಲಿ ಉಚ್ಚಿಲ್, ಏ.ಕೆ. ಕುಕ್ಕಿಲ ಹಾಗೂ ಹಫ್ಸ್ ಬಾನು ಚರ್ಚೆಯಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 2ಕ್ಕೆ ಬ್ಯಾರಿ ಕವಿಗೋಷ್ಠಿ ನಡೆಯಲಿದ್ದು, ಬಹುಭಾಷಾ ಕವಿ ಮುಹಮ್ಮದ್ ಬಡ್ಡೂರು ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ 3ಕ್ಕೆ ಆಳ್ವಾಸ್ ಕಾಲೇಜು ದಫ್ ತಂಡದ ದಫ್ ಪ್ರದರ್ಶನ ಹಾಗೂ ಬ್ಯಾರಿ ಹಾಡುಗಳ ಸಂಭ್ರಮ ನಡೆಯಲಿದೆ.

ಸಂಜೆ 4ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ಮುಖ್ಯ ಅತಿಥಿಯಾಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಸನ್ಮಾನ ನಡೆಯಲಿದೆ. ಸಮಾರೋಪ ಭಾಷಣವನ್ನು ಬ್ಯಾರಿ ಇನ್ಫೋ.ಕಾಂ ಮುಖ್ಯಸ್ಥ ಬಿ.ಎ. ಮುಹಮ್ಮದ್ ಅಲಿ ಮಾಡಲಿದ್ದಾರೆ.
ಸಂಜೆ 6.30ರಿಂದ ರಾತ್ರಿ 8ರವರೆಗೆ ಇಸ್ಮಾಯಿಲ್ ಮೂಡುಶೆಡ್ಡೆ ನಿರ್ದೇಶನದ ‘ಬ್ರೋಕರ್ ಪೋಕರ್’ ಬ್ಯಾರಿ ನಾಟಕ ಮತ್ತು ಗುರುಪುರದ ಎಂ.ಜಿ.ಎಂ. ತಾಲೀಮು ತಂಡದಿಂದ, ತಾಲೀಮು ಪ್ರದರ್ಶನ ನಡೆಯಲಿದೆ. ಈ ಸಮ್ಮೇಳನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.





