ಕರ್ನಾಟಕದಲ್ಲಿ 19 ಲೋಕಸಭಾ ಕ್ಷೇತ್ರಗಳಲ್ಲಿ ಎಸ್ಯುಸಿಐ(ಕಮ್ಯುನಿಸ್ಟ್) ಸ್ಪರ್ಧೆ ಮಾಡುತ್ತಿದ್ದು, ಬೆಳಗಾವಿಯಿಂದ ಲಕ್ಷ್ಮಣ ಜಡಗನ್ನವರ ಕಣಕ್ಕಿಳಿದಿದ್ದಾರೆ ಎಂದು ಎಸ್ಯುಸಿಐ(ಕಮ್ಯುನಿಸ್ಟ್) ರಾಜ್ಯ ಸಮಿತಿ ಸದಸ್ಯ ರಾಮಾಂಜನಪ್ಪ ಆಲ್ದಳ್ಳಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, “ದುಡಿಯುವ ಜನರ, ರೈತ, ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ನಿತ್ಯ ಹೋರಾಟ ಕಟ್ಟುತ್ತಿರುವ ಎಸ್ಯುಸಿಐ(ಕಮ್ಯುನಿಸ್ಟ್) ಪಕ್ಷವು 2024ರ ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ನಡೆಸುತ್ತಿದೆ. ದೇಶದ 19 ರಾಜ್ಯ 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ನಮ್ಮ ಪಕ್ಷವು 151 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ” ಎಂದು ಹೇಳಿದರು.
“ಈ ಚುನಾವಣೆ ಬಂಡವಾಳಶಾಹಿ ಮತ್ತು ಕಾರ್ಮಿಕರ ನಡುವಿನ ಶೋಷಕರು ಮತ್ತು ಶೋಷಿತರ ನಡುವಿನ ಸಮರವಾಗಿದೆ. ಭಾರತದ ಶೋಷಿತ ದುಡಿಯುವ ವರ್ಗದ, ಬಡ ರೈತರ ಪರ್ಯಾಯವಾಗಿ ದೇಶದ ಎಡಪಕ್ಷಗಳು ಒಂದು ಒಕ್ಕೂಟದ ಮೂಲಕ ಜನ ಹೋರಾಟಗಳನ್ನು ಕಟ್ಟಬೇಕಾಗಿತ್ತು. ಚುನಾವಣೆಗಳು ಪರಿಹಾರವಲ್ಲ, ಸಮಾಜವಾದವೇ ನೈಜ ಪರಿಹಾರವೆಂಬ ಪ್ರಚಾರವನ್ನು ಕೈಗೆತ್ತಿಕೊಳ್ಳಬೇಕಿತ್ತು. ಆದರೆ ದುರಂತವೆಂದರೆ ಸಿಪಿಐ, ಸಿಪಿಐಎಂ ನಂತಹ ಎಡವಾದಿ ಪಕ್ಷಗಳು ಕೆಲವು ಎಂಪಿ ಸೀಟುಗಳ ಆಸೆಗೆ ಇಂಡಿಯಾ ಮೈತ್ರಿಕೂಟವನ್ನು ಸೇರಿವೆ. ಇಂತಹ ಪರಿಸ್ಥಿತಿಯಲ್ಲಿ ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷವು ಶೋಷಿತ ಜನರ ನೈಜ ಹೋರಾಟದ ಪರ್ಯಾಯವಾಗಿ ತನ್ನ ಶಕ್ತಿಮೀರಿ ಈ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದೆ” ಎಂದು ಹೇಳಿದರು.
“ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷದ ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಲಕ್ಷ್ಮಣ ಜಡಗನ್ನವರ 2000ನೇ ಇಸವಿಯಲ್ಲಿ ನಮ್ಮ ಪಕ್ಷದ ಸಂಸ್ಥಾಪಕ ಶಿವದಾಸ್ ಘೋಷ್ ಅವರ ಚಿಂತನೆಗಳಿಗೆ ಆಕರ್ಷಿತರಾಗಿ ಧಾರವಾಡದಲ್ಲಿ ಪಕ್ಷದ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಾರೆ. ಪ್ರಾರಂಭದಲ್ಲಿ ಯುವಜನ ಸಂಘಟನೆ ಎಐಡಿವೈಓ ಜಿಲ್ಲಾ ನಾಯಕರಾಗಿ, ರಾಜ್ಯ ನಾಯಕರಾಗಿ ಧಾರವಾಡ, ಬೆಳಗಾವಿ ಸೇರಿದಂತೆ ಈ ವಿಭಾಗದಲ್ಲಿ ಯುವಜನರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಸತತವಾಗಿ ಹೋರಾಟಗಳಿಗೆ ನೇತೃತ್ವ ವಹಿಸಿದ್ದಾರೆ” ಎಂದು ಹೇಳಿದರು.
“ಪ್ರಾರಂಭದಿಂದಲೂ ಪಕ್ಷದ ಪೂರ್ಣಾವಧಿ ಕಾರ್ಯಕರ್ತರಾಗಿ ಯುವಜನರ, ರೈತ-ಕಾರ್ಮಿಕರ ಚಳವಳಿಗಳಿಗೆ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಪ್ರಸ್ತುತ ಎಸ್ಯುಸಿಐ(ಸಿ) ಪಕ್ಷದ ಧಾರವಾಡ ಜಿಲ್ಲಾ ಕಾರ್ಯದರ್ಶಿಯಾಗಿ ಜಿಲ್ಲೆಯ ಜನಹೋರಾಟಗಳಿಗೆ ನೇತೃತ್ವ ವಹಿಸುತ್ತಿದ್ದಾರೆ” ಎಂದರು.
ಈ ಸುದ್ದಿ ಓದಿದ್ದೀರಾ? ವಿಜಯಪುರ | ʼದೇಶ ಉಳಿಸಿ ಸಂಕಲ್ಪ ಯಾತ್ರೆʼ ಸಮಾವೇಶ
“ಬೆಳಗಾವಿ ಜಿಲ್ಲೆಯ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷರಾಗಿ ಜಿಲ್ಲೆಯ ಆಶಾ ಕಾರ್ಯಕರ್ತೆಯರ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಹೋರಾಟಗಳನ್ನು ಬೆಳೆಸಿದ್ದಾರೆ. ಕೊಳಗೇರಿಗಳಲ್ಲಿ ವಾಸಿಸುವ ನಿವೇಶನ ರಹಿತರಿಗೆ ನಿವೇಶನ ಒದಗಿಸಲು ಆಗ್ರಹಿಸಿ ಬೆಳಗಾವಿ ಜಿಲ್ಲೆಯಲ್ಲಿ ಹಲವಾರು ವರ್ಷಗಳು ನಡೆದ ಹೋರಾಟಗಳಿಗೆ ನೇತೃತ್ವ ವಹಿಸಿದ್ದರು. ಇಂತಹ ಜನಪರ ಹೋರಾಟಗಾರನನ್ನು ಜಿಲ್ಲೆಯ ಪ್ರಜ್ಞಾವಂತ ಮತದಾರರು ಬೆಂಬಲಿಸಬೇಕು” ಎಂದು ಮನವಿ ಮಾಡಿದರು.
ಪತ್ರಿಕಾಗೋಷ್ಟಿಯಲ್ಲಿ ಪಕ್ಷದ ಅಭ್ಯರ್ಥಿ ಲಕ್ಷ್ಮಣ ಜಡಗನ್ನವರ, ಮುಖಂಡರುಗಳಾದ ಲಕ್ಕಪ್ಪ ಬಿಜ್ಜನ್ನವರ ಹಾಗೂ ರಾಜು ಗಾಣಗಿ ಇದ್ದರು.





