ವಿಧಾನಸಭೆ ಚುನಾವಣೆಗೂ ಮುನ್ನ ಸಿದ್ದರಾಮಯ್ಯರವರು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮೊದಲ ಅಧಿವೇಶನದಲ್ಲೇ 2ಬಿ ಮೀಸಲಾತಿಯನ್ನು ಜಾರಿಗೆ ತರುತ್ತೇವೆ. ಕಾಂತರಾಜ್ ಆಯೋಗದ ವರದಿಯನ್ನು ಸಾರ್ವಜನಿಕಗೊಳಿಸುತ್ತೇವೆ ಎಂದು ಆಶ್ವಾಸನೆ ನೀಡಿ ಅಧಿಕಾರಕ್ಕೆ ಬಂದರು. ಆದರೆ ಅಧಿಕಾರಕ್ಕೆ ಬಂದ ನಂತರ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜನರನ್ನು ವಂಚಿಸುತ್ತಿದೆ ಎಂದು ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಆರ್.ಭಾಸ್ಕರ್ ಪ್ರಸಾದ್ ಆರೋಪಿಸಿದರು.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ವತಿಯಿಂದ ಸಾಮಾಜಿಕ ನ್ಯಾಯಕ್ಕಾಗಿ ʼಚಲೋ ಬೆಳಗಾವಿ – ಅಂಬೇಡ್ಕರ್ ಜಾಥಾʼ ಡಿಸೆಂಬರ್ 6 ರಂದು ಬೆಂಗಳೂರಿನ ವಿಧಾನಸೌಧದಿಂದ ಪ್ರಾರಂಭವಾಗಿ, ಡಿಸೆಂಬರ್ 11 ರಂದು ಬೆಳಗಾವಿಯ ಸುವರ್ಣಸೌಧದ ಬಳಿ ಅಂತ್ಯಗೊಳ್ಳುವ ಜಾಥಾ ಶನಿವಾರ ರಾಯಚೂರಿಗೆ ತಲುಪಿತು.
ರಾಯಚೂರು ಜಿಲ್ಲೆಯ ನೂರಾರು ಕಾರ್ಯಕರ್ತರು ಜಾಥಾದಲ್ಲಿ ಪಾಲ್ಗೊಂಡು ಸಾರ್ವಜನಿಕರ ಸಭೆ ನಡೆಸಿ ಸಾಮಾಜಿಕ ನ್ಯಾಯಕ್ಕಾಗಿ ಸಂವಿಧಾನಬದ್ಧ ಹೋರಾಟ ರೂಪಿಸುವುದು ಅನಿವಾರ್ಯವಾಗಿದೆ ಎಂದು ಹೇಳಿದರು.
ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಜಾಥಾ ಉದ್ದೇಶಿಸಿ ಮಾತನಾಡಿ, “ಸಾಮಾಜಿಕ ನ್ಯಾಯದ ನೆಲೆಗಟ್ಟಿನಲ್ಲಿ ಪ್ರಜೆಗಳಿಗೂ ಸಮಾನ ಅವಕಾಶ, ಹಕ್ಕು, ಅಧಿಕಾರ ಮತ್ತು ಆಸ್ತಿ ಹಂಚಿಕೆಯಾಗಬೇಕು ಎಂಬುದು ಸಂವಿಧಾನದ ಆಶಯವಾಗಿದೆ. ಎಲ್ಲರಿಗೂ ಸಮಾನ ಹಕ್ಕು, ಅಧಿಕಾರ ಮತ್ತು ಅವಕಾಶಗಳು ಸಿಗಬೇಕೆನ್ನುವ ಉದ್ದೇಶ ಹೊಂದಿದ್ದೇವೆ ಎಂದು ಎಲ್ಲ ಪಕ್ಷಗಳು ಹೇಳುತ್ತವೆ. ಆದರೆ ಅವರ ಪಕ್ಷದ ಸರ್ಕಾರ ಆಡಳಿತ ನಡೆಸುವ ವೇಳೆ ಶೋಷಿತ, ಅವಕಾಶವಂಚಿತ ಸಮುದಾಯಗಳಿಗೆ ದ್ರೋಹವೆಸಗುತ್ತಲೇ ಬಂದಿವೆ. ಕೂಡಲೇ ಒಳ ಮೀಸಲಾತಿ ಕುರಿತು ಸರಕಾರ ತೀರ್ಮಾನ ಕೈಗೊಳ್ಳಬೇಕು ಮತ್ತು ಸದಾಶಿವ ಆಯೋಗದ ವರದಿಯನ್ನು ಒಕ್ಕೂಟ ಸರಕಾರಕ್ಕೆ ಶಿಫಾರಸ್ಸು ಮಾಡಬೇಕು” ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ : ಸ್ಥಳದಲ್ಲೇ ಓರ್ವ ಸಾವು
ಈ ಸಂದರ್ಭದಲ್ಲಿ ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಖಜಾಂಚಿ ಇಶಾಕ್ ಖಾಲಿದ್ ಹುಸೇನ್, ರಾಜ್ಯ ಸಮಿತಿ ಸದಸ್ಯರಾದ ಅಮ್ಜದ್ ಖಾನ್ ಮೈಸೂರು, ರಿಯಾಜ್ ಕಡಂಬು, ಯಮುನಪ್ಪ ಗುಣದಾಳ, ರಂಜಾನ್ ಕಡಿವಾಳ್, ರಾಯಚೂರು ಜಿಲ್ಲಾಧ್ಯಕ್ಷ ಜೀಲಾನಿಪಾಷಾ, ಜಿಲ್ಲಾ ಉಪಾಧ್ಯಕ್ಷ ಮತೀನ್ ಅನ್ಸಾರಿ, ಪ್ರಧಾನ ಕಾರ್ಯದರ್ಶಿ ಎಂ.ಡಿ.ಘೌಸ್, ದಲಿತ ಮುಖಂಡ ಅಂಬಾನ ಅರೋಲಿಕರ್. ಜಮಾತ್ ಇಸ್ಲಾಂ ಇ ಹಿಂದ್ ಅಧ್ಯಕ್ಷ ಅಸಿಮುದ್ದೀನ್ ಅಖ್ತರ್ ಸೇರಿದಂತೆ ಪ್ರಗತಿಪರ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
ವರದಿ : ತೌಸೀಫ್





