ಮದುವೆಯಾದ ನಾಲ್ಕು ತಿಂಗಳಲ್ಲೇ ಪತಿಯೊಬ್ಬ ಪತ್ನಿಯನ್ನು ಕೊಂದು ಮಂಚದಡಿ ಶವವನ್ನು ಹೂತಿಟ್ಟ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಮಲದಿನ್ನಿ ಗ್ರಾಮದಲ್ಲಿ ನಡೆದಿದೆ.
ಸಾಕ್ಷಿ ಆಕಾಶ್ ಕಂಬಾರ (20) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಪತಿ ಆಕಾಶ್ ಕಂಬಾರ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತೆಯ ಅತ್ತೆ ಊರಿಗೆ ತೆರಳಿ ಮೂರು ದಿನಗಳ ಬಳಿಕ ಮನೆಗೆ ಬಂದಾಗ ಕೊಲೆಯ ವಿಚಾರ ಬೆಳಕಿಗೆ ಬಂದಿದೆ. ಶವವು ಬೆಡ್ ಕೆಳಗೆ ಪತ್ತೆಯಾಗಿದ್ದು, ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಘಟನೆ ಕುರಿತು ಮಾಹಿತಿ ದೊರಕುತ್ತಿದ್ದಂತೆಯೇ ಮೂಡಲಗಿ ಪೊಲೀಸರು ಹಾಗೂ ಗೋಕಾಕ ಡಿವೈಎಸ್ಪಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಬೆಳಗಾವಿ | ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆ; ರಮೇಶ್ ಕತ್ತಿ ಪೆನಲ್ ಗೆಲುವಿಗೆ ಕಾರಣವಾದ ಅಂಶಗಳಿವು…
ಸ್ಥಳಕ್ಕೆ ಮೂಡಲಗಿ ತಹಶೀಲ್ದಾರ್ ಶ್ರೀಶೈಲ್ ಗುಡಮೆ ಭೇಟಿ ನೀಡಿ ಕುಟುಂಬಸ್ಥರಿಂದ ಮಾಹಿತಿ ಪಡೆದಿದ್ದಾರೆ. ಸಾಕ್ಷಿಯ ಕುಟುಂಬಸ್ಥರು ವರದಕ್ಷಿಣೆ ಕಿರುಕುಳದ ಆರೋಪ ಮಾಡಿದ್ದಾರೆ ಎನ್ನಲಾಗಿದೆ.
ಕೊಲೆಯ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ. ಮೂಡಲಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಾರಿಯಾಗಿರುವ ಆರೋಪಿಯ ಪತ್ತೆ ಕಾರ್ಯವನ್ನು ತೀವ್ರಗೊಳಿಸಿದ್ದಾರೆ.





