ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರವನ್ನು ತಕ್ಷಣ ಆರಂಭಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಗೋಕಾಕ ತಹಶೀಲ್ದಾರಿಗೆ ಮನವಿ ಸಲ್ಲಿಸಿದರು.
ಪ್ರಸ್ತುತ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಬೆಂಬಲ ಬೆಲೆಯಲ್ಲಿ ಹೆಸರು, ಉದ್ದು ಮತ್ತು ಸೋಯಾಬಿನ್ ಖರೀದಿ ಕೇಂದ್ರಗಳನ್ನು ಗೋಕಾಕ ಮಾರುಕಟ್ಟೆಯಲ್ಲಿ ಆರಂಭಿಸಲಾಗಿದೆ. ಆದರೆ ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ಘೋಷಣೆ ಹಾಗೂ ಖರೀದಿ ಕೇಂದ್ರ ಆರಂಭಿಸುವ ಕುರಿತು ಯಾವುದೇ ಮಾಹಿತಿ ನೀಡದಿರುವುದು ರೈತರ ಅಸಮಾಧಾನಕ್ಕೆ ಕಾರಣವಾಗಿದೆ.
ತಾಲೂಕಿನಾದ್ಯಂತ ಶೇಕಡಾ 90ರಷ್ಟು ರೈತರು ಮೆಕ್ಕೆಜೋಳ ಬೆಳೆ ಬೆಳೆಸುತ್ತಿರುವುದರಿಂದ, ಅವರ ಹಿತವನ್ನು ಗಮನಿಸಿ ತಕ್ಷಣವೇ ಮೆಕ್ಕೆಜೋಳ ಖರೀದಿ ಕೇಂದ್ರವನ್ನು ಪ್ರಾರಂಭಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಮನವಿ ಸಲ್ಲಿಕೆಯಲ್ಲಿ ರೈತ ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷ ಶಿದ್ದಲಿಂಗ ಪೂಜಾರಿ, ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ ಪೂಜಾರಿ, ಕಾರ್ಯದರ್ಶಿ ಕುಮಾರ ತಿಗಡಿ, ಮಾಯಪ್ಪ ಹೆಗಡೆ, ರಾಯಪ್ಪ ಗೌಡಪ್ಪನವರ, ಪ್ರಕಾಶ ಹುಲ್ಲನ್ನವರ, ಸತ್ತೆಪ್ಪ ಮಲ್ಲಾಪೂರ, ಲಾಲಸಾಬ ಶಿವಾಪೂರ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.





