ಡಿಸಿಸಿ ಬ್ಯಾಂಕ್ ಲೇಬರ್ ಯುನಿಯನ್ ಅಧ್ಯಕ್ಷ ನಿಂಗಪ್ಪ ಕರೆಣ್ಣವರ ಅವರ ಮೇಲೆ ಅಥಣಿ ಶಾಸಕ ಲಕ್ಷ್ಮಣ ಸವದಿ ಹಾಗೂ ಅವರ ಪುತ್ರ ಚಿದಾನಂದ ಸವದಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಕೆಲಸದ ಸಂಬಂಧ ಶಾಸಕರ ಮನೆಗೆ ತೆರಳಿದ್ದ ವೇಳೆ, “ನಮ್ಮ ಮನೆಗೆ ಏಕೆ ಬಂದೆ” ಎಂದು ಪ್ರಶ್ನಿಸಿ ತಲೆ ಒಡೆಯುವಂತೆ ಹಲ್ಲೆ ನಡೆಸಲಾಗಿದೆ ಎಂದು ನಿಂಗಪ್ಪ ಕರೆಣ್ಣವರ ಆರೋಪಿಸಿದ್ದಾರೆ.
ಘಟನೆ ನಡೆದ ತಕ್ಷಣ ಶಾಸಕ ಲಕ್ಷ್ಮಣ ಸವದಿ ಅವರ ಮನೆ ಸಮೀಪದಿಂದಲೇ ಗಾಯಗೊಂಡ ನಿಂಗಪ್ಪ ಕರೆಣ್ಣವರ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಈ ಘಟನೆ ರಾಜಕೀಯ ಹಾಗೂ ಕಾರ್ಮಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಪ್ರಕರಣ ಸಂಬಂಧ ಪೊಲೀಸ್ ತನಿಖೆ ಆರಂಭವಾಗುವ ನಿರೀಕ್ಷೆಯಿದೆ.
ಈ ಕುರಿತು ಶಾಸಕ ಲಕ್ಷ್ಮಣ ಸವದಿ ಅಥವಾ ಅವರ ಪುತ್ರ ಚಿದಾನಂದ ಸವದಿ ಅವರಿಂದ ಇನ್ನಷ್ಟೇ ಪ್ರತಿಕ್ರಿಯೆ ಲಭ್ಯವಾಗಬೇಕಿದೆ.





