ಬೆಳಗಾವಿ ಜಿಲ್ಲೆಯ ಮುರಗೋಡ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಏಳನೇ ತರಗತಿ ವಿದ್ಯಾರ್ಥಿನಿಗೆ ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ನವೆಂಬರ್ 23ರಂದು ಮನೆಯಿಂದ ಹಿಟ್ಟಿನ ಗಿರಣಿಗೆ ತೆರಳುತ್ತಿದ್ದ ಬಾಲಕಿಯನ್ನು ಇಬ್ಬರು ಯುವಕರು ಬಲವಂತವಾಗಿ ಕಬ್ಬಿನ ಗದ್ದೆಗೆ ಎಳೆದೊಯ್ದು ದೌರ್ಜನ್ಯ ಎಸಗಿದ್ದಾರೆ. ಮನೆಯಲ್ಲಿ ಪೋಷಕರಿಗೆ ವಿಷಯ ತಿಳಿಸಿದ ನಂತರ ಪ್ರಕರಣ ಹೊರಬಿದ್ದಿದ್ದು, ಪೊಲೀಸರು ತಕ್ಷಣ ದೂರು ದಾಖಲಿಸಿದ್ದಾರೆ.
ಆರೋಪಿಗಳಾದ ಮಣಿಕಂಠ ದಿನ್ನಿಮನಿ ಹಾಗೂ ಈರಣ್ಣ ಸಂಕಮ್ಮನವರ್ ಅವರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸಂತ್ರಸ್ತ ಬಾಲಕಿಗೆ ಜೀವ ಬೆದರಿಕೆ ಹಾಕಿದ್ದರು ಎಂಬುದೂ ದೂರಿನಲ್ಲಿ ಉಲ್ಲೇಖಗೊಂಡಿದ್ದು, ಪ್ರಕರಣವನ್ನು ಪೋಕ್ಸೋ ಕಾಯ್ದೆಯಡಿ ದಾಖಲಿಸಲಾಗಿದೆ.
ಘಟನೆಯ ಕುರಿತು ಪ್ರತಿಕ್ರಿಯಿಸಿದ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೆದ್, “ಸಂತ್ರಸ್ತ ಬಾಲಕಿ ರಕ್ಷಣೆಗಾಗಿ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಗತ್ಯವಿದ್ದರೆ ಕುಟುಂಬಕ್ಕೆ ಹೆಚ್ಚುವರಿ ಭದ್ರತೆ ಒದಗಿಸಲಾಗುತ್ತದೆ,” ಎಂದು ತಿಳಿಸಿದ್ದಾರೆ.





