ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಆಸ್ಪತ್ರೆಗಳು ಹಾಗೂ ಕ್ಲಿನಿಕ್ಗಳ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜೈ ಭೀಮ ಯುವ ಜಾಗೃತ ಸೇನೆಯ ವತಿಯಿಂದ ರಾಮದುರ್ಗ ನಗರದ ಸಾರ್ವಜನಿಕ ಆಸ್ಪತ್ರೆಯ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲಾಯಿತು.
ತಾಲೂಕಿನಲ್ಲಿ ಕೆಪಿಎಂಇ (KPME) ಕಾಯ್ದೆಯಡಿ ನೋಂದಣಿ ಮಾಡಿಕೊಂಡ ಬಳಿಕ ನಿಯಮಗಳನ್ನು ಉಲ್ಲಂಘಿಸಿ ಆಸ್ಪತ್ರೆ ಹಾಗೂ ಕ್ಲಿನಿಕ್ಗಳನ್ನು ನಡೆಸುತ್ತಿರುವ ಹಲವು ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಇವುಗಳಲ್ಲಿ ನೂರಾರು ಜನರು ಚಿಕಿತ್ಸೆ ಪಡೆಯುತ್ತಿದ್ದು, ಭವಿಷ್ಯದಲ್ಲಿ ಆರೋಗ್ಯ ಸಮಸ್ಯೆಗಳು ಉಂಟಾದರೆ ಯಾರು ಜವಾಬ್ದಾರರು ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮೂಡಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಈ ಬಗ್ಗೆ ಹಲವು ಬಾರಿ ತಾಲೂಕು ಆರೋಗ್ಯಾಧಿಕಾರಿಗಳ ಗಮನಕ್ಕೆ ತಂದರೂ ಇದುವರೆಗೆ ಯಾವುದೇ ಪರಿಣಾಮಕಾರಿ ಕಾನೂನು ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಮದುರ್ಗ ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಆಹಾರ ಗುಣಮಟ್ಟ ಹಾಗೂ ಸುರಕ್ಷತೆ ವಿಷಯದಲ್ಲಿ ಗಂಭೀರ ಲೋಪಗಳು ಕಂಡುಬಂದಿವೆ. ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ, ಹುಳುಗಳಿಂದ ಕೂಡಿದ ಆಹಾರ ವಸ್ತುಗಳು, ಆರೋಗ್ಯಕ್ಕೆ ಹಾನಿಕಾರಕ ರಾಸಾಯನಿಕಗಳನ್ನು ಬಳಸಿ ಕೇಕ್ ಹಾಗೂ ಇತರೆ ಆಹಾರ ಪದಾರ್ಥಗಳನ್ನು ತಯಾರಿಸಿ ಮಾರಾಟ ಮಾಡುತ್ತಿರುವುದು ವಿಡಿಯೋ ಸಾಕ್ಷ್ಯ ಸಮೇತ ಪತ್ತೆಯಾಗಿದೆ.
ಈ ಕುರಿತು ಜೈ ಭೀಮ ಯುವ ಜಾಗೃತ ಸೇನೆಯಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ ದಾಳಿಗೂ ಮುಂದಾಗಲಾಗಿದೆ. ಆದರೆ ಸಾಕಷ್ಟು ಲೋಪಗಳು ಪತ್ತೆಯಾಗಿದ್ದರೂ ಯಾವುದೇ ಮಳಿಗೆಗಳ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸದೆ ಕೇವಲ ಕಾಟಾಚಾರಕ್ಕಾಗಿ ದಾಳಿ ನಡೆಸಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಇದುವರೆಗೆ ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಸ್ಪಷ್ಟ ಹಿಂಬರಹವೂ ಲಭ್ಯವಾಗಿಲ್ಲ ಎಂದು ಹೇಳಿದರು.
ಅನಧಿಕೃತ ಆಸ್ಪತ್ರೆಗಳು ಹಾಗೂ ಅಸ್ವಚ್ಛ ಆಹಾರ ಮಾರಾಟದಿಂದ ಸಾರ್ವಜನಿಕರ ಜೀವಕ್ಕೆ ಅಪಾಯ ಎದುರಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಲಾಖೆಗಳು ತಕ್ಷಣ ದಾಳಿ ನಡೆಸಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದರು.
ಈ ವೇಳೆ ಅಭಿ ಮುನವಳ್ಳಿ, ವಿರೇಶ ಬಳಿಗೇರ, ವಿನಯ ಚಂದರಗಿ, ಫರ್ವೇಜ್ ಫನಿಬಂದ ಹಾಗೂ ಕರವೇ ಮುಖಂಡರು ಸದಸ್ಯರು ಹಾಗೂ ಜನಸಾಮಾನ್ಯರ ಸಮಿತಿ ಸದಸ್ಯರು ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.




