ಬೇರೆ ಹಲವಾರು ಸ್ವಾತಂತ್ರ್ಯ ಹೋರಾಟಗಾರರಿಗೆ ಸಿಕ್ಕಿರುವ ಗೌರವ ಮತ್ತು ಸ್ಥಾನಮಾನ ಕಿತ್ತೂರು ರಾಣಿ ಚೆನ್ನಮ್ಮನಿಗೆ ಸಿಕ್ಕಿಲ್ಲ. ಆದ್ದರಿಂದ ಚೆನ್ನಮ್ಮನ ಇತಿಹಾಸದ ಕುರಿತು ಇನ್ನಷ್ಟು ಆಳವಾದ ಸಂಶೋಧನೆಗಳು ನಡೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.
ಕಿತ್ತೂರಿನಲ್ಲಿ ಗುರುವಾರದಿಂದ ಆರಂಭವಾದ ಐತಿಹಾಸಿಕ ಕಿತ್ತೂರು ರಾಣಿ ಚೆನ್ನಮ್ಮ ವಿಜಯೋತ್ಸವ ಕಾರ್ಯಕ್ರಮದ ಉದ್ಘಾಟನೆಯಲ್ಲಿ ಅವರು ಮಾತನಾಡಿದರು.
“ಮಹಾನ್ ಪುರುಷರ ಇತಿಹಾಸವನ್ನು ಇಂದಿನ ಪೀಳಿಗೆಗೆ ತಿಳಿಸುವ ಉದ್ದೇಶದಿಂದ ಇಂತಹ ಉತ್ಸವಗಳನ್ನು ಆಚರಿಸುತ್ತೇವೆ. ರಾಜ್ಯ ಸರ್ಕಾರವು ಈ ಬಾರಿ 5 ಕೋಟಿ ರೂ. ಅನುದಾನ ನೀಡಿ ಉತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಕ್ರಮ ಕೈಗೊಂಡಿದೆ,” ಎಂದರು.
ಕಾರ್ಯಕ್ರಮದಲ್ಲಿ ಕಿತ್ತೂರು ಕಲ್ಮಠದ ಶ್ರೀ ಮ.ನಿ.ಪ್ರ.ಸ್ವ ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮಿಗಳು, ನಿಚ್ಚಣಕಿಯ ಶ್ರೀ ಮ.ನಿ.ಪ್ರ.ಸ್ವ ಪಂಚಾಕ್ಷರಿ ಮಹಾಸ್ವಾಮಿಗಳು, ಲಿಂಗಾಯತ ಪಂಚಮಸಾಲಿ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಶಾಸಕರಾದ ಬಾಬಾಸಾಹೇಬ್ ಪಾಟೀಲ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಎಸ್.ಪಿ. ಭೀಮಾಶಂಕರ್ ಗುಳೇದ್, ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ವಿಧಾನ ಪರಿಷತ್ ಸದಸ್ಯರು ಹಣಮಂತ ನಿರಾಣಿ, ಭರಮಣ್ಣ ಉಪ್ಪಾರ, ಜಯಸಿದ್ರಾಮ ಮಾರಿಹಾಳ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.





