ಉತ್ತರ ಕರ್ನಾಟಕ ಭಾಗದಲ್ಲಿ ಟ್ರ್ಯಾಕ್ಟರ್ಗಳು ಸೇರಿದಂತೆ ಇತರೆ ವಾಹನಗಳಿಗೆ ಅಳವಡಿಸಿರುವ ಅನಧಿಕೃತ ‘ಡಿಜೆ ಸೌಂಡ್’ ವ್ಯವಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಸಾಮಾಜಿಕ ಹೋರಾಟಗಾರ ಶ್ರೀನಿವಾಸಗೌಡ ಬಾ. ಪಾಟೀಲ್ ನಾಲ್ಕು ತಿಂಗಳುಗಳಿಂದ ಹೋರಾಟ ನಡೆಸುತ್ತಿದ್ದಾರೆ.

ಆದರೆ, ಈ ಕುರಿತು ಸಾರಿಗೆ ಇಲಾಖೆಯ ಅಧಿಕಾರಿಗಳು ಸ್ಪಂದಿಸಿಲ್ಲವೆಂದು ಆರೋಪಿಸಿ, ಬೆಳಗಾವಿ ಜಿಲ್ಲಾಧಿಕಾರಿ ಸೇರಿದಂತೆ ಐದು ಮಂದಿ ಅಧಿಕಾರಿಗಳ ವಿರುದ್ಧ ಕರ್ನಾಟಕ ಲೋಕಾಯುಕ್ತ, ಬೆಂಗಳೂರು ಅವರಿಗೆ ದೂರು ಸಲ್ಲಿಸಲಾಗಿದೆ.
ಅಕ್ರಮ ಡಿಜೆ ಸೌಂಡ್ನಿಂದ ವಿದ್ಯಾರ್ಥಿಗಳು, ಮಹಿಳೆಯರು, ವೃದ್ಧರು ಹಾಗೂ ರೋಗಿಗಳಿಗೆ ತೀವ್ರ ತೊಂದರೆ ಉಂಟಾಗುತ್ತಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಶಬ್ದ ಮಾಲಿನ್ಯ ಹೆಚ್ಚಾಗಿ ಶಾಂತಿ ಭಂಗವಾಗುತ್ತಿದೆ. ಇದಲ್ಲದೆ, ಕೆಲವು ಅಪಘಾತಗಳಿಗೆ ಸಹ ಇದು ಕಾರಣವಾಗುತ್ತಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ.
ಈ ಸಂಬಂಧ ಸಂಬಂಧಪಟ್ಟ ಅಧಿಕಾರಿಗಳಿಗೆ ಪದೇ ಪದೇ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅವರು ತಿಳಿಸಿದ್ದಾರೆ.
ಆರೋಪಿ ಅಧಿಕಾರಿಗಳ ಪಟ್ಟಿ
ಯೋಗೀಶ್ ಎ.ಎಂ. – ಸಾರಿಗೆ ಆಯುಕ್ತರು, ಬೆಂಗಳೂರು
ಕೆ.ಟಿ. ಹಾಲಸ್ವಾಮಿ – ಹೆಚ್ಚುವರಿ ಸಾರಿಗೆ ಆಯುಕ್ತರು, ಧಾರವಾಡ
ಸಿದ್ದಪ್ಪ ಕಲ್ಲೆರ್ – ಜಂಟಿ ಸಾರಿಗೆ ಆಯುಕ್ತರು, ಬೆಳಗಾವಿ ವಿಭಾಗ
ಮೊಹಮ್ಮದ್ ರೋಶನ್ – ಜಿಲ್ಲಾಧಿಕಾರಿ, ಬೆಳಗಾವಿ
ಬಸವರಾಜ ಬಾಗಲ – ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ, ರಾಮದುರ್ಗ
ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಅಂತರಾಜ್ಯ ಕಳ್ಳರ ಬಂಧನ: ಲಕ್ಷ ರೂಪಾಯಿ ಮೌಲ್ಯದ ಆಭರಣ ವಶ
“ನಾಲ್ಕು ತಿಂಗಳಿಂದ ಮನವಿ ಹಾಗೂ ಪ್ರತಿಭಟನೆ ನಡೆಸಿದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ, ಕರ್ತವ್ಯಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ” ಎಂದು ಶ್ರೀನಿವಾಸಗೌಡ ಪಾಟೀಲ್ ಈ ದಿನ.ಕಾಮ್ ಜತೆ ಮಾತನಾಡಿ ತಿಳಿಸಿದ್ದಾರೆ.




