ಜನರ ಭಾವನೆಗಳಿಗೆ ಸ್ಪಂದಿಸುವ ಸರ್ಕಾರಗಳಿಂದ ಮಾತ್ರ ಅಭಿವೃದ್ಧಿ ಸಾಧ್ಯ. ಆದರೆ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನ ಇದೀಗ ಕೇವಲ ‘ಟೂರಿಂಗ್ ಟಾಕೀಸ್’ ಆಗಿ ಮಾರ್ಪಟ್ಟಿದೆ ಎಂದು ಮಾಜಿ ಸಂಸದ ರಮೇಶ ಕತ್ತಿ ಆರೋಪಿಸಿದರು.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅಮ್ಮಣಗಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮತೋಲನ ನಿವಾರಣೆಯ ಉದ್ದೇಶದಿಂದ 2006ರಿಂದ ಇಲ್ಲಿವರೆಗೆ 13 ಬಾರಿ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನಗಳು ನಡೆದಿವೆ. ಪ್ರಸ್ತುತ 14ನೇ ಅಧಿವೇಶನವೂ ಅರ್ಧದಷ್ಟು ಪೂರ್ಣಗೊಂಡಿದ್ದು, ಈ ಅಧಿವೇಶನಗಳಿಂದ ಉತ್ತರ ಕರ್ನಾಟಕದ ಜನರಿಗೆ ಯಾವ ರೀತಿಯ ಪ್ರಯೋಜನವಾಗಿದೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.
ಬೆಂಗಳೂರಿನಿಂದ ಬೆಳಗಾವಿಗೆ ಆಗಮಿಸುವ ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಸುತ್ತಮುತ್ತಲ ಜಿಲ್ಲೆಗಳಲ್ಲಿನ ವಾಸ್ತವ ಸ್ಥಿತಿಗತಿಗಳನ್ನು ಪ್ರಾಮಾಣಿಕವಾಗಿ ಅವಲೋಕಿಸಿ ಸರ್ಕಾರಕ್ಕೆ ವರದಿ ಸಲ್ಲಿಸಿದಲ್ಲಿ ಮಾತ್ರ ಇಲ್ಲಿನ ಜನರ ಬದುಕಿನಲ್ಲಿ ಬದಲಾವಣೆ ಸಾಧ್ಯ ಎಂದು ಅವರು ಹೇಳಿದರು.
ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತು ಧ್ವನಿ ಎತ್ತುವ ಜನಪ್ರತಿನಿಧಿಗಳನ್ನು ವೈರಿಗಳಂತೆ ಕಾಣುವ ಧೋರಣೆ ಎಲ್ಲಾ ಪಕ್ಷಗಳಲ್ಲೂ ಇದೆ. ಇದು ಬದಲಾಗಬೇಕು. ಈ ಭಾಗದ ಜನರಲ್ಲಿನ ಆಶಾವಾದ ವರ್ಷದಿಂದ ವರ್ಷಕ್ಕೆ ಕ್ಷೀಣಗೊಳ್ಳುತ್ತಿದೆ. ಆದ್ದರಿಂದ ಎಲ್ಲ ಪಕ್ಷಗಳ ಜನಪ್ರತಿನಿಧಿಗಳು ಪಕ್ಷಾತೀತವಾಗಿ ಒಗ್ಗಟ್ಟಾಗಿ ತಮ್ಮ ವಾದ ಮಂಡಿಸಿ ಸರ್ಕಾರದ ಮೇಲೆ ಒತ್ತಡ ತರುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಕತ್ತಿ ಕರೆ ನೀಡಿದರು.
ಜಿಲ್ಲೆ ವಿಭಜನೆಗೆ ಒತ್ತಾಯ
ಬೆಳಗಾವಿ ಜಿಲ್ಲೆಯ ವಿಭಜನೆಗೆ ಸಂಬಂಧಿಸಿದಂತೆ ಮಠಾಧೀಶರು, ಹಿರಿಯರು, ನಾಯಕರು, ಹಾಲಿ ಹಾಗೂ ಮಾಜಿ ಶಾಸಕರು, ಸಂಸದರ ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ಸಭೆಗಳನ್ನು ನಡೆಸಬೇಕು. ಕಾನೂನು ತಜ್ಞರ ಸಲಹೆ ಪಡೆದು ಭೌಗೋಳಿಕವಾಗಿ ಜನರಿಗೆ ಅನುಕೂಲವಾಗುವ ಪ್ರದೇಶಗಳನ್ನು ಜಿಲ್ಲಾ ಕೇಂದ್ರಗಳಾಗಿ ಘೋಷಿಸುವ ಮೂಲಕ ಸರ್ಕಾರ ಚಳಿಗಾಲದ ಅಧಿವೇಶನಕ್ಕೆ ಸಾರ್ಥಕತೆ ತರುವಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಕಾರ್ಯಕ್ರಮದಲ್ಲಿ ಯುವ ಧುರೀಣ ವಿನಯ ಪಾಟೀಲ, ಬಸವಣ್ಣಿನಾಗನೂರಿ, ಪ್ರಶಾಂತ ಪಾಟೀಲ ಉಪಸ್ಥಿತರಿದ್ದರು.





