ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) 25ನೇ ವಾರ್ಷಿಕ ಘಟಿಕೋತ್ಸವದ ಭಾಗ-2 ಫೆಬ್ರವರಿ 2ರಂದು ಜ್ಞಾನ ಸಂಗಮದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ 25 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಹಾಗೂ 96 ವಿದ್ಯಾರ್ಥಿಗಳಿಗೆ ವಿವಿಧ ರ್ಯಾಂಕ್ಗಳನ್ನು ಪ್ರದಾನ ಮಾಡಲಾಗುವುದು ಎಂದು ವಿಟಿಯು ಕುಲಪತಿ ಡಾ. ವಿದ್ಯಾಶಂಕರ್ ಎಸ್. ತಿಳಿಸಿದರು.
ಗುರುವಾರ ವಿಟಿಯು ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಘಟಿಕೋತ್ಸವದ ಅಧ್ಯಕ್ಷತೆಯನ್ನು ರಾಜ್ಯಪಾಲರಾದ ಥಾವರ್ಚಂದ್ ಗೆಹೋಟ್ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಫ್ಲಾಗ್ ಕರ್ನಾಟಕ ನೌಕಾ ನೆಲೆಯ ಆಫೀಸರ್ ಕಮಾಂಡಿಂಗ್ ರಿಯರ್ ಅಡ್ಮಿರಲ್ ವಿಕ್ರಂ ಮೆನನ್ ಹಾಗೂ ಸಚಿವ ಡಾ. ಎಂ.ಸಿ. ಸುಧಾಕರ್ ಭಾಗವಹಿಸಲಿದ್ದಾರೆ ಎಂದರು.
ಎಂಬಿಎ, ಎಂಸಿಎ, ಎಂ.ಟೆಕ್, ಪಿಎಚ್.ಡಿ ಸೇರಿದಂತೆ ವಿವಿಧ ಕೋರ್ಸ್ಗಳಿಗೆ ಪ್ರವೇಶ ಪಡೆದಿದ್ದ 9,540 ವಿದ್ಯಾರ್ಥಿಗಳ ಪೈಕಿ 8,702 ವಿದ್ಯಾರ್ಥಿಗಳು ಪ್ರಮಾಣಪತ್ರ ಪಡೆಯಲು ಅರ್ಹರಾಗಿದ್ದಾರೆ. ಘಟಿಕೋತ್ಸವದಲ್ಲಿ ಎಂಬಿಎ-4,928, ಎಂ.ಸಿ.ಎ-2,960, ಎಂ.ಟೆಕ್-718, ಪಿ.ಎಚ್.ಡಿ-59 ಸೇರಿದಂತೆ ಒಟ್ಟು 8,702 ವಿದ್ಯಾರ್ಥಿಗಳು ಪದವಿ ಪಡೆಯಲಿದ್ದಾರೆ ಎಂದು ತಿಳಿಸಿದರು.
ಚಿನ್ನದ ಪದಕ ಪಡೆದವರು:
ಶಿವಮೊಗ್ಗದ ಜವಾಹರಲಾಲ್ ನೆಹರು ಕಾಲೇಜ್ ಆಫ್ ಎಂಜಿನಿಯರಿಂಗ್ನ ಜೆ. ಪಾರ್ವತಿ ಸಾಲೇರಾ (4 ಚಿನ್ನದ ಪದಕ), ಬೆಂಗಳೂರಿನ ಆರ್.ಎನ್.ಎಸ್. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಚ್.ಸಿ. ಕಾವ್ಯ (3), ದಾವಣಗೆರೆ ಯುಬಿಡಿಟಿ ಕಾಲೇಜ್ ಆಫ್ ಎಂಜಿನಿಯರಿಂಗ್ನ ಬಿ.ಎಸ್. ಸಂಚಿತಾ (3), ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ವಿ. ಯೋಗೇಶ್ ಗೌಡ, ಆಕ್ಷ್ಯರ್ಡ್ ಕಾಲೇಜ್ ಆಫ್ ಎಂಜಿನಿಯರಿಂಗ್ನ ಸಿ. ರೇವಂತ ಕುಮಾರ್ ಹಾಗೂ ಬಳ್ಳಾರಿಯ ರಾವ್ ಬಹದ್ದೂರ್ ವೈ. ಮಹಾಬಲೇಶ್ವರಪ್ಪ ಎಂಜಿನಿಯರಿಂಗ್ ಕಾಲೇಜಿನ ಬಿ. ರಾಹುಲ್ ಡೇವಿಡ್ ತಲಾ ಎರಡು ಚಿನ್ನದ ಪದಕ ಪಡೆದಿದ್ದಾರೆ.
ಇ-ವಿದ್ಯಾರ್ಥಿ ಮಿತ್ರ ಪೋರ್ಟಲ್ ಜಾರಿ:
ವಿದ್ಯಾರ್ಥಿಗಳ ಕುಂದುಕೊರತೆಗಳಿಗೆ ತ್ವರಿತ ಪರಿಹಾರ ಒದಗಿಸುವ ಉದ್ದೇಶದಿಂದ ವಿಟಿಯು ‘ಇ-ವಿದ್ಯಾರ್ಥಿ ಮಿತ್ರ’ ಪೋರ್ಟಲ್ ಜಾರಿಗೆ ತಂದಿದೆ. ಪೋರ್ಟಲ್ನಲ್ಲಿ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡು ತಮ್ಮ ದೂರುಗಳನ್ನು ದಾಖಲಿಸಬಹುದಾಗಿದ್ದು, ನೇರವಾಗಿ ಕುಲಪತಿಗಳ ಕಚೇರಿಗೆ ಸಂಪರ್ಕ ಕಲ್ಪಿಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆಗಳನ್ನು ಪರಿಶೀಲಿಸಿ ಪರಿಹಾರ ನೀಡಲಿದ್ದಾರೆ ಎಂದು ಡಾ. ವಿದ್ಯಾಶಂಕರ್ ಎಸ್. ತಿಳಿಸಿದರು.




