ಬೆಳಗಾವಿ ಜಿಲ್ಲೆಯ ಅರಭಾವಿ ಕ್ಷೇತ್ರದ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದ ನಿಯೋಗವು ನಿನ್ನೆ ಬೆಳಗಾವಿಯಲ್ಲಿ ಆರಂಭವಾದ ಚಳಿಗಾಲದ ವಿಧಾನಮಂಡಲ ಅಧಿವೇಶನದ ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಬೆಳಗಾವಿ ಜಿಲ್ಲೆ ವಿಭಜನೆಗೆ ಒತ್ತಾಯಿಸಿತು.
ಬೆಳಗಾವಿಯನ್ನು ಸಣ್ಣ ಜಿಲ್ಲೆಯಾಗಿ ಉಳಿಸಿಕೊಂಡು ಚಿಕ್ಕೋಡಿ ಮತ್ತು ಗೋಕಾಕ್ ಎಂಬ ಎರಡು ಹೊಸ ಜಿಲ್ಲೆಗಳನ್ನು ರಚಿಸಬೇಕು ಎಂದು ನಿಯೋಗ ಮನವಿ ಸಲ್ಲಿಸಿತು. 18 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಬೆಳಗಾವಿ ಜಿಲ್ಲೆ, ಬೆಂಗಳೂರಿನ ಹೊರಗಿನ ಅತಿದೊಡ್ಡ ರಾಜಕೀಯ ಜಿಲ್ಲೆಯಾಗಿದೆ ಎಂದು ನಿಯೋಗವು ಗಮನಸೆಳೆಯಿತು.
ಈ ಬಗ್ಗೆ ಪ್ರತಿಕ್ರಿಯಿಸಿದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, “ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೇ ಜಿಲ್ಲೆ ವಿಭಜನೆ ಕುರಿತು ಒತ್ತಡ ಹೇರಲಾಗುತ್ತಿದೆ. ಬಹುತೇಕ ಶಾಸಕರು ಈ ಬೇಡಿಕೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಶೀಘ್ರದಲ್ಲೇ ಶಾಸಕರ ಸಭೆ ಕರೆದು ಮುಖ್ಯಮಂತ್ರಿ ಈ ವಿಷಯದಲ್ಲಿ ಚರ್ಚೆ ನಡೆಸುವ ಸಾಧ್ಯತೆ ಇದೆ” ಎಂದು ಹೇಳಿದರು.

“ಸುಮಾರು 20 ವರ್ಷಗಳ ಹಿಂದೆಯೇ ಆಯೋಗಗಳು ಗೋಕಾಕ್ ಮತ್ತು ಚಿಕ್ಕೋಡಿ ಜಿಲ್ಲೆ ರಚನೆ ಶಿಫಾರಸು ಮಾಡಿದ್ದವು. ಅಥಣಿ ಹಾಗೂ ಬೈಲಹೊಂಗಲ ಜಿಲ್ಲೆಗಳ ರಚನೆ ಆರ್ಥಿಕ ಮತ್ತು ಮೂಲಸೌಕರ್ಯ ಕಾರಣಗಳಿಂದ ಕಷ್ಟಸಾಧ್ಯ. ಎಲ್ಲಾ ಅಂಶಗಳನ್ನು ಪರಿಗಣಿಸಿದರೆ ಗೋಕಾಕ್ ಹಾಗೂ ಚಿಕ್ಕೋಡಿ ಜಿಲ್ಲೆ ರಚನೆಯೇ ಸೂಕ್ತ. ಈ ವಿಚಾರವನ್ನು ಆದಷ್ಟು ಬೇಗ ಇತ್ಯರ್ಥಗೊಳಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇವೆ. ಎರಡು ದಿನಗಳಲ್ಲಿ ಸಭೆ ಕರೆಯುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಸಭೆಯ ಬಳಿಕ ಮುಂದಿನ ನಿರ್ಧಾರ ಸ್ಪಷ್ಟವಾಗಲಿದೆ” ಎಂದು ತಿಳಿಸಿದರು.




