ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಅವರ ಆರು ಸಹಚರ ವೀರರನ್ನು ಬ್ರಿಟಿಷರು ಗಲ್ಲಿಗೇರಿಸಿದ್ದ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಿರ್ಮಿಸಿರುವ ವಸ್ತುಸಂಗ್ರಹಾಲಯ ‘ವೀರಭೂಮಿ’ಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಲೋಕಾರ್ಪಣೆ ಮಾಡಿದರು.
ಇದಕ್ಕೂ ಮುನ್ನ ನಂದಗಡದ ಐತಿಹಾಸಿಕ ಕೆರೆಯ ಮಧ್ಯೆ ನಿರ್ಮಿಸಲಾದ ಸಂಗೊಳ್ಳಿ ರಾಯಣ್ಣ ಅವರ ಭವ್ಯ ಪ್ರತಿಮೆಯನ್ನು ಅವರು ಉದ್ಘಾಟಿಸಿದರು. ಜೊತೆಗೆ ಕೆರೆ ಅಭಿವೃದ್ಧಿ ಹಾಗೂ ವಿವಿಧ ಗ್ರಾಮಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ನಗರಾಭಿವೃದ್ಧಿ ಸಚಿವ ಭೈರತಿ ಎಸ್. ಸುರೇಶ್, ಖಾನಾಪುರ ಶಾಸಕ ವಿಠಲ ಹಲಗೇಕರ ಉಪಸ್ಥಿತರಿದ್ದರು.
ಇದಲ್ಲದೆ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ. ರೇವಣ್ಣ, ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಸರ್ಕಾರಿ ಮುಖ್ಯ ಸಚೇತಕರಾದ ಅಶೋಕ ಪಟ್ಟಣ, ರಾಜ್ಯ ಸರ್ಕಾರದ ವಿಶೇಷ ಪ್ರತಿನಿಧಿ (ನವದೆಹಲಿ) ಪ್ರಕಾಶ ಹುಕ್ಕೇರಿ, ವಾಯವ್ಯ ಸಾರಿಗೆ ನಿಗಮದ ಅಧ್ಯಕ್ಷ ಭರಮಗೌಡ ಕಾಗೆ, ರಾಜ್ಯ ಹಣಕಾಸು ಸಂಸ್ಥೆ ಅಧ್ಯಕ್ಷ ಮಹಾಂತೇಶ ಕೌಜಲಗಿ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.





