ರಾಜ್ಯದಲ್ಲಿ ಮುಚ್ಚುತ್ತಿರುವ 40 ಸಾವಿರ ಸರ್ಕಾರಿ ಶಾಲೆಗಳ ಪಟ್ಟಿ ಹಾಗೂ ಕೆಪಿಎಸ್-ಮ್ಯಾಗ್ನೆಟ್ ಯೋಜನೆಯ ಕರಾಳ ವಾಸ್ತವವನ್ನು ಎಐಡಿಎಸ್ಒ ಬಳ್ಳಾರಿ ಜಿಲ್ಲಾಧ್ಯಕ್ಷ ಈರಣ್ಣ ಬಿಡುಗಡೆ ಮಾಡಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, “ರಾಜ್ಯದಲ್ಲಿ ಒಂದೇ ಒಂದು ಶಾಲೆಯನ್ನು ಮುಚ್ಚುವುದಿಲ್ಲ ಎಂದು ಸರ್ಕಾರವು ಸ್ಪಷ್ಟನೆ ನೀಡುತ್ತಿದೆ. ಅನೇಕ ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿರುವ ರಾಜ್ಯದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರು, ‘ರಾಜ್ಯದಲ್ಲಿ ಒಂದೇ ಒಂದು ಶಾಲೆಯನ್ನು ಮುಚ್ಚುವುದಿಲ್ಲ’ ಎಂಬ ಮಾತನ್ನೇ ಪುನರುಚ್ಚರಿಸುತ್ತಿದ್ದಾರೆ. ಅವರ ಈ ಹೇಳಿಕೆಯ ಸತ್ಯಾಸತ್ಯತೆಯನ್ನು ಅವರದ್ದೇ ಸರ್ಕಾರದ ದಾಖಲೆಗಳ ಆಧಾರದಲ್ಲಿ ಪರಿಶೀಲಿಸಿ ವಾಸ್ತವಾಂಶವನ್ನು ರಾಜ್ಯದ ಜನರ ಮುಂದಿಡಲು ಎಐಡಿಎಸ್ಒ ಕರ್ನಾಟಕ ರಾಜ್ಯ ಸಮಿತಿಯು ಮುಂದಾಗಿದೆ. ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ ಕರ್ನಾಟಕ ರಾಜ್ಯ ಸರಕಾರವು 40,000ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ. ಗ್ರಾಮ ಪಂಚಾಯಿತಿಗೆ ಒಂದರಂತೆ ರಾಜ್ಯದಲ್ಲಿ 6,000 ಕೆಪಿಎಸ್ ಮ್ಯಾಗ್ನೆಟ್ ಶಾಲೆಯನ್ನು ಸ್ಥಾಪಿಸುವ ಗುರಿಯನ್ನು ಸರಕಾರವು ಹೊಂದಿದೆ. ಮೊದಲ ಹಂತದಲ್ಲಿ ರಾಜ್ಯದ 800 ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳೆಂದು ಗುರುತಿಸಲಾಗಿದೆ. ಗಣಿಬಾಧಿತ ಜಿಲ್ಲೆಗಳಲ್ಲಿ 100, ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ 200 ಹಾಗೂ ಇತರೆ ಭಾಗದಲ್ಲಿ 500. ಅಕ್ಟೋಬರ್ 15ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ಈ ಕುರಿತು ಆದೇಶಿಸಲಾಗಿದೆ” ಎಂದು ಮಾಹಿತಿ ನೀಡಿದರು.
“ಈ ಯೋಜನೆಯನ್ನು ಪೈಲಟ್ ಯೋಜನೆಯಡಿ ಜಾರಿಗೊಳಿಸಲು ರಾಮನಗರದ ಚನ್ನಪಟ್ಟಣ ತಾಲೂಕಿನ ಹೊಂಗನೂರಿನ ಶಾಲೆಯನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಯೆಂದು ಗುರುತಿಸಲಾಗಿದೆ. ಸುಣ್ಣಘಟ್ಟ ಶಾಲೆಗಳನ್ನು ಕೆಪಿಎಸ್ಗೆ ತುರ್ತಾಗಿ ವಿಲೀನಗೊಳಿಸಿ ಕ್ರಮಕೈಗೊಳ್ಳಲು ಆದೇಶ ನೀಡಲಾಗಿದೆ. ಯಾವುದೇ ಕಾರಣಕ್ಕೂ ಶಾಲೆಗಳನ್ನು ಮುಚ್ಚಲು ಬಿಡುವುದಿಲ್ಲ ಮತ್ತು ಅದೇ ಶಾಲೆಗಳನ್ನು ಅಭಿವೃದ್ಧಿಪಡಿಸಿ ಊರಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಖಾತ್ರಿಪಡಿಸಬೇಕೆಂದು ಸುತ್ತ ಹಳ್ಳಿಗಳ ಗ್ರಾಮಸ್ಥರು ಹೋರಾಟ ನಡೆಸುತ್ತಿದ್ದಾರೆ. ಇದೇ ರೀತಿ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳಡಿ ರಾಜ್ಯದ 40,000ಕ್ಕೂ ಅಧಿಕ ಶಾಲೆಗಳು ವಿಲೀನಗೊಳ್ಳುತ್ತವೆ. ಸಮುದಾಯ, ಹಳ್ಳಿಗಳ ನಡುವಿನ ಶಾಲೆ ಊರು ದಾಟಿ ಪಕ್ಕದೂರಿಗೆ ಹೋಗುತ್ತದೆ” ಎಂದು ಆತಂಕ ವ್ಯಕ್ತಪಡಿಸಿದರು.
“ಅಲ್ಲದೆ, ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉಪನ್ಯಾಸಕರುಗಳು, ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪಾಠ ಮಾಡುವಂತೆ, ಸೇವಾ ನಿಯಮಗಳನ್ನು ತಿದ್ದುಪಡಿ ಮಾಡಲಾಗುತ್ತಿದೆ. ಕೇವಲ ಶಾಲೆಗಳಷ್ಟೇ ಅಲ್ಲದೆ ರಾಜ್ಯದ ಸಾವಿರಾರು ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಕೂಡ ಮುಚ್ಚುವ ಅಪಾಯಕ್ಕೆ ಸಿಲುಕಿವೆ. ವಿಪರ್ಯಾಸವೆಂದರೆ, ವಿಲೀನದ ನೆಪದಲ್ಲಿ ಮುಚ್ಚುವ ಶಾಲಾ ಕಟ್ಟಡಗಳನ್ನು ಇತರ ಕೆಲಸಗಳಿಗೆ ವಿನಿಯೋಗಿಸಲು ಸರ್ಕಾರವು ಮುಂದಾಗಿದ್ದು, ಬೆಳಗಾವಿ ಅಧಿವೇಶನದಲ್ಲಿ ಈ ಕುರಿತು ಮಸೂದೆ ಮಂಡಿಸುವುದಾಗಿ ಹೇಳಿದೆ. ಸರ್ಕಾರಿ ಶಾಲಾ ಕಟ್ಟಡಗಳನ್ನು ಸ್ವಸಹಾಯ ಗುಂಪುಗಳಿಗೆ ನೀಡಲಾಗುವುದೆಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಒಂದೇ ಒಂದು ಶಾಲೆಯನ್ನು ಮುಚ್ಚದಿದ್ದ ಮೇಲೆ ಸರಕಾರಿ ಶಾಲೆಗಳನ್ನು ಬೇರೆ ಉದ್ದೇಶಕ್ಕೆ ವಿನಿಯೋಗಿಸುವ ಪ್ರಶ್ನೆ ಎಲ್ಲಿಂದ ಉದ್ಭವಿಸುತ್ತದೆ?” ಎಂದು ಪ್ರಶ್ನಿಸಿದರು.
ಇದನ್ನೂ ಓದಿ: ಬಳ್ಳಾರಿ | ಸಮುದಾಯ ಆರೋಗ್ಯ ಕೇಂದ್ರಕ್ಕೆ ಸ್ತ್ರೀ ರೋಗ ತಜ್ಞರ ನೇಮಕಕ್ಕೆ ಪ್ರಗತಿಪರರ ಆಗ್ರಹ
“ಈ ದೇಶದಲ್ಲಿ ಶಿಕ್ಷಣಕ್ಕಾಗಿ ಧ್ವನಿಯೆತ್ತಿದ ಮಹಾನ್ ನವೋದಯ ಚಿಂತಕರಾದ ಈಶ್ವರ್ ಚಂದ್ರ ವಿದ್ಯಾಸಾಗರ್, ಜ್ಯೋತಿರಾವ್ ಪುಲೆ, ಸಾವಿತ್ರಿಬಾಯಿ ಫುಲೆ ಮುಂತಾದ ಮಹನೀಯರ ಆಶಯಗಳಿಗೆ ವಿರುದ್ಧವಾಗಿ ಸರ್ಕಾರವು ಶಿಕ್ಷಣದ ಮೇಲೆ ಪ್ರಹಾರ ನಡೆಸಿದೆ. ಇದರ ವಿರುದ್ಧ ಪ್ರಬಲ ಹೋರಾಟವನ್ನು ಬೆಳೆಸಲು ಮತ್ತು ಎಲ್ಲ ರೀತಿಯ ತ್ಯಾಗಕ್ಕೆ ಸಿದ್ದರಾಗಲು ನಾಡಿನ ವಿದ್ಯಾರ್ಥಿಗಳು, ಪಾಲಕರು, ಶಿಕ್ಷಕರು ಹಾಗೂ ಶಿಕ್ಷಣ ಪ್ರೇಮಿ ಜನತೆಗೆ ಸರ್ಕಾರವು ಸವಾಲು ಎಸಗಿದೆ. ಇತಿಹಾಸದ ಎಲ್ಲ ಮಹಾನ್ ವ್ಯಕ್ತಿಗಳ ಕರೆಗೆ ಓಗೊಟ್ಟು ಸರ್ಕಾರಿ ಶಾಲೆಗಳನ್ನು ಉಳಿಸುವ ಹೋರಾಟಕ್ಕೆ ಮುಂದಾಗಬೇಕು” ಎಂದು ಕರೆ ನೀಡಿದರು.
“ಬಳ್ಳಾರಿ ಜಿಲ್ಲೆಯಲ್ಲಿ ಕೂಡ ನಗರ ಹಾಗೂ ತಾಲೂಕು ಸೇರಿದಂತೆ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ತೆಗೆಯುವ ಮೂಲಕ ಒಟ್ಟು ಸರ್ಕಾರಿ ಶಾಲೆಗಳನ್ನು ಮುಚ್ಚುವ ಪಟ್ಟಿಯಲ್ಲಿ 421 ಸರ್ಕಾರಿ ಶಾಲೆಗಳು ಇವೆ” ಎಂದರು.
ಈ ಗೋಷ್ಠಿಯಲ್ಲಿ ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ, ಖಜಾಂಚಿ ಅನುಪಮಾ ಮತ್ತು ಸದಸ್ಯರಾದ ತಿಪ್ಪೇಸ್ವಾಮಿ, ಎ ಕೆ ಮಂಜುನಾಥ, ಸೋಮಶೇಖರ್ ಇದ್ದರು.





