ಈಶಾನ್ಯ ಪದವೀಧರರ ಮತಕ್ಷೇತ್ರದ ವ್ಯಾಪ್ತಿಗೆ ಸಂಬಂಧಿಸಿದಂತೆ ಸರ್ಕಾರದಿಂದ ಅಧಿಕೃತ ಗೆಜೆಟ್ ನೊಟಿಫಿಕೇಶನ್ ಹೊರಡಿಸದೆ ಇದ್ದರೂ, ಬಳ್ಳಾರಿ ಜಿಲ್ಲೆಯಲ್ಲಿನ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಟಿಕೆಟ್ ಆಕಾಂಕ್ಷಿಗಳು ಸಂಘ ಸಂಸ್ಥೆಗಳು ಈಶಾನ್ಯ ಪದವೀಧರರ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬಳ್ಳಾರಿ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿನ ಪದವೀಧರರ ಮನೆ ಮನೆಗೆ ತೆರಳಿ ಮತದಾರ ಪಟ್ಟಿಗೆ ತಮ್ಮ ಹೆಸರನ್ನು ಸೇರಿಸಿ ಗುರುತಿನ ಚೀಟಿಗೆ ನೋಂದಣಿ ಮಾಡಿಸಿಕೊಳ್ಳುವಂತೆ ಮನವಿ ಮಾಡಿ ಪದವೀಧರರನ್ನು ಸೆಳೆಯಲು ಪ್ರಯತ್ನಿಸುತ್ತಿರುವುದು ಕಂಡುಬರುತ್ತಿದೆ.
ಮುಂಬರುವ ವಿಧಾನ ಪರಿಷತ್ ಈಶಾನ್ಯ ಪದವೀಧರರ ಮತ ಕ್ಷೇತ್ರದ ಚುನಾವಣೆಗೆ ಮತ ಚಲಾಯಿಸಲು ಮತದಾನದ ಗುರುತಿನ ಚೀಟಿಗೆ ಹೆಸರು ಸೇರ್ಪಡೆ ಮಾಡಲು ಪದವೀಧರರಿಂದ ಪದವಿ ಪೂರ್ಣಗೊಳಿಸಿದವರಿಗೆ ನೋಂದಣಿಗೆ ಆಧಾರ್ ಕಾರ್ಡ್, ಪದವೀಧರರ ಅಂತಿಮ ವರ್ಷದ ಅಂಕಪಟ್ಟಿ ಮತದಾರರ ಗುರುತಿನ ಚೀಟಿ ಹಾಗೂ ಎರಡು ಭಾವಚಿತ್ರಗಳನ್ನು ಪಡೆಯುತ್ತಿದ್ದಾರೆ.
“ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಟಿಕೆಟ್ ಆಕಾಂಕ್ಷಿಗಳು, ಸಂಘ ಸಂಸ್ಥೆಗಳ ಮುಖಂಡರು ತಮ್ಮ ತಮ್ಮ ಬೆಂಬಲಿಗರಿಂದ ಬಳ್ಳಾರಿ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿನ ಪದವೀಧರರಿಗೆ ಪದವೀಧರ ಕ್ಷೇತ್ರದ ಮತ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿಕೊಳ್ಳುವಂತೆ ಚುನಾವಣೆ ಗುರುತಿನ ಚೀಟಿ ಮಾಡಿಸಿ ಕೊಡುವುದಾಗಿ ಪದವೀಧರರ ಹತ್ತಿರ ಅಗತ್ಯ ದಾಖಲೆಗಳನ್ನು ಕಲೆ ಹಾಕುವ ಮೂಲಕ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮೂರು ಪಕ್ಷಗಳ ಟಿಕೆಟ್ ಆಕಾಂಕ್ಷಿಗಳು, ಮುಖಂಡರು ಪ್ರತ್ಯೇಕ ವೋಟ್ ಬ್ಯಾಂಕ್ ನಿರ್ಮಾಣ ಮಾಡಿಕೊಳ್ಳುತ್ತಿದ್ದಾರೆ” ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.
ಈ ಸುದ್ದಿ ಓದಿದ್ದೀರಾ? ವಿಜಯನಗರ | ಮಲ್ಲಿಕಾರ್ಜುನ ಖರ್ಗೆ ಮೈಬಣ್ಣದ ಅವಹೇಳನ; ಅರಗ ಜ್ಞಾನೇಂದ್ರ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹ
“ರಾಜ್ಯ ಸರ್ಕಾರ ಈಶಾನ್ಯ ಪದವೀಧರರ ಮತ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಗೆಜೆಟ್ ನೊಟಿಫಿಕೇಶನ್ ಹೊರಡಿಸಿಲ್ಲ. ಒಂದು ವೇಳೆ ಹೊರಡಿಸಿದರೂ ಪ್ರತ್ಯೇಕ ಮಾರ್ಗಸೂಚಿಗಳನ್ನು ತಿಳಿಸುತ್ತದೆ. ಹಾಗೂ ಚುನಾವಣೆ ಆಯೋಗದ ಮೂಲಕ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮತ್ತು ತಿದ್ದುಪಡಿಗೆ ಸಮಯವಕಾಶ ನೀಡುತ್ತದೆ. ಬಳ್ಳಾರಿಯಲ್ಲಿ ಪದವೀಧರರ ನೋಂದಣಿ ಹೆಸರಿನಲ್ಲಿ ರಾಜಕಾರಣಿಗಳು ಪದವೀಧರರಿಂದ ಅಗತ್ಯ ದಾಖಲೆ ಪಡೆಯುತ್ತಿದ್ದಾರೆ. ಪ್ರತ್ಯೇಕ ಮತ ಬ್ಯಾಂಕ್ ಸೃಷ್ಟಿಸಿಕೊಳ್ಳಲು ಈ ರೀತಿ ಮಾಡುತ್ತಿದ್ದಾರೆ” ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.




