ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ದೇಶನೂರು ಗ್ರಾಮದ ಕೂಲಿ ಕಾರ್ಮಿಕ ತುಂಬು ಗರ್ಭಿಣಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜರುಗಿದೆ.
ಸಿರುಗುಪ್ಪ ತಾಲೂಕು ಕೇಂದ್ರದಲ್ಲಿ ನೂರು ಹಾಸಿಗೆಗಳ ಆಸ್ಪತ್ರೆ ಇದ್ದರೂ, ಸೂಕ್ತ ಚಿಕಿತ್ಸೆ ಲಭ್ಯವಿಲ್ಲವೆಂದು ಪ್ರತಿನಿತ್ಯವೂ ಅನೇಕ ರೋಗಿಗಳನ್ನು ಬಳ್ಳಾರಿ ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ. ಆದರೆ ದುರಾದೃಷ್ಟವಶಾತ್ ರೋಗಿಗಳು ಬಳ್ಳಾರಿ ಆಸ್ಪತ್ರೆಗೆ ತೆರಳುವ ಮಾರ್ಗದಲ್ಲಿಯೇ ಮೃತಪಟ್ಟಿರುವ ಸಾವಿರಾರು ಉದಾಹರಣೆಗಳಿವೆ.
ಸಿರಗುಪ್ಪ ತಾಲೂಕಿನ ದೇಶನೂರು ಗ್ರಾಮದ ಕಟ್ಟಡ ಕಾರ್ಮಿಕ ಮಹಿಳೆ ರಂಗಮ್ಮ ಎಂಬ ಮಹಿಳೆ, 9 ತಿಂಗಳ ತುಂಬು ಗರ್ಭಿಣಿಯಾಗಿದ್ದರು, ಚಿಕಿತ್ಸೆಗಾಗಿ ಸಿರಗುಪ್ಪ ತಾಲೂಕು ಆಸ್ಪತ್ರೆಗೆ ಬಂದಾಗ ವೈದ್ಯರು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಸಾಗಿಸಿದ್ದರು. ಬಳ್ಳಾರಿ ಆಸ್ಪತ್ರೆಯಲ್ಲಿ ದಾಖಲಾದ ರಂಗಮ್ಮ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆರೋಗ್ಯಕ್ಕಾಗಿ ಕೋಟ್ಯಂತರ ಸುರಿದರೂ ಆಸ್ಪತ್ರೆಗಳಲ್ಲಿ ಇಂದಿಗೂ ಗುಣಮಟ್ಟ ಚಿಕಿತ್ಸೆ ಹಾಗೂ ಸೂಕ್ತ ಸೌಲಭ್ಯದ ಕೊರತೆಯಿಂಂದಾಗಿ ಗ್ರಾಮೀಣ ಭಾಗದ ಬಡ ಜನರು ಅಮೂಲ್ಯ ಜೀವನ ಕಳೆದುಕೊಳ್ಳುತ್ತಿರುವುದು ವಿಪರ್ಯಾಸ ಎಂದು ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ.
ಈ ಘಟನೆ ಕುರಿತು ಸೂಕ್ತ ತನಿಖೆ ಆಗಬೇಕು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಆಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಬೇಕು ಎಂದು ಕುಟುಂಬಸ್ಥರು ಆಗ್ರಹಿಸಿದರು.




