ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ, ಕಾಯ್ದೆ ಮತ್ತು ಖರೀದಿ ಕೇಂದ್ರ ತೆರೆಯಲು ಒತ್ತಾಯಿಸಿ ದಾವಣಗೆರೆ ನಗರದ ಎಸಿ ಕಚೇರಿ ಬಳಿ ನಡೆಯುತ್ತಿರುವ ರೈತ ಸಂಘದ ಅನಿರ್ದಿಷ್ಟಾವಧಿ ಪ್ರತಿಭಟನೆಯಲ್ಲಿ ಭಾಗವಹಿಸಿರುವ ಬಳ್ಳಾರಿಯ ರೈತರೊಬ್ಬರು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ಘಟನೆ ಗುರುವಾರ ನಡೆದಿದೆ.

ನವೆಂಬರ್ 19 ರಿಂದ ಕರ್ನಾಟಕ ರಾಜ್ಯ ರೈತ ಸಂಘ (ಹುಚ್ಚವ್ವನಳ್ಳಿ ಮಂಜುನಾಥ ಬಣ)ದ ಪದಾಧಿಕಾರಿಗಳು, ಕಾರ್ಯಕರ್ತರು, ರೈತರು ಸೇರಿ ಮೆಕ್ಕೆಜೋಳದ ಬೆಂಬಲ ಬೆಲೆ 2400 ರೂ. ನಿಗದಿ ಮಾಡಬೇಕು ಮತ್ತು ಇದಕ್ಕೆ ಕಾಯ್ದೆ ತರಬೇಕು. ಭತ್ತಕ್ಕೆ 3000 ರೂಪಾಯಿಗಳ ಬೆಂಬಲ ಬೆಲೆ ನೀಡಬೇಕೆಂದು ಒತ್ತಾಯಿಸಿ, ಮಹಾನಗರ ಪಾಲಿಕೆ, ಎಸಿ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ, ರಸ್ತೆ ತಡೆ ನಡೆಸುವ ಮೂಲಕ ಅನಿರ್ದಿಷ್ಟಾವಧಿ ಧರಣಿ ಪ್ರತಿಭಟನೆಯನ್ನು ಪ್ರಾರಂಭಿಸಿದೆ.

ಇಂದು ಬೆಂಬಲ ಬೆಲೆಗೆ ಆಗ್ರಹಿಸಿ ನೆಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿಯು ಎರಡನೇ ದಿನಕ್ಕೆ ಕಾಲಿಟ್ಟಿದ್ದು ಮುಷ್ಕರದಲ್ಲಿ ಭಾಗವಹಿಸಿದ್ದ ರೈತ ಸಂಘದ ಮುಖಂಡ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಕಾಳಿನಗೇರಿ ಗ್ರಾಮದ ರೈತ 62 ವರ್ಷ ವಯಸ್ಸಿನ ಮೋಹನ ಬಾಬು ಅಸ್ವಸ್ಥಗೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ.
ಇದು ಮಧ್ಯಾಹ್ನ 1.30 ಗಂಟೆ ಸುಮಾರಿನಲ್ಲಿ ಧರಣಿಯಲ್ಲಿ ಭಾಗವಹಿಸಿದ್ದ ರೈತ ಮೋಹನ್ ಬಾಬು
ಅಸ್ವಸ್ಥಗೊಂಡಿದ್ದರಿಂದ ಕೂಡಲೇ ತುರ್ತು ಚಿಕಿತ್ಸಾ ವಾಹನದಲ್ಲಿ ಚಿಗಟೇರಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳಿಗ್ಗೆಯಿಂದಲೂ ರೈತನ ಆರೋಗ್ಯದಲ್ಲಿ ಏರು ಪೇರು ಕಂಡು ಬಂದಿತ್ತು ಎಂದು ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಎಗ್ಗಿಲ್ಲದೆ ನಡೆಯುತ್ತಿದೆ ಗಣಿಗಾರಿಕೆ: ರೈತರ ಭೂಮಿಯೂ ಕಬಳಿಕೆ, ಆರೋಗ್ಯವೂ ಹಾಳು
ಚಿತ್ರದುರ್ಗ | ಎಗ್ಗಿಲ್ಲದೆ ನಡೆಯುತ್ತಿದೆ ಗಣಿಗಾರಿಕೆ: ರೈತರ ಭೂಮಿಯೂ ಕಬಳಿಕೆ, ಆರೋಗ್ಯವೂ ಹಾಳು
ಈ ಕುರಿತು ಪ್ರತಿಕ್ರಿಯೆ ನೀಡಿದ ರೈತ ಸಂಘದ ಮುಖಂಡ ಹುಚ್ಚವ್ವನಹಳ್ಳಿ ಮಂಜುನಾಥ್ “ಬುಧವಾರ ಬೆಳಗಿನಿಂದಲೂ ಮೆಕ್ಕೆಜೋಳ ಮತ್ತು ಭತ್ತಕ್ಕೆ ಬೆಂಬಲ ಬೆಲೆ, ಕಾಯ್ದೆ ರೂಪಿಸಲು ಒತ್ತಾಯಿಸಿ ಅನಿರ್ದಿಷ್ಟ ಅವಧಿ ಧರಣಿ ಪ್ರಾರಂಭಿಸಿದ್ದೇವೆ. ಧರಣಿಯಲ್ಲಿ ಭಾಗವಹಿಸಿದ್ದ ಬಳ್ಳಾರಿ ಜಿಲ್ಲೆಯ ರೈತ ಮೋಹನ್ ಬಾಬು ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾನೆ. ರೈತರಿಗೆ ಕನಿಷ್ಠ ಬೆಂಬಲ ಬೆಲೆ ನೀಡದೇ ರೈತರನ್ನು ಸಂಕಷ್ಟಕ್ಕೆ ನೂಕುತ್ತಿರುವ ಸರ್ಕಾರ, ರೈತರ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದೆ. ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ರೈತನಿಗೆ ಆರೋಗ್ಯ ಸಮಸ್ಯೆಗಳಾಗಿ ಅನಾಹುತ ಸಂಭವಿಸಿದರೆ ಅದಕ್ಕೆ ಸರ್ಕಾರವೇ ನೇರವಾಗಿ ಹೊಣೆಯಾಗುತ್ತದೆ. ಈಗಲಾದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಕನಿಷ್ಠ ಬೆಂಬಲ ಬೆಲೆ ಘೋಷಿಸಿ. ಕಾಯ್ದೆ ರೂಪಿಸಬೇಕು. ರೈತರ ಹಿತ ಕಾಯಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.





