ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಂ ವಿದ್ಯಾರ್ಥಿಗಳಿಗೆ ಆಭರಣ ಮಳಿಗೆಯ ವ್ಯವಸ್ಥಾಪಕನೋರ್ವ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ.
ಬೆಳ್ತಂಗಡಿ ಸಂತೆಕಟ್ಟೆ ಬಳಿ ಇರುವ ಪೃಥ್ವಿ ಆಭರಣ ಮಳಿಗೆಯ ವ್ಯವಸ್ಥಾಪಕನಾಗಿರುವ ಅಶೋಕ್ ಬಂಗೇರ ಹಾಗೂ ಸಿಬ್ಬಂದಿಗಳು ಮೂವರು ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವೇಣೂರು ಸಮೀಪದ ಮೂವರು ವಿದ್ಯಾರ್ಥಿಗಳು ಶಾಲೆಗೆ ರಜೆ ಹಾಕಿ, ಬೆಳ್ತಂಗಡಿ ಪೇಟೆಯಲ್ಲಿ ಪ್ರತಿ ಸೋಮವಾರ ನಡೆಯುವ ಸಂತೆಗೆಂದು ಬಂದಿದ್ದರು. ಅಲ್ಲಿ ಸುತ್ತಾಡಿದ ಬಳಿಕ ಬೆಳ್ತಂಗಡಿ ಸಂತೆಕಟ್ಟೆ ಬಳಿ ಇರುವ ಪೃಥ್ವಿ ಆಭರಣ ಮಳಿಗೆಯ ಪಕ್ಕದಲ್ಲಿ ಕುಳಿತು ಮೊಬೈಲ್ನಲ್ಲಿ ಆಟವಾಡುತ್ತಿದ್ದ ಮಕ್ಕಳ ಹೆಸರನ್ನು ಕೇಳಿ ಮುಸ್ಲಿಂ ವಿದ್ಯಾರ್ಥಿಗಳು ಎಂದು ತಿಳಿದು, ಆ ಬಳಿಕ ಮಕ್ಕಳಿಗೆ ಮೇಲೆ ನಿಂದನೆ ಮಾಡಿ ಕೋಣೆಯಲ್ಲಿ ಕೂಡಿ ಹಾಕಿ ಎರಡು ಗಂಟೆಗಳ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಹಲ್ಲೆ ನಡೆಸಿದ್ದನ್ನು ಪ್ರಶ್ನಿಸಲು ಹೋಗಿದ್ದ ವಿದ್ಯಾರ್ಥಿಗಳ ಪೋಷಕರೊಂದಿಗೆ ಆಭರಣ ಮಳಿಗೆಯ ವ್ಯವಸ್ಥಾಪಕ ಸಹಿತ ಇತರೆ ಸಿಬ್ಬಂದಿಗಳು ವಾಗ್ವಾದ ನಡೆಸಿರುವ ಆರೋಪ ಕೂಡ ಕೇಳಿಬಂದಿದೆ.

ಘಟನೆಯ ವೇಳೆ ಮೂವರು ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿ ಹಲ್ಲೆಯಿಂದ ತಪ್ಪಿಸಿಕೊಂಡು ನಾಪತ್ತೆಯಾಗಿದ್ದನು. ಆ ಬಳಿಕ ರಾತ್ರಿ ಹುಡುಕಾಡಿದಾಗ ಪೋಷಕರ ಕೈಗೆ ಸೇರಿದ್ದಾನೆ. ಸದ್ಯ ಹಲ್ಲೆಯಿಂದ ಗಾಯಗೊಂಡಿರುವ ಮೂವರು ವಿದ್ಯಾರ್ಥಿಗಳು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವುದಾಗಿ ತಿಳಿದುಬಂದಿದೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ಬೆಳ್ತಂಗಡಿ ಎಸ್ಡಿಪಿಐ ಪಕ್ಷದ ಮುಖಂಡರಾದ ಅಕ್ಬರ್ ಬೆಳ್ತಂಗಡಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಮಕ್ಕಳನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದು, “ಮಕ್ಕಳ ಧರ್ಮವನ್ನು ಕೇಳಿ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಲಾಗಿದೆ. ಇದು ಖಂಡನೀಯ. ಪೊಲೀಸ್ ಇಲಾಖೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಈದಿನ ಜೊತೆಗೆ ಮಾತನಾಡಿರುವ ಹಲ್ಲೆಗೊಳಗಾಗಿರುವ ವಿದ್ಯಾರ್ಥಿಗಳ ಕುಟುಂಬದ ಹೆಸರು ಹೇಳಲಿಚ್ಛಿಸದ ಸದಸ್ಯರೋರ್ವರು, “ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುವುದು ಎಷ್ಟು ಸರಿ? ಮಕ್ಕಳನ್ನು ಕೂಡಿ ಹಾಕಿ ಹಲ್ಲೆ ನಡೆಸಲು ಯಾರು ಅಧಿಕಾರ ನೀಡಿದ್ದು? ಘಟನೆ ಸೋಮವಾರ ನಡೆದಿದ್ದರೂ ಮಕ್ಕಳ ಕಲ್ಯಾಣ ಇಲಾಖೆ ಏನು ಮಾಡುತ್ತಿದೆ. ಯಾರೂ ಅವರಿಗೆ ಮಾಹಿತಿ ನೀಡಿಲ್ಲವೇ? ಮಕ್ಕಳ ಕಲ್ಯಾಣ ಇಲಾಖೆಯವರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಬೇಕು. ಧರ್ಮವನ್ನು ಕೇಳಿದ ಬಳಿಕ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಹಾಗಾಗಿ, ಪೊಲೀಸ್ ಇಲಾಖೆ ಈ ಬಗ್ಗೆ ಸೂಕ್ತ ತನಿಖೆ ನಡೆಸಿ, ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.





