ಬಸವನಗುಡಿಯ ಬಸವೇಶ್ವರ ದೇವಾಲಯದಲ್ಲಿ ನಡೆಯುವ ಐತಿಹಾಸಿಕ ಕಡಲೆಕಾಯಿ ಪರಿಷೆ ಈ ಬಾರಿ ಮೊದಲ ಬಾರಿಗೆ 5 ದಿನಗಳ ಕಾಲ ನಡೆಯಲಿದೆ. ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.
ಕಳೆದ ವರ್ಷ ನಡೆದ ಕಡಲೆಕಾಯಿ ಪರಿಷೆಯಲ್ಲಿ ಸುಮಾರು ಐದು ಲಕ್ಷ ಭಕ್ತರು ಭಾಗವಹಿಸಿದ್ದರು. ಪ್ಲಾಸ್ಟಿಕ್ ಮುಕ್ತ ಪರಿಷೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಆ ಆಯೋಜನೆ ಈ ಬಾರಿ ಮತ್ತಷ್ಟು ವಿಜೃಂಭಣೆಯೊಂದಿಗೆ ನಡೆಯಲಿದೆ. ಈ ವರ್ಷ ನವೆಂಬರ್ 17 ರಿಂದ 21ರವರೆಗೆ ನಡೆಯಲಿರುವ ಪರಿಷೆಯನ್ನು ಸಾಂಪ್ರದಾಯಿಕ ಭಕ್ತಿಭಾವದ ಜೊತೆಗೆ ಪರಿಸರ ಸಂವೇದನೆಯ ಮಾದರಿಯಾಗಿ ರೂಪಿಸಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ನ.17ರಂದು ಬೆಳಗ್ಗೆ 10 ಗಂಟೆಗೆ ಬಸವನಗುಡಿಯ ಬಸವೇಶ್ವರ ದೇವಾಲಯದಲ್ಲಿ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಉದ್ಘಾಟನೆ ವೇಳೆ 21 ಬಸವಣ್ಣರನ್ನು ದೇವಾಲಯಕ್ಕೆ ಆಹ್ವಾನಿಸಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪರಿಷೆಗೆ ಚಾಲನೆ ನೀಡಲಾಗುತ್ತದೆ.
ಈ ಬಾರಿ ದೀಪಾಲಂಕಾರಕ್ಕೂ ವಿಶೇಷ ಮಹತ್ವ ನೀಡಲಾಗಿದ್ದು, ಬುಲ್ ಟೆಂಪಲ್ ರಸ್ತೆ, ಗಾಂಧಿ ಬಜಾರ್ ಮತ್ತು ಎನ್.ಆರ್. ರಸ್ತೆ ಪ್ರದೇಶಗಳಿಗೂ ದೀಪಾಲಂಕಾರವನ್ನು ವಿಸ್ತರಿಸುವ ಯೋಜನೆ ರೂಪಿಸಲಾಗಿದೆ. ಹಬ್ಬದ ಸಮಯದಲ್ಲಿ ಸಂಪೂರ್ಣ ಪ್ರದೇಶವನ್ನು ಪ್ಲಾಸ್ಟಿಕ್ ಮುಕ್ತ ವಲಯವನ್ನಾಗಿಸಲು ಎನ್ಜಿಒ ಸಂಸ್ಥೆಗಳ ಸಹಕಾರದಲ್ಲಿ ಜಾಗೃತಿ ಅಭಿಯಾನ ನಡೆಸಲಾಗುತ್ತದೆ. ʼಪರಿಷೆಗೆ ಬನ್ನಿ, ಕೈ ಚೀಲ ತನ್ನಿ ಎಂಬ ಘೋಷಣೆಯಡಿ ಅಂಗಡಿಯವರು ಹಾಗೂ ಸಾರ್ವಜನಿಕರು ಬಟ್ಟೆ ಬ್ಯಾಗ್ಗಳ ಬಳಕೆಗೆ ಮುಂದಾಗುವಂತೆ ಪ್ರೋತ್ಸಾಹಿಸಲಾಗುತ್ತದೆ.
ಇದನ್ನೂ ಓದಿ: ಬೆಂಗಳೂರು | ಪಶ್ಚಿಮ ಬಂಗಾಳದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
ಕಳೆದ ವರ್ಷ ವ್ಯಾಪಾರಿಗಳಿಂದ ಬಲವಂತವಾಗಿ ಸುಂಕ ವಸೂಲಾತಿ ನಡೆದಿರುವ ಕುರಿತು ಬಂದ ದೂರುಗಳನ್ನು ಪರಿಗಣಿಸಿ ಈ ವರ್ಷವೂ ಸುಂಕ ವಸೂಲಾತಿ ಟೆಂಡರ್ ಕೈಬಿಡಲಾಗಿದೆ. ಬುಲ್ ಟೆಂಪಲ್ ರಸ್ತೆಯ ವ್ಯಾಪಾರಸ್ಥರಿಂದ ಯಾವುದೇ ರೀತಿಯ ಸುಂಕ ವಸೂಲಿ ಮಾಡದಂತೆ ತೀರ್ಮಾನ ಕೈಗೊಳ್ಳಲಾಗಿದೆ.
ಭಕ್ತರ ಸುಗಮ ಸಂಚಾರ ಮತ್ತು ಸುರಕ್ಷತೆಯನ್ನು ಖಚಿತಪಡಿಸಲು ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ನೂಕುನುಗ್ಗಲು ತಪ್ಪಿಸುವ ವ್ಯವಸ್ಥೆ, ನಿರಂತರ ವಿದ್ಯುತ್ ಪೂರೈಕೆ, ಕುಡಿಯುವ ನೀರು, ಸಾರ್ವಜನಿಕ ಶೌಚಾಲಯಗಳು, ಬೀದಿ ದೀಪಗಳ ಅಳವಡಿಕೆ ಹಾಗೂ ದುರಸ್ಥಿಗೆ ಆದ್ಯತೆ ನೀಡಲಾಗಿದೆ. ಪ್ರಮುಖ ಸ್ಥಳಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಿ ಸುರಕ್ಷತೆಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಅಗ್ನಿಶಾಮಕ ವಾಹನಗಳು, ತುರ್ತು ಚಿಕಿತ್ಸೆ ವಾಹನಗಳು ಹಾಗೂ ಮಾರ್ಷಲ್ಗಳನ್ನು ಪರಿಷೆ ದಿನಗಳಲ್ಲಿ ನಿಯೋಜಿಸುವ ವ್ಯವಸ್ಥೆಯೂ ಸಿದ್ಧವಾಗಿದೆ.
ಈ ಪೂರ್ವಭಾವಿ ಸಭೆಯಲ್ಲಿ ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ, ಚಿಕ್ಕಪೇಟೆಯ ಶಾಸಕ ಉದಯ ಗರುಡಾಚಾರ್, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕೆ ಎಂ ನಾಗರಾಜ್, ದ್ವಾರಕಾನಾಥ್, ದಿಗ್ವಿಜಯ ಬೋಡ್ಸೆ, ಬಿಬಿಎಂಪಿ ಅಡಿಷನಲ್ ಕಮಿಷನರ್ ಪಾರ್ವತಿ, ದೊಡ್ಡ ಗಣಪತಿ ದೇವಸ್ಥಾನ ಸಮಿತಿ ಅಧ್ಯಕ್ಷರು, ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಮುಜರಾಯಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.





