ನೆಲಮಂಗಲ ತಾಲ್ಲೂಕಿನ ದಾಬಸ್ಪೇಟೆಯ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಒ ಗೀತಾಮಣಿ ಅವರ ವಿರುದ್ಧ ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಗೋವೇನಹಳ್ಳಿ ಗ್ರಾಮದ ರಾಮಚಂದ್ರಯ್ಯ ಅವರ ಸಾವಿಗೆ ಪಿಡಿಒ ಅವರೇ ಕಾರಣ’ ಎಂದು ಮೃತ ವ್ಯಕ್ತಿಯ ಸಂಬಂಧಿ ದೂರು ನೀಡಿದ್ದಾರೆ. ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿದೆ.
‘ರಾಮಚಂದ್ರಯ್ಯ ಪಂಚಾಯಿತಿಯ ಗ್ರಂಥಾಲಯದಲ್ಲಿ ಮೇಲ್ವಿಚಾರಕರಾಗಿ (ಅರೆಕಾಲಿಕ) ಕೆಲಸ ಮಾಡುತ್ತಿದ್ದರು. ಮೂರು ತಿಂಗಳಿಂದ ಗೀತಾಮಣಿ ಅವರು ರಾಮಚಂದ್ರಯ್ಯ ಅವರಿಗೆ ಸಂಬಳ ನೀಡಿರಲಿಲ್ಲ. ಹಾಜರಾತಿ ತೋರಿಸಲು ಬಯೋಮೆಟ್ರಿಕ್ ನೀಡದೇ ತೊಂದರೆ ನೀಡಿದ್ದರು. ಕೆಲಸಕ್ಕೆ ಬೇಡವೆಂದೂ ಹೇಳಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮತದಾನದ ಹಕ್ಕನ್ನು ಚುನಾವಣಾ ಆಯೋಗ ರಕ್ಷಿಸುತ್ತಿದೆಯೇ?
ಪಿಡಿಒ ವರ್ತನೆ ಖಂಡಿಸಿ ಹಾಗೂ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬುಧವಾರ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸುವುದಾಗಿ ಗ್ರಂಥಾಲಯ ಮೇಲ್ವಿಚಾರಕರ ಸಂಘದ ಜಿಲ್ಲಾ ಅಧ್ಯಕ್ಷೆ ಶಾರದಮ್ಮ ತಿಳಿಸಿದ್ದಾರೆ.
ಇತ್ತೀಚಿಗೆ ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮಳಖೇಡ ಗ್ರಂಥಾಲಯದ ಮೇಲ್ವಿಚಾರಕಿ ಭಾಗ್ಯವತಿ ವಿಶ್ವೇಶ್ವರಯ್ಯ ಎಂಬುವವರು ಮೂರು ತಿಂಗಳಿಂದ ಸಂಬಳ ಪಾವತಿಯಾಗದೇ ಹತಾಶರಾಗಿ, ಗ್ರಂಥಾಲಯದ ಫ್ಯಾನ್ಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಅಧಿಕಾರಿಗಳ ಸತಾಯಿಸುವಿಕೆ, ಸಂಬಳ ವಿಳಂಬದಿಂದ ಮಾನಸಿಕ ಒತ್ತಡಕ್ಕೊಳಗಾದ ಅವರು, ಮಗಳ ಶಾಲಾ ಶುಲ್ಕ ಕಟ್ಟಲು ಸಾಧ್ಯವಾಗದೆ ತೊಂದರೆ ಅನುಭವಿಸಿದ್ದರು. ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮಾಡಿದ ಮನವಿ ಫಲಕಾರಿಯಾಗದ ಕಾರಣ, ಆತ್ಶಹತ್ಯೆಗೆ ಶರಣಾಗಿದ್ದರು. ಇಂಥ ಘಟನೆಗಳು ಗ್ರಂಥಾಲಯ ಇಲಾಖೆಯ ಅವ್ಯವಸ್ಥೆ, ಅಧಿಕಾರಿಗಳ ಬೇಜವಾಬ್ದಾರಿತನವನ್ನು ಬಯಲಿಗೆಳೆಯುತ್ತವೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.





