ಮಕ್ಕಳ ಭಿಕ್ಷಾಟನೆ ತಡೆದು ಅವರ ಪುನರ್ವಸತಿಗೆ ಸಮಗ್ರ ಕ್ರಿಯಾ ಯೋಜನೆ ರೂಪಿಸಲು ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಲು ನೋಡಲ್ ಅಧಿಕಾರಿಯೊಬ್ಬರನ್ನು ನೇಮಕ ಮಾಡಬೇಕೆಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳನ್ನು ಗುರುತಿಸಿ, ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ʼಲೆಟ್ಸ್ ಕಿಟ್ ಫೌಂಢಷನ್ʼ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾ.ಸಿ ಎಂ ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ವಾದ ಆಲಿಸಿದ ನ್ಯಾಯಪೀಠ, ಜಿಬಿಎ ಸೇರಿದಂತೆ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯಿತಿಗಳಲ್ಲಿ ಸಂಗ್ರಹಿಸಲಾಗಿರುವ ಒಟ್ಟು ಭಿಕ್ಷುಕರ ಸೆಸ್, ಅದರಲ್ಲಿ ಕೇಂದ್ರ ಪರಿಹಾರ ಸಮಿತಿಗೆ ಪಾವತಿಸಲಾದ ಮೊತ್ತ, ಬಾಕಿ ಉಳಿದ ಮೊತ್ತದ ಬಗ್ಗೆ ವಸ್ತುಸ್ಥಿತಿ ವರದಿ ನೀಡುವಂತೆ ರಾಜ್ಯ ಸರ್ಕಾರ ಹಾಗೂ ಜಿಬಿಎಗೆ ನಿರ್ದೇಶನ ನೀಡಿದೆ. ಅದೇ ರೀತಿ ಮಕ್ಕಳ ಭಿಕ್ಷಾಟನೆ ನಿರ್ಮೂಲನೆ ಮತ್ತು ಅವರ ಪುನರ್ವಸತಿಗೆ 6 ವಾರಗಳಲ್ಲಿ ಸಮಗ್ರ ಕ್ರಿಯಾ ಯೋಜನೆ ರೂಪಿಸಬೇಕು. ಕ್ರಿಯಾ ಯೋಜನೆ ರೂಪಿಸಲು ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಲು ನೋಡಲ್ ಅಧಿಕಾರಿಯೊಬ್ಬರನ್ನು ನೇಮಕ ಮಾಡುವಂತೆ ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಏಪ್ರಿಲ್ 1ಕ್ಕೆ ಮುಂದೂಡಿತು.
ವಿಚಾರಣೆ ವೇಳೆ ಭಿಕ್ಷುಕರ ಸೆಸ್ ಸಂಗ್ರಹಣೆ ಸಂಬಂಧ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಲೆಕ್ಕಾಧಿಕಾರಿ ಸಲ್ಲಿಸಿರುವ ಪ್ರಮಾಣಪತ್ರವನ್ನು ಹೆಚ್ಚುವರಿ ಅಡ್ವೊಕೇಟ್ ಜನರಲ್ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಅದರಂತೆ ಜಿಬಿಎ ವ್ಯಾಪ್ತಿಯಲ್ಲಿ 2024-25ರಲ್ಲಿ 86.26 ಕೋಟಿ ರೂಪಾಯಿ ಭಿಕ್ಷುಕರ ಸೆಸ್ ಸಂಗ್ರಹ ಮಾಡಲಾಗಿದ್ದು, ಅದರಲ್ಲಿ 10.32 ಕೋಟಿ. ರೂ.ಗಳನ್ನು ಕೇಂದ್ರ ಪರಿಹಾರ ಸಮಿತಿ(ಸಿಆರ್ಸಿ)ಗೆ ಪಾವತಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಇಲ್ಲಿಯವರೆಗೆ 73.12 ಕೋಟಿ ರೂಪಾಯಿ ಸಂಗ್ರಹಿಸಲಾಗಿದೆ. ಈಗ ಜಿಬಿಎ ವ್ಯಾಪ್ತಿಯಲ್ಲಿ 5 ಹೊಸ ಪಾಲಿಕೆಗಳಾಗಿದ್ದು, ಕಳೆದ ವರ್ಷದ ಬಾಕಿ 75 ಕೋಟಿ ರೂ. ಹಾಗೂ ಈ ವರ್ಷದ ಭಿಕ್ಷುಕರ ಸೆಸ್ ಪಾಲನ್ನು 2026ರ ಮಾರ್ಚ್ 31ರೊಳಗೆ ಕೇಂದ್ರ ಪರಿಹಾರ ಸಮಿತಿಗೆ ಪಾವತಿಸುವಂತೆ ಆಯಾ ಪಾಲಿಕೆಗೆಗಳ ಆಯುಕ್ತರಿಗೆ ನಿರ್ದೇಶನ ನೀಡಿರುವುದಾಗಿ ತಿಳಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ‘ಗೋ ಬ್ಯಾಕ್ ಗವರ್ನರ್ ಗೋ ಬ್ಯಾಕ್’ – ಕೇಂದ್ರ ಸರ್ಕಾರ ಹಾಗೂ ರಾಜ್ಯಪಾಲರ ವಿರುದ್ಧ ಪ್ರತಿಭಟನೆ
ಕಾನೂನು ಸೇವಾ ಪ್ರಾಧಿಕಾರದ ಪರ ವಕೀಲರು, ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಿಂದ ಸಂಗ್ರಹಿಸಲಾದ 40.88 ಕೋಟಿ ರೂ. ಭಿಕ್ಷುಕರ ಸೆಸ್ ಪೌರಾಡಳಿತ ನಿರ್ದೇಶನಾಲಯದಿಂದ ಬರುವುದು ಬಾಕಿ ಇದೆ. ಅದೇ ರೀತಿ ಪಂಚಾಯಿತಿಗಳಲ್ಲಿ ಸಂಗ್ರಹಿಸಲಾದ ಸೆಸ್ ಬಗ್ಗೆ ಗ್ರಾಮೀಣಾಭಿವೃದ್ದಿ ಇಲಾಖೆಯಿಂದ ಮಾಹಿತಿ ಬರಬೇಕಿದೆ. ಪ್ರಾಧಿಕಾರ ನಡೆಸಿದ ಸಮೀಕ್ಷೆಯಲ್ಲಿ ಭಿಕ್ಷಾಟನೆಯಲ್ಲಿ ತೊಡಗಿದ್ದ 720 ಮಕ್ಕಳನ್ನು ಗುರುತಿಸಲಾಗಿದೆ. ಪುನರ್ವಸತಿಗೆ ಕೆಲವು ಶಿಫಾರಸುಗಳನ್ನು ಸೂಚಿಸಲಾಗಿದೆ ಎಂದು ನ್ಯಾಯಾಲಯದ ಗಮನಕ್ಕೆ ತರಲಾಯಿತು.





