ರಾಜ್ಯ ಸರ್ಕಾರ ನಮ್ಮ ಮೇಲೆ ಎಸ್ಮಾ(ESMA: Essential Services Management Act) ಜಾರಿಗೊಳಿಸುವ ಬೆದರಿಕೆ ಹಾಕುತ್ತಿದೆ. ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರತಿಭಟನಾನಿರತರನ್ನು ಬಂಧಿಸುವ ಯೋಜನೆ ರೂಪಿಸುತ್ತಿದೆ. ತಮ್ಮ ಬೇಡಿಕೆಗಳ ಕುರಿತು ಇಂದು ಸಂಜೆಯೊಳಗೆ ಸರ್ಕಾರ ಸಕರಾತ್ಮಕವಾಗಿ ಸ್ಪಂದಿಸದಿದ್ದರೆ ನಾಳೆಯಿಂದ ರಾಜ್ಯದ್ಯಂತ ಬಸ್ ಮುಷ್ಕರ ನಡೆಸಲು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಮುಂದಾಗಿದೆ ಎಂದು ಸಮಿತಿ ಮುಖಂಡ ವಿಜಯ ಭಾಸ್ಕರ್ ಎಚ್ಚರಿಕೆ ನೀಡಿದ್ದಾರೆ.
ಸಾರಿಗೆ ನೌಕರರ ಮುಷ್ಕರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಏನೇ ಆದರೂ ಸರಿ, ಇಂದು ಸಂಜೆ 4 ಗಂಟೆಯೊಳಗೆ ನಮ್ಮ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ, ನಾಳೆಯಿಂದ ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗುವುದು ಎಂದು ಹೇಳಿದರು.
“ಸರ್ಕಾರ ನಮಗೆ ಎಸ್ಮಾ ಅಥವಾ ಜೈಲಿನ ಭಯ ತೋರಿಸಬಾರದು. ನಾವು ಯಾವುದೇ ಬೆದರಿಕೆಗಳಿಗೆ ಜಗ್ಗುವುದಿಲ್ಲ. ನಮ್ಮ ಹಕ್ಕುಗಳಿಗಾಗಿ ಹೋರಾಡಲು ನಾವು ಸನ್ನದ್ದರಾಗಿದ್ದೇವೆ. ನಮ್ಮ ಬಂಧನವಾದರೂ ಹೋರಾಟ ನಿಲ್ಲದು. ನಮ್ಮ ಶ್ರಮದ ಫಲವನ್ನು ಕೇಳಲು ನಾವು ಬೀದಿಗಿಳಿಯುವ ಪರಿಸ್ಥಿತಿ ಬಂದಿರುವುದು ದುರದೃಷ್ಟಕರ” ಎಂದು ಆತಂಕ ವ್ಯಕ್ತಪಡಿಸಿದರು.
ಕಳೆದ 38 ತಿಂಗಳ ವೇತನದ ಹಿಂಬಾಕಿ ಹಣವನ್ನು ತಕ್ಷಣವೇ ಬಿಡುಗಡೆ ಮಾಡಬೇಕು. 2024ರ ಜನವರಿ 1ರಿಂದ ಅನ್ವಯವಾಗುವಂತೆ ನೂತನ ವೇತನ ಶ್ರೇಣಿ ಜಾರಿಗೊಳಿಸಬೇಕು. ರಾಜ್ಯ ಸರ್ಕಾರಿ ನೌಕರರಿಗೆ ಸರಿಸಮಾನವಾದ ವೇತನವನ್ನು ಸಾರಿಗೆ ನೌಕರರಿಗೂ ನೀಡಬೇಕು. ಕೆಲಸದ ಅವಧಿಯಲ್ಲಿ ಅಧಿಕಾರಿಗಳಿಂದ ಕಾರ್ಮಿಕರಿಗೆ ನೀಡಲಾಗುವ ಕಿರುಕುಳವನ್ನು ಕೂಡಲೇ ನಿಲ್ಲಿಸಬೇಕು. ಈ ಬಗ್ಗೆ ಇಂದು ಸಂಜೆಯೊಳಗೆ ಸರ್ಕಾರ ಒಂದು ನಿರ್ಧಾರಕ್ಕೆ ಬರಬೇಕಿದೆ. ಇಲ್ಲವಾದಲ್ಲಿ ನಾಳೆಯಿಂದ ಇಡೀ ಸಾರಿಗೆ ಸಂಸ್ಥೆ ನೌಕರರು ಬಸ್ ಏರುವುದಿಲ್ಲ” ಎಂದು ಎಚ್ಚರಿಕೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಾರಿಗೆ ನೌಕರರ ಮುಷ್ಕರ: ಬೇಡಿಕೆಗಳು ಈಡೇರದಿದ್ದರೆ ಹೋರಾಟ ಮುನ್ನಡೆಸುವ ಎಚ್ಚರಿಕೆ
ಒಂದು ವೇಳೆ ಮುಷ್ಕರ ಆರಂಭವಾದರೆ, ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ.





