ಭಾಲ್ಕಿ ತಾಲೂಕಿನ ಬಾಳೂರ ಗ್ರಾಮದ ವಿದ್ಯಾಭಾರತಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಉದ್ಘಾಟನೆ, ಶಾಲಾ ವಾರ್ಷಿಕೋತ್ಸವ ಹಾಗೂ ಭಗವಾನ್ ಬುದ್ಧ ಪ್ರತಿಮೆ ಅನಾವರಣ ಸಮಾರಂಭವನ್ನು ನಾಳೆ ಶಾಲೆಯ ಆವರಣದಲ್ಲಿ ನಡೆಯಲಿದೆ.
ಅಂದು ಬೆಳಿಗ್ಗೆ 11 ಗಂಟೆಗೆ ಗ್ರಾಮದಲ್ಲಿ ಭಗವಾನ್ ಗೌತಮ ಬುದ್ಧರ ಪ್ರತಿಮೆಯೊಂದಿಗೆ ಭವ್ಯ ಮೆರವಣಿಗೆ ನಡೆಯಲಿದ್ದು, ಮಧ್ಯಾಹ್ನ 12.30 ಗಂಟೆಗೆ ವೇದಿಕೆ ಕಾರ್ಯಕ್ರಮ ಜರುಗಲಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಡಾ.ಕಾಶಿನಾತ ಚೆಲ್ವಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಣದೂರ ಬುದ್ಧ ವಿಹಾರದ ಭಂತೆ ವರಜ್ಯೋತಿ, ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಸಾನಿಧ್ಯ ವಹಿಸಲಿದ್ದಾರೆ. ನೂತನ ಶಾಲಾ ಕಟ್ಟಡದ ಉದ್ಘಾಟನೆಯನ್ನು ಅರಣ್ಯ, ಪರಿಸರ, ಜೀವಿಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ನೆರವೇರಿಸಲಿದ್ದಾರೆ.
ಗೌತಮ ಬುದ್ಧ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಕಾಶಿನಾಥ ಚೆಲ್ವಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೀದರ್ ಸಂಸದರಾದ ಸಾಗರ ಖಂಡ್ರೆ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ಬಿ. ನಾರಾಯಣರಾವ್, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬೀಳಿಮಲೆ, ಕಾರ್ಯದರ್ಶಿ ಪ್ರಕಾಶ ಮತ್ತಿಹಳ್ಳಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಭಾಗವಹಿಸಲಿದ್ದಾರೆ.
ಸಮಾರಂಭದಲ್ಲಿ ಕಾಂಗ್ರೆಸ್ ಮುಖಂಡರಾದ ದಶರಥ ದೊಡ್ಡಿ, ಬಸವರಾಜ ಬುಳ್ಳಾ, ಬಕ್ಕಪ್ಪ ಕೋಟೆ, ಶಿವರಾಜ ಹಾಸನಕರ್ ಹಾಗೂ ನ್ಯಾಯವಾದಿ ಬಾಪುರಾವ ದೇಶಮುಖ, ಬಾಳೂರ ಗ್ರಾಮ ಪಂಚಾಯತ್ ಅಧ್ಯಕ್ಷೆ ಲಕ್ಷ್ಮೀಬಾಯಿ ಚೆಲ್ವಾ, ಮಾಜಿ ಉಪಾಧ್ಯಕ್ಷ ಸಿದ್ರಾಮ ದೇಶಮುಖ ಸೇರಿದಂತೆ ವಿವಿಧ ಸಮಾಜದ ಗಣ್ಯರು, ಮುಖಂಡರು, ಅಧಿಕಾರಿಗಳು, ಸಾಮಾಜಿಕ ಚಿಂತಕರು ಪಾಲ್ಗೊಳ್ಳಲಿದ್ದಾರೆ.
ಇದನ್ನೂ ಓದಿ : ಬೀದರ್ | ವಿದ್ಯುತ್ ಶಾರ್ಟ್ ಸರ್ಕೀಟ್ : 4 ಎಕರೆ ಕಬ್ಬು ಬೆಂಕಿಗಾಹುತಿ, ಪರಿಹಾರಕ್ಕೆ ಮನವಿ
ಬಳಿಕ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ವಿಶೇಷ ಸನ್ಮಾನ, ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದ್ದಾರೆ.





