ಭಾಲ್ಕಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದ್ದು ಕೂಡಲೇ ನಿಷೇಧಿಸಬೇಕು ಎಂದು ನಮ್ಮ ಕರ್ನಾಟಕ ಸೇನೆಯ ಪದಾಧಿಕಾರಿಗಳು ಒತ್ತಾಯಿಸಿದರು.
ಭಾಲ್ಕಿ ಅಬಕಾರಿ ನಿರೀಕ್ಷಕರ ಕಚೇರಿಯಲ್ಲಿ ಮಂಗಳವಾರ ನಮ್ಮ ಕರ್ನಾಟಕ ಸೇನೆಯ ಜಿಲ್ಲಾಧ್ಯಕ್ಷ ಗಣೇಶ ಪಾಟೀಲ್ ನೇತೃತ್ವದಲ್ಲಿ ಅಬಕಾರಿ ನಿರೀಕ್ಷಕರಿಗೆ ಮನವಿ ಪತ್ರ ಸಲ್ಲಿಸಿದರು.
ʼತಾಲೂಕಿನಲ್ಲಿ ಅಕ್ರಮ ಮದ್ಯ ಮಾರಾಟ ಮಿತಿಮೀರಿದೆ. ಕಿರಣಾ ಅಂಗಡಿ, ಪಾನ್ಶಾಪ್, ಹೊಟೇಲ್ ಸೇರಿ ಎಲ್ಲೆಂದರಲ್ಲಿ ರಾಜರೋಷವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಇದರಿಂದ ಬಡ ಜನರ ಕುಟುಂಬ ಬೀದಿಗೆ ಬರುವಂತಾಗಿದೆ. ಯುವಕರು ಕುಡಿತದ ಚಟಕ್ಕೆ ಬಲಿಯಾಗಿ ತಮ್ಮ ಅಮೂಲ್ಯ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆʼ ಎಂದರು.
ʼಅಕ್ರಮ ಮದ್ಯ ಮಾರಾಟ ನಿಷೇಧಿಸುವಂತೆ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಈಗಾಗಲೇ ಎರಡ್ಮೂರು ಸಲ ಮನವಿ ಪತ್ರ ಸಲ್ಲಿಸಲಾಗಿದೆ. ಆದರೆ ಯಾವುದೇ ರೀತಿಯ ಪ್ರಯೋಜನವಾಗಿಲ್ಲ. ಇನ್ನಾದರೂ ಎಚ್ಚೆತ್ತುಕೊಂಡು ತಕ್ಷಣದಿಂದಲೇ ಗ್ರಾಮೀಣ ಭಾಗದಲ್ಲಿ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿರುವ ಮದ್ಯ ಸಂಪೂರ್ಣವಾಗಿ ಬಂದ್ ಮಾಡಿಸಬೇಕು. ಒಂದು ಅಬಕಾರಿ ಇಲಾಖೆ ನಿರ್ಲಕ್ಷ್ಯ ವಹಿಸಿದ್ದರೇ ಉಗ್ರ ಹೋರಾಟ ಮಾಡಬೇಕಾಗುತ್ತದೆʼ ಎಂದು ಎಚ್ಚರಿಸಿದರು.
ನಮ್ಮ ಕರ್ನಾಟಕ ಸೇನೆಯ ಜಿಲ್ಲಾ ಘಟಕದ ಯುವ ಅಧ್ಯಕ್ಷ ಸುದೀಪ ತೂಗಾವೆ, ತಾಲೂಕು ಅಧ್ಯಕ್ಷ ಬಸವರಾಜ ಕಾರಬಾರಿ, ಉಪಾಧ್ಯಕ್ಷ ಜಗದೀಶ ಪಾಟೀಲ್, ಪ್ರಮುಖರಾದ ಭದ್ರಯ್ಯ ಸ್ವಾಂಇ, ದತ್ತಾತ್ರಿ ಜಗತಾಪ, ಮಹೇಶ ರಾಚೋಟೆ, ಲೋಕೇಶ ಚಿಂಚೋಳೆ, ಸಾಗರ ಸ್ವಾಮಿ, ಪ್ರಶಾಂತ ಹಣಮಶೆಟ್ಟಿ, ಬಾಲಾಜಿ ಮೇಘೆ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ : ಯಾದಗಿರಿ ನೂತನ ಡಿಸಿಯಾಗಿ ಭೋಯರ್ ಹರ್ಷಲ್; ಕೆಕೆಆರ್ಟಿಸಿ ನಿರ್ದೇಶಕರಾಗಿ ಡಾ.ಸುಶೀಲಾ ಬಿ. ನೇಮಕ





